ಕ್ರಿಸ್ತದನಿ
ಇದು ನಮ್ಮ ನಿಮ್ಮೆಲ್ಲರ ದೈನಂದಿನ ಆಧ್ಯಾತ್ಮಕ್ಕೆ ಪೂರಕವಾಗಲೆಂಬ ಆಶಯದೊಂದಿಗೆ ರೂಪುಗೊಂಡಿದೆ. 'ಕ್ರಿಸ್ತದನಿ' ಯೂಟ್ಯೂಬ್ ಚಾನಲ್ನಲ್ಲಿ ಕಥೋಲಿಕ ಕ್ರೈಸ್ತರು ಪ್ರತಿನಿತ್ಯ ಮಾಡುವಂತಹ ಪ್ರಾರ್ಥನೆಗಳು, ಪ್ರತಿದಿನದ ಬಲಿಪೂಜೆಯ ವಾಚನಗಳ ಆಧಾರಿತ ಪ್ರಬುದ್ಧ ಚಿಂತನೆಗಳು, ಜಪಸರ, ಶಿಲುಬೆಹಾದಿ, ಆರಾಧನೆ, ಕ್ರೈಸ್ತ ಧಾರ್ಮಿಕ ಭಕ್ತಿಗೀತೆಗಳು ಮುಂತಾದವು ಇವೆ. ಇವೆಲ್ಲವೂ ನಮ್ಮ ಆಧ್ಯಾತ್ಮಿಕ ಪ್ರಯಾಣದಲ್ಲಿ ನೆರವಾಗಲೆಂಬುದೇ ನಮ್ಮ ಆಶಯ. ಇವನ್ನು ಕ್ರೋಢೀಕರಿಸಿ ಯೂಟ್ಯೂಬ್ ಚಾನಲ್ನಲ್ಲಿ ಪ್ರಸ್ತುತಪಡಿಸುವ ಪ್ರಯತ್ನ ಕನ್ನಡ ಕಥೋಲಿಕ ಧರ್ಮಸಭೆಗೆ ಹೊಸದು. ಕ್ರಿಸ್ತನ ನುಡಿಗೆ ಉತ್ಕೃಷ್ಟ ದನಿಯಾಗುವ ಪ್ರಯತ್ನದ ಫಲವಿದು. ಇದನ್ನು ಬಳಸುತ್ತಾ ಉತ್ತಮವಾಗಿಸುವ ಯತ್ನದಲ್ಲಿ ನಿಮ್ಮ ಅನಿಸಿಕೆಗಳು ನಮಗೆ ಉತ್ತೇಜನಕಾರಿ. ನಿಮ್ಮ ಅಭಿಪ್ರಾಯಗಳನ್ನು ನಮಗೆ ಮುಕ್ತವಾಗಿ ತಿಳಿಸಿ ಕ್ರಿಸ್ತದನಿಯ ಉತ್ತಮಿಕೆಯಲ್ಲಿ ನೆರವಾಗಿರಿ.
Disclaimer: The content mentioned in this You Tube is only for religious purpose and we do not have any trade or business intention. We are not the real owners of all the contents, and it is only compilation of religious contents from different sources for the benefit of people. For any copyright issues, contact - kristadani2311@gmail.com


Krista Dani

17-09-26
ಸೆಪ್ಟೆಂಬರ್ - 17 - ಗುರುವಾರ

ಪವಿತ್ರ ಬೈಬಲ್ ದಿನಚರಿ
ಸಾಧಾರಣ ಕಾಲದ ಇಪ್ಪತ್ತನಾಲ್ಕನೇ ವಾರ
ಪೂಜಾವಿಧಿ ವರ್ಷ- 2
ಕೀರ್ತನಾ ಮಂಜರಿ: ವಾರ 4
ಪೂಜಾವಸ್ತ್ರ: ಹಸಿರು

ಸಂತ ರಾಬರ್ಟ್ ಬೆಲ್ಲಾರ್ಮಿನ (ಧರ್ಮಾಧ್ಯಕ್ಷ / ಧರ್ಮಪಂಡಿತ) (ಸ್ಮರಣೆ)

ದೈವವಾಕ್ಯದ ವಿಧಿ

ಮೊದಲನೆಯ ವಾಚನ
ಕೊರಿಂಥಿಯರಿಗೆ ಬರೆದ ಮೊದಲನೆಯ ಪತ್ರದಿಂದ ಇಂದಿನ ವಾಚನ 15: 1-11

"ನಾವು ಸಾರುವ ಸಂದೇಶ ಒಂದೇ. ಅದನ್ನು ನೀವು ನಂಬಿದ್ದೀರಿ."

ಪ್ರಿಯ ಸಹೋದರರೇ, ನಾನು ನಿಮಗೆ ಬೋಧಿಸಿದ ಶುಭಸಂದೇಶವನ್ನು ನೆನಪಿಗೆ ತಂದುಕೊಳ್ಳಿರಿ. ನೀವು ಅದನ್ನು ಸ್ವೀಕರಿಸಿದ್ದೀರಿ. ಅದರಲ್ಲಿ ನೆಲೆಯಾಗಿ ನಿಂತಿದ್ದೀರಿ. ನಾನು ನಿಮಗೆ ಶುಭಸಂದೇಶವೆಂದು ತಿಳಿಸಿದ ಸಂಗತಿಯನ್ನು ದೃಢವಾಗಿ ವಿಶ್ವಾಸಿಸಿದರೆ ನೀವು ಜೀವೋದ್ಧಾರವನ್ನು ಪಡೆಯುವಿರಿ. ಇಲ್ಲವಾದರೆ ನಿಮ್ಮ ವಿಶ್ವಾಸ ನಿರರ್ಥಕವಾದೀತು. ನಾನು ಪಡೆದುಕೊಂಡದ್ದನ್ನು ಮುಖ್ಯವಾದುದು ಎಂದೆಣಿಸಿ ನಿಮಗೆ ಒಪ್ಪಿಸಿದ್ದೇನೆ. ಅದು ಯಾವುದೆಂದರೆ, ಪವಿತ್ರ ಗ್ರಂಥದಲ್ಲಿ ಹೇಳಿರುವ ಪ್ರಕಾರ ಕ್ರಿಸ್ತ ಯೇಸು ನಮ್ಮ ಪಾಪಗಳ ಪರಿಹಾರಕ್ಕಾಗಿ ಪ್ರಾಣತ್ಯಾಗ ಮಾಡಿದರು. ಅವರನ್ನು ಭೂಸ್ಥಾಪನೆ ಮಾಡಲಾಯಿತು. ಅದೇ ಗ್ರಂಥದ ಪ್ರಕಾರ ಮೂರನೆಯ ದಿನ ಅವರು ಪುನರುತ್ಥಾನ ಹೊಂದಿದರು. ಅನಂತರ ಕೇಫನಿಗೂ ಹನ್ನೆರಡು ಮಂದಿಗೂ ಕಾಣಿಸಿಕೊಂಡರು. ತರುವಾಯ ಒಂದೇ ಸಮಯದಲ್ಲಿ ಐನೂರಕ್ಕೂ ಹೆಚ್ಚಿನ ಮಂದಿ ಸಹೋದರರಿಗೆ ಪ್ರತ್ಯಕ್ಷರಾದರು. ಅವರಲ್ಲಿ ಕೆಲವರು ಸತ್ತುಹೋಗಿದ್ದರೂ ಬಹು ಮಂದಿ ಇಂದಿಗೂ ಬದುಕಿದ್ದಾರೆ. ಅದಾದ ಮೇಲೆ ಯಕೋಬನಿಗೂ ಅನಂತರ ಪ್ರೇಷಿತರೆಲ್ಲರಿಗೂ ಕಾಣಿಸಿಕೊಂಡರು. ಕಟ್ಟಕಡೆಗೆ ದಿನ ತುಂಬುವ ಮೊದಲೇ ಹುಟ್ಟಿದವನಂತಿರುವ ನನಗೂ ಕಾಣಿಸಿಕೊಂಡರು. ನಾನಾದರೋ ಪ್ರೇಷಿತರಲ್ಲಿ ಕನಿಷ್ಠನು, ಪ್ರೇಷಿತನೆಂಬ ಹೆಸರಿಗೂ ಅಪಾತ್ರನು. ಏಕೆಂದರೆ, ನಾನು ದೇವರ ಸಭೆಯನ್ನು ಹಿಂಸಿಸಿದೆನು. ನಾನು ಈಗ ಈ ಸ್ಥಿತಿಯಲ್ಲಿ ಇರುವುದು ದೇವರ ಅನುಗ್ರಹದಿಂದಲೇ. ಅವರ ಅನುಗ್ರಹ ನನ್ನಲ್ಲಿ ವ್ಯರ್ಥವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚು ಶ್ರಮಪಟ್ಟು ಸೇವೆಮಾಡಿದ್ದೇನೆ. ಅದನ್ನು ಮಾಡಿದವನು ನಾನಲ್ಲ, ನನ್ನಲ್ಲಿರುವ ದೇವರ ಅನುಗ್ರಹವೇ, ನಾನಾದರೇನು, ಅವರಾದರೇನು? ನಾವು ಸಾರುವ ಸಂದೇಶ ಒಂದೇ, ಅದನ್ನು ನೀವು ನಂಬಿದ್ದೀರಿ.

ಪ್ರಭುವಿನ ವಾಕ್ಯ
ದೇವರಿಗೆ ಕೃತಜ್ಞತೆ ಸಲ್ಲಲಿ

ಕೀರ್ತನೆ 118: 1-2, 15-17, 27, 28, 21. v. 1
ಶ್ಲೋಕ: ಸಲ್ಲಿಸಿ ಪ್ರಭುವಿಗೆ ಧನ್ಯವಾದ, ಆತ ಒಳ್ಳೆಯವ, ಆತನ ಪ್ರೀತಿ ಶಾಶ್ವತ.

1. ಸಲ್ಲಿಸಿ ನೀವೆಲ್ಲ ಪ್ರಭುವಿಗೆ ಧನ್ಯವಾದ
ಆತ ಒಳ್ಳೆಯವ, ಆತನ ಪ್ರೀತಿ ಶಾಶ್ವತ
ಸಾರಲಿ ಇಸ್ರಯೇಲಿನ ಜನತೆ
ಆತನ ಪ್ರೀತಿ ಶಾಶ್ವತ ಎಂದೆ
ಶ್ಲೋಕ

2. ಪರಾಕ್ರಮ, ಪ್ರದರ್ಶನ ಪ್ರಭುವಿನ ಬಲಗೈಯಿಂದ
ವಿಜಯ ಸಾಧನ ಪ್ರಭುವಿನ ಬಲಗೈಯಿಂದ
ಸಾಯೆನು, ಜೀವದಿಂದಿರುವೆನು ನಾನು
ಪ್ರಭುವಿನ ಕಾರ್ಯಗಳನು ಸಾರುವೆನು
ಶ್ಲೋಕ

3. ಪ್ರಭುವೇ ದೇವನು, ನಮ್ಮ ಮೇಲೆ
ಜ್ಯೋತಿಯನು ಬೆಳಗಿದವನು
ಸಲ್ಲಿಸಿ ನೀವೆಲ್ಲ ಪ್ರಭುವಿಗೆ ಧನ್ಯವಾದ
ಸದುತ್ತರ ಪಾಲಿಸಿದ ಪ್ರಭೂ, ನಿನಗೆ ವಂದನೆ
ಉದ್ಧಾರಮಾಡಿದೆ, ನಿನಗೆ ಕೃತಜ್ಞತಾವಂದನೆ
ಶ್ಲೋಕ

ಘೋಷಣೆ (ಮತ್ತಾಯ 11: 25)
ಅಲ್ಲೆಲೂಯ, ಅಲ್ಲೆಲೂಯ.
ಪಿತನೇ, ಭೂಸ್ವರ್ಗಗಳ ಒಡೆಯನೇ, ಈ ವಿಷಯಗಳನ್ನು ಮಕ್ಕಳಂತವರಿಗೆ ನೀವು ಶ್ರುತಪಡಿಸಿದ್ದೀರಿ ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ.
ಅಲ್ಲೆಲೂಯ.

ಶುಭಸಂದೇಶ
ಲೂಕನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 7: 36-50
ಪ್ರಭೂ, ನಿಮಗೆ ಮಹಿಮೆ ಸಲ್ಲಲಿ

"ಈಕೆ ಮಾಡಿದ ಪಾಪಗಳು ಅಪಾರವಾದರೂ ಅವನ್ನು ಕ್ಷಮಿಸಲಾಗಿದೆ. ಇದಕ್ಕೆ ಈಕೆ ತೋರಿಸಿರುವ ಅಧಿಕವಾದ ಪ್ರೀತಿಯೇ ಸಾಕ್ಷಿ."

ಆ ಕಾಲದಲ್ಲಿ ಒಬ್ಬ ಫರಿಸಾಯನು ಯೇಸುವನ್ನು ಊಟಕ್ಕೆ ಆಹ್ವಾನಿಸಿದನು. ಯೇಸು ಅವನ ಮನೆಗೆ ಹೋಗಿ ಊಟಕ್ಕೆ ಕುಳಿತರು. ಅದೇ ಊರಿನಲ್ಲಿ ಪತಿತೆಯೊಬ್ಬಳು ಇದ್ದಳು. ಆಕೆ, ಫರಿಸಾಯನ ಮನೆಯಲ್ಲಿ ಯೇಸು ಊಟಕ್ಕೆ ಕುಳಿತಿದ್ದಾರೆಂದು ಕೇಳಿ ಒಂದು ಅಮೃತ ಶಿಲೆಯ ಭರಣಿ ತುಂಬ ಸುಗಂಧ ತೈಲವನ್ನು ತೆಗೆದುಕೊಂಡು ಅಲ್ಲಿಗೆ ಬಂದಳು. ಅವಳು ಯೇಸುವಿನ ಹಿಂಬದಿಯಲ್ಲಿ ಅಳುತ್ತಾ ನಿಂತು, ತನ್ನ ಕಂಬನಿಯಿಂದ ಅವರ ಪಾದಗಳನ್ನು ತೊಳೆದು ತಲೆ ಕೂದಲಿನಿಂದ ಒರಸಿ, ಆ ಪಾದಗಳಿಗೆ ಮುತ್ತಿಟ್ಟು, ಸುಗಂಧ ತೈಲವನ್ನು ಹಚ್ಚಿದಳು. ಯೇಸುವನ್ನು ಆಹ್ವಾನಿಸಿದ ಫರಿಸಾಯನು ಇದನ್ನು ನೋಡಿ, ‘ಇವನು ನಿಜವಾಗಿಯೂ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿರುವ ಇವಳು ಯಾರು, ಎಂಥಾ ಪತಿತಳು, ಎಂದು ತಿಳಿದುಕೊಳ್ಳುತ್ತಿದ್ದನು' ಎಂದು ತನ್ನೊಳಗೇ ಅಂದುಕೊಂಡನು. ಅದಕ್ಕೆ ಯೇಸು, “ಸಿಮೋನ್, ನಾನು ನಿನಗೆ ಹೇಳಬೇಕಾದ ವಿಷಯ ಒಂದಿದೆ,” ಎಂದರು. ಸಿಮೋನನು, “ಅದೇನು ಹೇಳಿ ಗುರುವೇ,” ಎಂದನು. ಆಗ ಯೇಸು, “ಒಬ್ಬ ಸಾಲಿಗನಿಗೆ ಇಬ್ಬರು ಸಾಲಗಾರರಿದ್ದರು. ಒಬ್ಬನು ಐನೂರು, ಇನ್ನೊಬ್ಬನು ಐವತ್ತು ಬೆಳ್ಳಿ ನಾಣ್ಯಗಳನ್ನು ಅವನಿಗೆ ಸಾಲ ಕೊಡಬೇಕಾಗಿತ್ತು. ಆ ಇಬ್ಬರಿಗೂ ಸಾಲ ತೀರಿಸಲು ಸಾಧ್ಯವಾಗಲಿಲ್ಲ. ಸಾಲಿಗನು ಇಬ್ಬರ ಸಾಲವನ್ನು ಮನ್ನಾ ಮಾಡಿದನು. ಈಗ ಹೇಳು, ಈ ಇಬ್ಬರಲ್ಲಿ ಯಾರಿಗೆ ಆ ಸಾಲಿಗನ ಮೇಲೆ ಹೆಚ್ಚು ಪ್ರೀತಿ?” ಎಂದು ಕೇಳಿದರು. ಅದಕ್ಕೆ ಸಿಮೋನನು, “ಯಾರು ಹೆಚ್ಚು ಸಾಲದಿಂದ ಬಿಡುಗಡೆ ಹೊಂದಿದ್ದಾನೋ ಅವನೇ ಎಂದು ತೋರುತ್ತದೆ,” ಎಂದನು. “ಸರಿಯಾಗಿ ಹೇಳಿದೆ,” ಎಂದರು ಯೇಸು. ಅನಂತರ ಆ ಮಹಿಳೆಯ ಕಡೆ ತಿರುಗಿ ಸಿಮೋನನಿಗೆ, “ಈಕೆಯನ್ನು ನೋಡಿದೆಯಾ? ನಾನು ನಿನ್ನ ಮನೆಗೆ ಬಂದಾಗ ನೀನು ನನ್ನ ಕಾಲಿಗೆ ನೀರು ಕೊಡಲಿಲ್ಲ; ಈಕೆಯಾದರೋ ನನ್ನ ಪಾದಗಳನ್ನು ತನ್ನ ಕಣ್ಣೀರಿನಿಂದ ತೊಳೆದು ತಲೆಗೂದಲಿನಿಂದ ಒರೆಸಿರುವಳು. ನೀನು ನನಗೆ ಮುತ್ತಿಟ್ಟು ಸ್ವಾಗತಿಸಲಿಲ್ಲ; ಆದರೆ ಈಕೆ ಒಳಗೆ ಬಂದಾಗಿನಿಂದ ನನ್ನ ಪಾದಗಳಿಗೆ ಮುತ್ತಿಡುವುದನ್ನು ನಿಲ್ಲಿಸಿಲ್ಲ; ನನ್ನ ತಲೆಗೆ ನೀನು ಎಣ್ಣೆ ಹಚ್ಚಲಿಲ್ಲ; ಈಕೆಯೋ ನನ್ನ ಪಾದಗಳಿಗೆ ಸುಗಂಧ ತೈಲವನ್ನು ಹಚ್ಚಿರುವಳು. ಆದ್ದರಿಂದ ನಾನು ನಿನಗೆ ಹೇಳುವುದೇನೆಂದರೆ, ಈಕೆ ಮಾಡಿದ ಪಾಪಗಳು ಅಪಾರವಾದರೂ ಅವನ್ನು ಕ್ಷಮಿಸಲಾಗಿದೆ; ಇದಕ್ಕೆ ಈಕೆ ತೋರಿಸಿರುವ ಅಧಿಕವಾದ ಪ್ರೀತಿಯೇ ಸಾಕ್ಷಿ. ಕಡಿಮೆ ಕ್ಷಮೆ ಪಡೆದವನು ಕಡಿಮೆ ಪ್ರೀತಿ ತೋರಿಸುತ್ತಾನೆ," ಎಂದರು. ಆನಂತರ ಯೇಸು ಆ ಮಹಿಳೆಗೆ; "ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ," ಎಂದರು. ಜೊತೆಯಲ್ಲಿ ಊಟಕ್ಕೆ ಕುಳಿತಿದ್ದವರು ಇದನ್ನು ಕೇಳಿ, ಪಾಪಗಳನ್ನು ಕೂಡ ಕ್ಷಮಿಸುವ ಈತ ಯಾರು? ಎಂದು ತಮ್ಮತಮ್ಮಲ್ಲೇ ಹೇಳಿಕೊಂಡರು. ಯೇಸು ಆಕೆಗೆ, "ನಿನ್ನ ವಿಶ್ವಾಸ ನಿನ್ನನ್ನು ಉದ್ಧಾರ ಮಾಡಿದೆ; ಸಮಾಧಾನದಿಂದ ಹೋಗು," ಎಂದರು.

ಪ್ರಭುಕ್ರಿಸ್ತರ ಶುಭಸಂದೇಶ
ಕ್ರಿಸ್ತರೇ, ನಿಮಗೆ ಸ್ತುತಿ ಸಲ್ಲಲಿ

ಆಮೆನ್

17 hours ago | [YT] | 18

Krista Dani

16-09-26
ಸೆಪ್ಟೆಂಬರ್ - 16 - ಬುಧವಾರ

ಪವಿತ್ರ ಬೈಬಲ್ ದಿನಚರಿ
ಸಾಧಾರಣ ಕಾಲದ ಇಪ್ಪತ್ತನಾಲ್ಕನೇ ವಾರ
ಪೂಜಾವಿಧಿ ವರ್ಷ- 2
ಕೀರ್ತನಾ ಮಂಜರಿ; ವಾರ 4
ಪೂಜಾವಸ್ತ್ರ: ಕೆಂಪು

ಸಂತ ಕೊರ್ನೆಲಿಯಸ್ (ಜಗದ್ಗುರು) ಮತ್ತು ಸಂತ ಸಿಪ್ರಿಯನ್ (ಧರ್ಮಾಧ್ಯಕ್ಷ) (ರಕ್ತಸಾಕ್ಷಿಗಳು) (ಸ್ಮರಣೆ)

ದೈವವಾಕ್ಯದ ವಿಧಿ

ಮೊದಲನೆಯ ವಾಚನ
ಕೊರಿಂಥಿಯರಿಗೆ ಬರೆದ ಮೊದಲನೆಯ ಪತ್ರದಿಂದ ಇಂದಿನ ವಾಚನ 12: 31-13: 13

"ನಿಲ್ಲುವುವು ನಂಬಿಕೆ ನಿರೀಕ್ಷೆ, ಪ್ರೀತಿ, ನೆಲೆಯಾಗಿ; ಈ ಮೂರರಲಿ ಪ್ರೀತಿಯೇ ಪರಮೋನ್ನತ."

ಸಹೋದರರೇ, ಶ್ರೇಷ್ಠವಾದ ವರಗಳನ್ನು ನೀವು ಶ್ರದ್ಧಾಪೂರ್ವಕವಾಗಿ ಅಪೇಕ್ಷಿಸಿರಿ. ನಾನು ನಿಮಗೆ ಇನ್ನೂ ಸರ್ವೋತ್ತಮವಾದ ಮಾರ್ಗವನ್ನು ತೋರಿಸುತ್ತೇನೆ; ಸುರನರರ ನುಡಿಗಳ ನಾನು ಆಡಬಲ್ಲೆನಾದರೂ ಪರಮ ಪ್ರೀತಿಯೊಂದೆನಗಿಲ್ಲದಿರಲು ನಾ ಕೇವಲ ಗಣಗಣಿಸುವ ಘಂಟೆ, ಝಣಝಣಿಸುವ ಜಾಗಟೆ. ಪ್ರವಾದನೆಯ ವರವೆನಗಿರಬಹುದು, ಇರಬಹುದು ನಿಗೂಢ ರಹಸ್ಯಗಳರಿವು ಎಲ್ಲದರ ಪರಿಜ್ಞಾನ, ಪರ್ವತವನ್ನೇ ಕದಲಿಪ ವಿಶ್ವಾಸ ಪ್ರೀತಿಯೊಂದಿಲ್ಲದಿರೆ ನಾ ಶೂನ್ಯ ಸಮಾನ. ನನಗಿರುವುದೆಲ್ಲವನು ನಾ ದಾನಮಾಡೆ, ದೇಹವನೆ ಸಜೀವ ದಹಿಸಲು ನೀಡೆ ನಾನಾಗಿರೆ ಪರಮ ಪ್ರೀತಿ ವಿಹೀನ, ಏನದು ಜೀವನ? ನನಗೇನದು ಪ್ರಯೋಜನ? ಸಹನೆ, ಸೈರಣೆ, ದಯೆದಾಕ್ಷಿಣ್ಯ ಪ್ರೀತಿಯಲ್ಲಿವೆ. ಎಡೆಯಿಲ್ಲ ಅದರಲಿ ಗರ್ವಕೆ, ಮರ್ಮಕೆ, ಮೆರೆತಕೆ, ಮತ್ಸರಕೆ, ಸಿಡುಕಿಗೆ, ಸೊಕ್ಕಿಗೆ, ಸ್ವಾರ್ಥಕ್ಕೆ, ಸೇಡುಗಳ ಎಣಿಕೆಗೆ. ನಲಿಯದು ಪ್ರೀತಿ ಅನೀತಿಯಲಿ, ನಲಿಯದಿರದದು ಸತ್ಯದ ಜಯದಲಿ. ನಂಬುವುದೆಲ್ಲವನು, ನಿರೀಕ್ಷಿಸುವುದೆಲ್ಲವನು, ಸಹಿಸಿಕೊಳ್ಳುವುದು ಸಮಸ್ತವನು ಪ್ರೀತಿಯದೆಂದೂ ಅರಿಯದು ಸೋಲನು. ಅಳಿದು ಹೋಗುವುವು ಭವಿಷ್ಯ ವಾಣಿ, ಗತಿಸಿ ಹೋಗುವುದು ಬಹುಭಾಷಾ ಶಕ್ತಿ ಹೋಗುವುವು ನಶಿಸಿ ಜ್ಞಾನ, ಬುದ್ಧಿ. ಆದರೆ ಅಮರವಾದುದು ಪರಮ ಪ್ರೀತಿ. ಅಪೂರ್ವವಾದುದು ನಮ್ಮ ಆ ಅರಿವೆಲ್ಲ, ಪೂರ್ಣವಾದುದಲ್ಲ ಪ್ರವಾದನವದೆಲ್ಲ; ಪರಿಪೂರ್ಣತೆ ಪ್ರಾಪ್ತವಾಗಲು ಇಲ್ಲವಾಗುವುದು ಅಪೂರ್ಣತೆಯೆಲ್ಲ. ಬಾಲಕ ನಾನಾಗಿರೆ ಆಡಿದೆ, ಮಾತಾಡಿದೆ, ಚಿಂತಿಸಿದೆ, ಸುಖದುಃಖಗಳ ಸವಿದೆ ಬಾಲಕನಂತೆ. ಬಲಿತು ಬೆಳೆದು ಮನುಜನಾದುದೆ ಬಾಲಿಶವಾದುದೆಲ್ಲವನು ಬದಿಗೊತ್ತಿದೆ. ನಾವೀಗ ಕಾಂಬುದು ದರ್ಪಣದ ಬಿಂಬವನು ಮುಸುಕಾಗಿ ತರುವಾಯ ಕಾಂಬೆವು ದೇವರನು ಮುಖಾಮುಖಿಯಾಗಿ. ಈಗಿರುವುದೆನ್ನ ಅರಿವು ತುಂಡು ತುಂಡಾಗಿ ನಂತರ ದೇವನೆನ್ನ ಅರಿತಂತೆ, ನಾನರಿವೆನು ಅಖಂಡವಾಗಿ. ನಿಲ್ಲುವುವು ನಂಬಿಕೆ, ನಿರೀಕ್ಷೆ, ಪ್ರೀತಿ ನೆಲೆಯಾಗಿ; ಈ ಮೂರಲಿ ಪ್ರೀತಿಯೇ ಪರಮೋನ್ನತ ಎಂಬುದು ನೀನರಿ.

ಪ್ರಭುವಿನ ವಾಕ್ಯ
ದೇವರಿಗೆ ಕೃತಜ್ಞತೆ ಸಲ್ಲಲಿ

ಕೀರ್ತನೆ 33: 2-5, 12, 22. v.12
ಶ್ಲೋಕ: ಸ್ವಜನರಾಗಿ ಪ್ರಭು ಆಯ್ದುಕೊಂಡ ಜನತೆ ಧನ್ಯ.

1. ಪ್ರಭುವನು ಕೊಂಡಾಡಿ ಕಿನ್ನರಿಯನು ನುಡಿಸುತ
ಕೀರ್ತಿಸಿ ದಶ ತಂತಿ ವೀಣೆಯನು ಬಾರಿಸುತ
ನೂತನ ಕೀರ್ತನೆಯನು ಆತನಿಗೆ ಹಾಡಿರಿ
ಇಂಪಾಗಿ ಬಾರಿಸಿ, ಸೊಂಪಾಗಿ ಭಜಿಸಿರಿ
ಶ್ಲೋಕ

2. ಸತ್ಯವಾದುದು ಆತನ ಪವಿತ್ರ ವಾಕ್ಯ
ಸ್ತುತ್ಯವಾದುದು ಆತನ ಪುನೀತ ಕಾರ್ಯ
ಸತ್ಯಸಂಧನು, ನ್ಯಾಯಪ್ರಿಯನು ಆತನು
ಅಚಲ ಪ್ರೀತಿಯಿಂದ ಪ್ರಭು ಜಗವನು ತುಂಬಿಹನು
ಶ್ಲೋಕ

3. ಪ್ರಭುವನು ದೇವರಾಗಿ ಪಡೆದ ಜನಾಂಗ ಧನ್ಯ
ಪ್ರಭುವನು ಕೊಂಡಾಡಿ ಕಿನ್ನರಿಯನು ನುಡಿಸುತ
ಕೀರ್ತಿಸಿ ದಶ ತಂತಿ ವೀಣೆಯನು ಬಾರಿಸುತ
ನೂತನ ಕೀರ್ತನೆಯನು ಆತನಿಗೆ ಹಾಡಿರಿ
ಇಂಪಾಗಿ ಬಾರಿಸಿ, ಸೊಂಪಾಗಿ ಭಜಿಸಿರಿ
ಶ್ಲೋಕ

4. ಸತ್ಯವಾದುದು ಆತನ ಪವಿತ್ರ ವಾಕ್ಯ
ಸ್ತುತ್ಯವಾದುದು ಆತನ ಪುನೀತ ಕಾರ್ಯ
ಸತ್ಯಸಂಧನು, ನ್ಯಾಯಪ್ರಿಯನು ಆತನು
ಅಚಲ ಪ್ರೀತಿಯಿಂದ ಜಗವನು ತುಂಬಿಹನು
ಶ್ಲೋಕ

5. ಪ್ರಭುವನು ದೇವರಾಗಿ ಪಡೆದ ಜನಾಂಗ ಧನ್ಯ
ಸ್ವಜನರಾಗಿ ಆತನಾಯ್ದುಕೊಂಡ ಜನತೆ ಧನ್ಯ
ನಮ್ಮ ಮೇಲಿರಲಿ ಪ್ರಭೂ, ನಿನ್ನಚಲ ಪ್ರೀತಿ, ಕಾದಿಹೆವು ಇದೋ ನಿನ್ನ ನಂಬಿ ಭರವಸದಿ
ಶ್ಲೋಕ

ಘೋಷಣೆ (ಮತ್ತಾಯ 4: 4)
ಅಲ್ಲೆಲೂಯ, ಅಲ್ಲೆಲೂಯ.
ಮಾನವನು ಜೀವಿಸುವುದು ಆಹಾರದಿಂದ ಮಾತ್ರವಲ್ಲ, ದೇವರಾಡುವ ಪ್ರತಿಯೊಂದು ನುಡಿಯಿಂದ
ಅಲ್ಲೆಲೂಯ.

ಶುಭಸಂದೇಶ
ಲೂಕನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 7: 31-35
ಪ್ರಭೂ, ನಿಮಗೆ ಮಹಿಮೆ ಸಲ್ಲಲಿ

"ನಾವು ಕೊಳಲನೂದಲು ನೀವು ಕುಣಿದಾಡಲಿಲ್ಲ; ನಾವು ಶೋಕ ಗೀತೆಗಳ ಹಾಡಲು ನೀವು ಕಣ್ಣೀರಿಡಲಿಲ್ಲ."

ಆ ಕಾಲದಲ್ಲಿ ಯೇಸು ತಮ್ಮ ಬೋಧನೆಯನ್ನು ಮುಂದುವರಿಸುತ್ತಾ, "ಈ ಕಾಲದ ಜನರನ್ನು ಯಾರಿಗೆ ಹೋಲಿಸಲಿ? ಇವರು ಯಾರನ್ನು ಹೋಲುತ್ತಾರೆ? ಪೇಟೆ ಬೀದಿಯಲ್ಲಿ ಕುಳಿತು, 'ನಾನು ಕೊಳಲನೂದಲು ನೀವು ಕುಣಿದಾಡಲಿಲ್ಲ; ನಾವು ಶೋಕ ಗೀತೆಗಳ ಹಾಡಲು ನೀವು ಕಣ್ಣೀರಿಡಲಿಲ್ಲ, ಎಂದು ಒಬ್ಬರಿಗೊಬ್ಬರು ಕೂಗಾಡುವ ಮಕ್ಕಳನ್ನು ಹೋಲುತ್ತಾರೆ. ಸ್ನಾನಿಕ ಯೊವಾನ್ನನು ಬಂದಾಗ ಅನ್ನ ಆಹಾರವನ್ನು ಸೇವಿಸಲಿಲ್ಲ, ದ್ರಾಕ್ಷಾರಸವನ್ನು ಮುಟ್ಟಲಿಲ್ಲ; ನೀವು, 'ಅವನಿಗೆ ದೆವ್ವ ಹಿಡಿದಿದೆ,' ಎಂದು ಹೇಳಿದಿರಿ; ನರಪುತ್ರನು ಬಂದಾಗ ಅನ್ನಪಾನಿಯಗಳನ್ನು ಸೇವಿಸಿದನು; ನೀವು, 'ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ,' ಎನ್ನುತ್ತೀರಿ. ಆದರೆ ದೈವಜ್ಞಾನವೇ ನಿಜವಾದ ಜ್ಞಾನವೆಂದು ಅದನ್ನು ಅಂಗೀಕರಿಸುವ ಎಲ್ಲರೂ ಸಮರ್ಥಿಸುತ್ತಾರೆ," ಎಂದರು.

ಪ್ರಭುಕ್ರಿಸ್ತರ ಶುಭಸಂದೇಶ
ಕ್ರಿಸ್ತರೇ, ನಿಮಗೆ ಸ್ತುತಿ ಸಲ್ಲಲಿ

ಆಮೆನ್

1 day ago | [YT] | 28

Krista Dani

15-09-26
ಸೆಪ್ಟೆಂಬರ್ - 15 - ಮಂಗಳವಾರ

ಪವಿತ್ರ ಬೈಬಲ್ ದಿನಚರಿ
ಸಾಧಾರಣ ಕಾಲದ ಇಪ್ಪತ್ತನಾಲ್ಕನೇ ವಾರ
ಪೂಜಾವಿಧಿ ವರ್ಷ- 2
ಕೀರ್ತನಾ ಮಂಜರಿ ವಾರ 3
ಪೂಜಾವಸ್ತ್ರ: ಬಿಳಿ

ವ್ಯಾಕುಲಮಾತೆ ಪರಿಶುದ್ಧ ಕನ್ಯಾಮರಿಯಮ್ಮ (ಐಚ್ಛಿಕ ಸ್ಮರಣೆ)

ದೈವವಾಕ್ಯದ ವಿಧಿ

ಮೊದಲನೆಯ ವಾಚನ
ಪೌಲನು ಕೊರಿಂಥಿಯರಿಗೆ ಬರೆದ ಮೊದಲನೆಯ ಪತ್ರದಿಂದ ಇಂದಿನ ವಾಚನ 12: 12-14, 27-31

"ನೀವೆಲ್ಲರೂ ಕ್ರಿಸ್ತ ಯೇಸುವಿನ ದೇಹ ಆಗಿದ್ದೀರಿ; ಪ್ರತಿಯೊಬ್ಬನೂ ಈ ದೇಹದ ಅಂಗವಾಗಿದ್ದಾನೆ"

ಸಹೋದರರೇ, ದೇಹ ಒಂದೇ; ಅಂಗಗಳು ಹಲವು. ಆ ಅಂಗಗಳು ಅನೇಕವಿದ್ದರೂ ಅವು ಸೇರಿ ಒಂದೇ ದೇಹವಾಗುತ್ತದೆ. ಅಂತೆಯೇ ಕ್ರಿಸ್ತ ಯೇಸು. ಯೆಹೂದ್ಯರಾಗಿರಲಿ, ಗ್ರೀಕರಾಗಿರಲಿ, ಪರತಂತ್ರರಾಗಿರಲಿ, ಸ್ವತಂತ್ರರಾಗಿರಲಿ - ನಾವೆಲ್ಲರೂ ಒಂದೇ ದೇಹವಾಗುವಂತೆ ಒಂದೇ ಆತ್ಮದಿಂದ ದೀಕ್ಷಾಸ್ನಾನ ಹೊಂದಿದ್ದೇವೆ. ಒಂದೇ ಆತ್ಮವನ್ನು ನಮ್ಮೆಲ್ಲರಿಗೂ ಪಾನವಾಗಿ ಕೊಡಲಾಗಿದೆ. ದೇಹವು ಏಕ ಅಂಗದಿಂದ ಅಲ್ಲ, ಅನೇಕ ಅಂಗಗಳಿಂದ ಕೂಡಿದೆ. ನೀವೆಲ್ಲರೂ ಕ್ರಿಸ್ತ ಯೇಸುವಿನ ದೇಹ ಆಗಿದ್ದೀರಿ; ಪ್ರತಿಯೊಬ್ಬನೂ ಈ ದೇಹದ ಅಂಗವಾಗಿದ್ದಾನೆ. ದೇವರು ತಮ್ಮ ಸಭೆಯಲ್ಲಿ, ಮೊದಲನೆಯದಾಗಿ ಪ್ರೇಷಿತರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ನೇಮಿಸಿದ್ದಾರೆ. ಅನಂತರ ಪವಾಡಗಳನ್ನು ಎಸಗುವವರನ್ನು ರೋಗಗಳನ್ನು ಗುಣಪಡಿಸುವವರನ್ನು, ಪರೋಪಕಾರಿಗಳನ್ನು, ಪರಿಪಾಲಕರನ್ನು, ಬಹುಭಾಷಪಂಡಿತರನ್ನು ನೇಮಿಸಿದ್ದಾರೆ. ಎಲ್ಲರೂ ಪ್ರೇಷಿತರಲ್ಲ, ಎಲ್ಲರೂ ಪ್ರವಾದಿಗಳಲ್ಲ, ಎಲ್ಲರೂ ಬೋಧಕರಲ್ಲ, ಎಲ್ಲರೂ ಪವಾಡ ಪುರುಷರಲ್ಲ, ಎಲ್ಲರೂ ರೋಗಗಳನ್ನು ಗುಣಪಡಿಸುವವರಲ್ಲ, ಎಲ್ಲರೂ ಪರೋಪಕಾರಿಗಳಲ್ಲ, ಎಲ್ಲರೂ ಪರಿಪಾಲಕರಲ್ಲ, ಎಲ್ಲರೂ ಬಹುಭಾಷಾಪಂಡಿತರಲ್ಲ, ಅಥವಾ ಎಲ್ಲರೂ ಆ ಭಾಷೆಗಳನ್ನು ವಿವರಿಸಿ ಹೇಳುವವರಲ್ಲ. ಶ್ರೇಷ್ಠವಾದ ವರಗಳನ್ನು ನೀವು ಶ್ರದ್ಧಾಪೂರ್ವಕವಾಗಿ ಅಪೇಕ್ಷಿಸಿರಿ.

ಪ್ರಭುವಿನ ವಾಕ್ಯ
ದೇವರಿಗೆ ಕೃತಜ್ಞತೆ ಸಲ್ಲಲಿ

ಕೀರ್ತನೆ 100: 1-5. v.3
ಶ್ಲೋಕ: ಪ್ರಭುವಿನ ಜನ, ಆತನೇ ಮೇಯಿಸುವ ಕುರಿಗಳು ನಾವು

1. ಭೂನಿವಾಸಿಗಳೇ, ಜಯಘೋಷಮಾಡಿ ಪ್ರಭುವಿಗೆ
ಅತಿ ಸಂತೋಷದಿಂದ ಸೇವೆಮಾಡಿ ಆತನಿಗೆ
ಹಾಡುತಾ, ಪಾಡುತಾ, ಬನ್ನಿ ಆತನ ಸನ್ನಿಧಿಗೆ
ಶ್ಲೋಕ

2. ಪ್ರಭುವೇ ದೇವರೆಂಬುದನು ಮರೆತುಬಿಡಬೇಡಿ ನೀವು
ನಮ್ಮ ಸೃಷ್ಟಿಕರ್ತ ಆತನು, ಆತನವರು ನಾವು
ಆತನ ಜನ, ಆತನೇ ಮೇಯಿಸುವ ಕುರಿಗಳು ನಾವು
ಶ್ಲೋಕ

3. ಆತನ ಗೃಹ ದ್ವಾರವನು ಪ್ರವೇಶಿಸಿ ಧನ್ಯವಾದದೊಂದಿಗೆ
ಆತನ ಆವರಣದಲಿ ನಿಲ್ಲಿರಿ ಸ್ತುತಿಸ್ತೋತ್ರಗಳೊಂದಿಗೆ
ಆತನ ನಾಮವನ್ನು ಕೊಂಡಾಡಿ ಉಪಕಾರ ಸ್ಮರಣೆಯೊಂದಿಗೆ
ಶ್ಲೋಕ

4. ಹೌದು, ಪ್ರಭುವೆನಿತೋ ಒಳ್ಳೆಯವನು
ಇರುವುದಾತನ ಪ್ರೀತಿ ಯುಗಯುಗಕೂ
ಆತನ ಸತ್ಯತೆ ತಲತಲಾಂತರಕೂ
ಶ್ಲೋಕ

ಘೋಷಣೆ (ಕೀರ್ತನೆ 148: 13, 14)
ಅಲ್ಲೆಲೂಯ, ಅಲ್ಲೆಲೂಯ.
ಹೊಗಳಲಿ ಇವರೆಲ್ಲರು ಪ್ರಭುವಿನ ನಾಮವನು | ಕೋಡು ಮೂಡಿಸಿಹನು ಪ್ರಭು ತನ್ನ ಪ್ರಜೆಗೆ
ಅಲ್ಲೆಲೂಯ.

ಶುಭಸಂದೇಶ
ಲೂಕನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 7: 11-17
"ಯುವಕನೇ, ನಾನು ನಿಮಗೆ ಹೇಳುತ್ತೇನೆ, ಎದ್ದೇಳು."

ಆ ಕಾಲದಲ್ಲಿ ಯೇಸು ನಾಯಿನ್ ಎಂಬ ಊರಿಗೆ ಹೊರಟರು. ಅವರೊಂದಿಗೆ ಶಿಷ್ಯರೂ ಅನೇಕ ಜನರೂ ಹೊರಟರು. ಊರ ಬಾಗಿಲನ್ನು ಸಮೀಪಿಸಿದಾಗ, ಒಂದು ಶವಯಾತ್ರೆಯನ್ನು ಅವರು ಎದುರುಗೊಂಡರು. ಆ ಸತ್ತವನು ತನ್ನ ತಾಯಿಗೆ ಒಬ್ಬನೇ ಮಗ. ಆಕೆಯೋ ವಿಧವೆ. ಜನರ ದೊಡ್ಡ ಗುಂಪೊಂದು ಆಕೆಯೊಡನೆ ಬರುತ್ತಿತ್ತು. ಪ್ರಭು ಯೇಸು ಆಕೆಯನ್ನು ಕಂಡದ್ದೇ ಕನಿಕರಗೊಂಡು, 'ಅಳಬೇಡ' ಎಂದು ಹೇಳಿ, ಚಟ್ಟದ ಹತ್ತಿರಕ್ಕೆ ಬಂದು, ಅದನ್ನು ಮುಟ್ಟಿದರು. ಹೊತ್ತುಕೊಂಡು ಹೋಗುತ್ತಿದ್ದವರು ಹಾಗೆಯೇ ನಿಂತರು. ಆಗ ಯೇಸು, "ಯುವಕನೇ, ನಾನು ನಿನಗೆ ಹೇಳುತ್ತೇನೆ, ಎದ್ದೇಳು," ಎಂದರು. ಸತ್ತವನು ಎದ್ದು ಕುಳಿತು ಮಾತನಾಡಲಾರಂಭಿಸಿದನು. ಯೇಸು ಆ ಮಗನನ್ನು ತಾಯಿಗೆ ಒಪ್ಪಿಸಿದರು. ಎಲ್ಲರೂ ಭಯಭ್ರಾಂತರಾದರು. "ಮಹಾ ಪ್ರವಾದಿಯೊಬ್ಬನು ನಮ್ಮಲ್ಲೇ ಉದಯಿಸಿದ್ದಾನೆ; ದೇವರು ತಮ್ಮ ಜನರನ್ನು ರಕ್ಷಿಸಲು ಬಂದಿದ್ದಾರೆ," ಎಂದು ದೇವರನ್ನು ಕೊಂಡಾಡಿದರು. ಯೇಸುವಿನ ಈ ಸಮಾಚಾರ ಜುದೇಯ ನಾಡಿನಲ್ಲೆಲ್ಲಾ ಹಾಗೂ ಸುತ್ತಮುತ್ತಲಿನ ಪ್ರಾಂತ್ಯದಲ್ಲೆಲ್ಲಾ ಹರಡಿತು.

ಪ್ರಭುವಿನ ಶುಭಸಂದೇಶ
ಕ್ರಿಸ್ತರೇ ನಿಮಗೆ ಸ್ತುತಿ ಸಲ್ಲಲಿ

ಅಥವಾ

ಯೊವಾನ್ನನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 19:25-27
"ಶಿಲುಬೆಯ ಮೇಲೆ ಯಾತನೆ ಅನುಭವಿಸುತ್ತಿದ್ದ ತನ್ನ ಪುತ್ರನನ್ನು ತಾಯಿ ಮರಿಯಳು ದುಃಖದಿಂದ ಈಕ್ಷಿಸುತ್ತಿದ್ದಳು."

ಆ ಕಾಲದಲ್ಲಿ ಯೇಸುವಿನ ತಾಯಿ, ತಾಯಿಯ ಸಹೋದರಿ, ಕ್ಲೋಪನ ಹೆಂಡತಿ ಮರಿಯ, ಮತ್ತು ಮಗ್ಗಲದ ಮರಿಯ - ಇವರು ಶಿಲುಬೆಯ ಬಳಿಯಲ್ಲಿ ನಿಂತಿದ್ದರು. ಯೇಸು ತಮ್ಮ ತಾಯನ್ನೂ ಆಕೆಯ ಪಕ್ಕದಲ್ಲಿ ನಿಂತಿದ್ದ ತಮ್ಮ ಆಪ್ತ ಶಿಷ್ಯನನ್ನೂ ನೋಡಿ, "ಅಮ್ಮಾ, ಇಗೋ, ನಿನ್ನ ಮಗ," ಎಂದರು. ಆನಂತರ ತಮ್ಮ ಶಿಷ್ಯನನ್ನು ಕುರಿತು, "ಇಗೋ, ನಿನ್ನ ತಾಯಿ," ಎಂದರು. ಅಂದಿನಿಂದ ಆ ಶಿಷ್ಯನು ಆಕೆಯನ್ನು ತನ್ನ ಮನೆಯಲ್ಲೇ ಇರಿಸಿಕೊಂಡನು.

ಪ್ರಭುವಿನ ಶುಭಸಂದೇಶ
ಕ್ರಿಸ್ತರೇ ನಿಮಗೆ ಸ್ತುತಿ ಸಲ್ಲಲಿ

ಆಮೆನ್

2 days ago | [YT] | 25

Krista Dani

14-09-26
ಸೆಪ್ಟೆಂಬರ್ - 14 - ಸೋಮವಾರ

ಪವಿತ್ರ ಬೈಬಲ್ ದಿನಚರಿ
ಸಾಧಾರಣ ಕಾಲದ ಇಪ್ಪತ್ತನಾಲ್ಕನೆಯ ವಾರ
ಪೂಜಾವಿಧಿ; ಹಬ್ಬ
ಕೀರ್ತನಾ ಮಂಜರಿ: ಹಬ್ಬ
ಪೂಜಾವಸ್ತ್ರ: ಕೆಂಪು

ಪವಿತ್ರ ಶಿಲುಬೆಯ ವಿಜಯ (ಹಬ್ಬ)

ದೈವವಾಕ್ಯದ ವಿಧಿ

ಮೊದಲನೆಯ ವಾಚನ
ಸಂಖ್ಯಾಕಾಂಡದಿಂದ ಇಂದಿನ ಮೊದಲನೆಯ ವಾಚನ 21: 4-9

"ಸರ್ಪಗಳಿಂದ ಗಾಯಗೊಂಡವರಲ್ಲಿ ಯಾರು ಯಾರು ಆ ಕಂಚಿನ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು."

ಇಸ್ರಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ನಾಡನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪು ಕಡಲಿನ ಮಾರ್ಗವಾಗಿ ಪ್ರಯಾಣ ಮಾಡಿದರು. ಈ ಮಾರ್ಗದ ಆಯಾಸದಿಂದ ಅವರಿಗೆ ಬೇಸರವಾಯಿತು.
ಆಗ ಅವರು ದೇವರಿಗೂ ಮೋಶೆಗೂ ವಿರುದ್ಧ ಮಾತಾಡ ತೊಡಗಿದರು: "ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವಿಲ್ಲ, ನೀರೂ ಇಲ್ಲ; ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಗಿದೆ," ಎಂದು ಹೇಳತೊಡಗಿದರು. ಅದಕ್ಕೆ ಸರ್ವೇಶ್ವರ ವಿಷ ಸರ್ಪಗಳನ್ನು ಅವರ ನಡುವೆ ಬರಮಾಡಿದರು. ಅವು ಆ ಜನರನ್ನು ಕಚ್ಚಿದವು. ಬಹು ಜನ ಸತ್ತುಹೋದರು.
ಆಗ ಜನರು ಮೋಶೆಯ ಬಳಿಗೆ ಬಂದು, "ನಾವು ನಿಮಗೂ ಸರ್ವೇಶ್ವರನಿಗೂ ವಿರುದ್ಧ ಮಾತಾಡಿ ದೋಷಿಗಳಾದೆವು. ಈ ಸರ್ಪಗಳು ನಮ್ಮನ್ನು ಬಿಟ್ಟು ತೊಲಗುವಂತೆ ಸರ್ವೇಶ್ವರನನ್ನು ಪ್ರಾರ್ಥಿಸಿ," ಎಂದು ಬೇಡಿಕೊಂಡರು. ಮೋಶೆ ಜನರ ಪರವಾಗಿ ಪ್ರಾರ್ಥಿಸಿದನು. ಸರ್ವೇಶ್ವರ ಅವನಿಗೆ, "ನೀನು ಕಂಚಿನಿಂದ ವಿಷ ಸರ್ಪದ ಆಕಾರವನ್ನು ಮಾಡಿಸಿ, ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸು. ಸರ್ಪಗಳಿಂದ ಗಾಯಗೊಂಡ ಪ್ರತಿಯೊಬ್ಬನು ಅದನ್ನು ನೋಡಿ ಬದುಕಿಕೊಳ್ಳುವನು," ಎಂದು ಆಜ್ಞಾಪಿಸಿದರು. ಅಂತೆಯೇ ಮೋಶೆ ಕಂಚಿನಿಂದ ಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಡಿಸಿದನು. ಸರ್ಪಗಳಿಂದ ಗಾಯಗೊಂಡವರಲ್ಲಿ ಯಾರು ಯಾರು ಆ ಕಂಚಿನ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು.

ಪ್ರಭುವಿನ ವಾಕ್ಯ
ದೇವರಿಗೆ ಕೃತಜ್ಞತೆ ಸಲ್ಲಲಿ

ಕೀರ್ತನೆ 78: 1-2, 34-38. v.8
ಶ್ಲೋಕ: ಮರೆಯದಿರು ಪ್ರಭುವಿನ ಮಹತ್ಕಾರ್ಯಗಳನು.

1. ನನ್ನ ಜನರೇ, ಕಿವಿಗೊಡಿ ನನ್ನ ಬೋಧನೆಗೆ
ಗಮನಕೊಡಿ ನಾ ಹೇಳುವ ಮಾತುಗಳಿಗೆ
ಸಾಮತಿಯೊಂದಿಗೆ ಬೋಧನೆಯನಾರಂಭಿಸುವೆನು
ಹೊರಪಡಿಸುವೆನು ಪೂರ್ವಕಾಲದ ಗೂಢಾರ್ಥಗಳನು
ಶ್ಲೋಕ

2. ಆತನನು ನೆನೆಸಿಕೊಂಡರವರು ವಧೆಯಾಗುವಾಗ
ಪರಿತಾಪಗೊಂಡು ದೇವರಿಗೆ ಅಭಿಮುಖರಾದಾಗ
ನೆನೆದರಾಗ ದೇವರೇ ತಮಗಾಶ್ರಯದುರ್ಗವೆಂದು
ಆ ಪರಾತ್ಪರ ದೇವರೇ ತಮಗೆ ಉದ್ಧಾರಕನೆಂದು
ಶ್ಲೋಕ

3. ಆದರೆ ಅವನ ನಾಲಿಗೆಯಾಡಿತು ಅಸತ್ಯ
ಅವರ ಬಾಯಿ ಮಾಡಿತು ಕೇವಲ ಮುಖ ಸ್ತುತಿಯ
ನೆಲೆಯಾಗಿರಲಿಲ್ಲ ಅವರ ಹೃದಯ ಆತನಲಿ
ಬದ್ಧರಾಗಿರಲಿಲ್ಲ ಆತನ ನಿಬಂಧನೆಗಳಲಿ
ಶ್ಲೋಕ

4. ಆದರೂ ಕ್ಷಮಿಸಿದನವರನು ಆ ದಯಾಳು,
ನಾಶಮಾಡದೆ ಕೋಪವ ತಾಳಿಕೊಂಡನು,
ಹಲವು ವೇಳೆ ಉದ್ರೇಕಗೊಳ್ಳದೆ
ಶ್ಲೋಕ

ಎರಡನೆಯ ವಾಚನ
ಪೌಲನು ಫಿಲಿಪ್ಪಿಯರಿಗೆ ಬರೆದ ಪತ್ರದಿಂದ ಇಂದಿನ ಎರಡನೆಯ ವಾಚನ: 2: 6-11

"ಕ್ರಿಸ್ತರು ವಿಧೇಯರಾದರು; ಆದುದರಿಂದ ಅವರನ್ನು ಪರಮೋನ್ನತ ಸ್ಥಾನಕ್ಕೇರಿಸಿದರು"

ಯೇಸು, ದೇವಸ್ವರೂಪಿ ತಾನಾಗಿದ್ದರೂ ನಿರುತ ದೇವರಿಗೆ ಸಮನಾದ ಆ ಸಿರಿ ಪದವಿಯನ್ನಾತ ಹಿಡಿದಿಟ್ಟುಕೊಳ್ಳಲ್ಲಿಲ್ಲ ಬಿಡಲೊಲ್ಲೆನ್ನೆನುತ. ತನ್ನನ್ನೇ ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡು ಮನುಜನಾಕಾರದಲ್ಲಿ ಕಾಣಿಸಿಕೊಂಡು ನರಮಾನವರಿಗೆ ಸರಿ ಸಮನಾದ. ತನ್ನನ್ನೇ ಆತ ತಗ್ಗಿಸಿಕೊಂಡು ವಿಧೇಯನಾಗಿ ನಡೆದುಕೊಂಡು ಮರಣ ಪರಿಯಂತ, ಹೌದೌದು, ಶಿಲುಬೆಯ ಮರಣ ಪರಿಯಂತ ವಿಧೇಯನಾದ. ಎಂತಲೇ ಪರಮೋನ್ನತ ಸ್ಥಾನಕ್ಕೇರಿಸಿದನಾತನನು ಇತ್ತನು ಹೆಸರುಗಳೊತ್ತಮ ಹೆಸರನು ದೇವ ಪರಮನು. ಯೇಸುವಿನ ಹೆಸರಿಗೆಂದೇ ಮೊಣಕಾಲೂರಿ ಮಣಿವರು ಸ್ವರ್ಗವಾಸಿಗಳು, ಭೂನಿವಾಸಿಗಳು, ಪಾತಾಳ ಜೀವ ರಾಶಿಗಳು. 'ಕ್ರಿಸ್ತ ಯೇಸುವೇ ಪ್ರಭು' ಎಂದೆಲ್ಲರಿಗೆ ಅರಿಕೆ ಮಾಡುವರು. ಪಿತ ದೇವನ ಮಹಿಮೆಯನ್ನು ಈ ಪರಿ ಹೊಗಳಿ ಸಾರುವರವರು.

ಪ್ರಭುವಿನ ವಾಕ್ಯ
ದೇವರಿಗೆ ಕೃತಜ್ಞತೆ ಸಲ್ಲಲಿ

ಘೋಷಣೆ
ಅಲ್ಲೆಲೂಯ, ಅಲ್ಲೆಲೂಯ.
ಪ್ರಭೂ, ನಿಮ್ಮನ್ನು ಆರಾಧಿಸಿ, ಸ್ತುತಿಸುತ್ತೇವೆ; ಏಕೆಂದರೆ ನೀವು ನಿಮ್ಮ ಶಿಲುಬೆಯಿಂದ ಲೋಕವನ್ನು ರಕ್ಷಿಸಿದ್ದೀರಿ
ಅಲ್ಲೆಲೂಯ.

ಶುಭಸಂದೇಶ
ಯೊವಾನ್ನನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 3: 13-17
ಪ್ರಭೂ, ನಿಮಗೆ ಮಹಿಮೆ ಸಲ್ಲಲಿ

"ನರಪುತ್ರನನ್ನೂ ಸಹ ಮೇಲಕ್ಕೆ ಏರಿಸಬೇಕು."

ಆ ಕಾಲದಲ್ಲಿ ಯೇಸು ನಿಕೋದೇಮನಿಗೆ ಇಂತೆಂದರು: "ಸ್ವರ್ಗದಿಂದಲೇ ಇಳಿದು ಬಂದ ನರಪುತ್ರನೇ ಹೊರತು ಬೇರೆ ಯಾರೂ ಸ್ವರ್ಗಕ್ಕೆ ಏರಿಹೋದವರಿಲ್ಲ. ಮೋಶೆ ಮರುಭೂಮಿಯಲ್ಲಿ ಸರ್ಪವನ್ನು ಮೇಲಕ್ಕೆ ಏರಿಸಿದನು. ಅಂತೆಯೇ ನರಪುತ್ರನಲ್ಲಿ ವಿಶ್ವಾಸವಿಟ್ಟವರೆಲ್ಲರೂ ನಿತ್ಯ ಜೀವವನ್ನು ಪಡೆಯುವಂತೆ ನರಪುತ್ರನನ್ನು ಸಹ ಮೇಲಕ್ಕೆ ಏರಿಸಬೇಕು. ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯ ಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ. ದೇವರು ತಮ್ಮ ಪುತ್ರನನ್ನು ಈ ಲೋಕಕ್ಕೆ ಕಳುಹಿಸಿದ್ದು ಲೋಕವನ್ನು ತೀರ್ಪಿಗೆ ಗುರಿ ಮಾಡಲೆಂದಲ್ಲ; ಪುತ್ರನ ಮುಖಾಂತರ ಲೋಕ ಉದ್ಧಾರವಾಗಲೆಂದು."

ಪ್ರಭುಕ್ರಿಸ್ತರ ಶುಭಸಂದೇಶ
ಕ್ರಿಸ್ತರೇ, ನಿಮಗೆ ಸ್ತುತಿ ಸಲ್ಲಲಿ

ಆಮೆನ್

3 days ago | [YT] | 19

Krista Dani

13-09-26
ಸೆಪ್ಟೆಂಬರ್ - 13 - ಭಾನುವಾರ

ಪವಿತ್ರ ಬೈಬಲ್ ದಿನಚರಿ
ಸಾಧಾರಣ ಕಾಲದ ಇಪ್ಪತ್ತನಾಲ್ಕನೇ ಭಾನುವಾರ
ಪೂಜಾವಿಧಿ ವರ್ಷ-1
ಕೀರ್ತನಾ ಮಂಜರಿ: ವಾರ 3
ಪೂಜಾವಸ್ತ್ರ: ಹಸಿರು

ಸಂತ ಕ್ರಿಸಾಸ್ಪಮ್ (ಧರ್ಮಾಧ್ಯಕ್ಷ/ಧರ್ಮಪಂಡಿತ) (ಸ್ಮರಣೆ)

ದೈವವಾಕ್ಯದ ವಿಧಿ

"ಪ್ರಭು ದಯಾಳು, ಕೃಪಾಪೂರ್ಣನು"

ಮೊದಲನೆಯ ವಾಚನ
ಸಿರಾಖನ ಗ್ರಂಥದಿಂದ ಇಂದಿನ ಮೊದಲನೆಯ ವಾಚನ 27:30 - 28:7

"ಕ್ಷಮೆ ನೀಡು ನಿನ್ನ ನೆರೆಯವನು ಮಾಡಿದ ತಪ್ಪಿಗೆ, ನೀನು ಪ್ರಾರ್ಥಿಸುವಾಗ ಕ್ಷಮೆ ದೊರಕುವುದು ನಿನ್ನ ಪಾಪಗಳಿಗೆ"

ಸಿಟ್ಟುಸಿಡುಕುಗಳು ಹೇಯವಾದವುಗಳು, ಅವೆರಡೂ ಇರುವುವು ಪಾಪಾತ್ಮನೊಳು.
ಪ್ರತೀಕಾರ ಮಾಡುವವನು ಸರ್ವೇಶ್ವರನಿಂದ ಪ್ರತೀಕಾರ ಹೊಂದುವನು.
ಅವನ ಪಾಪಗಳನ್ನು ಸರ್ವೇಶ್ವರ ಸದಾ ಮನಸ್ಸಿನಲ್ಲಿಟ್ಟುಕೊಳ್ಳುವರು.
ಕ್ಷಮೆ ನೀಡು ನಿನ್ನ ನೆರೆಯವನು ಮಾಡಿದ ತಪ್ಪಿಗೆ,
ನೀನು ಪ್ರಾರ್ಥಿಸುವಾಗ ಕ್ಷಮೆ ದೊರಕುವುದು ನಿನ್ನ ಪಾಪಗಳಿಗೆ.
ನೆರೆಯವನ ಮೇಲೆ ಮುನಿಸ್ಸಿಟ್ಟುಕೊಂಡರೆ ದೇವರಿಂದ ಕ್ಷಮೆ ಹೊಂದಲು ಆದೀತೆ?
ತನ್ನಂಥ ಮನುಷ್ಯನ ಮೇಲೆ ಅವನಿಗೆ ಕರುಣೆಯಿಲ್ಲದಿರೆ ಬೇಡಿಕೊಂಡರೆ ಪಾಪಮನ್ನಣೆ ಪಡೆಯುವನೇ?
ಕೇವಲ ನರಮಾನವನಾದವನು ಇಂಥ ಸಿಡುಕಿಟ್ಟುಕೊಂಡರೆ ಇವನ ಪಾಪಗಳಿಗೆ ದೋಷಪರಿಹಾರ ಮಾಡುವವರು ಯಾರಿದ್ದಾರೆ?
ನಿನ್ನ ಅಂತ್ಯಕಾಲವನ್ನು ಸ್ಮರಿಸಿಕೊಂಡು ಹಗೆತನವನ್ನು ತೊರೆದುಬಿಡು.
ಸಾವು ಮರಣಗಳನ್ನು ನೆನೆದು ದೇವರ ಆಜ್ಞೆಗಳನ್ನು ಪಾಲನೆಮಾಡು.
ದೇವರ ಆಜ್ಞೆಗಳನ್ನು ಸ್ಮರಿಸಿಕೊಂಡು ನೆರೆಯವನ ಮೇಲೆ ಮುನಿಸಬೇಡ.
ಮಹೋನ್ನತನ ಒಡಂಬಡಿಕೆಯನ್ನು ನೆನಸಿಕೊಂಡು ತಪ್ಪು ನೆಪ್ಪುಗಳನ್ನು ವೀಕ್ಷಿಸಬೇಡ.

ಪ್ರಭುವಿನ ವಾಕ್ಯ
ದೇವರಿಗೆ ಕೃತಜ್ಞತೆ ಸಲ್ಲಲಿ

ಕೀರ್ತನೆ 103: 1-4, 9-12. v.8
ಶ್ಲೋಕ: ಪ್ರಭು ದಯಾಳು, ಕೃಪಾಪೂರ್ಣನು | ನಿತ್ಯಕ್ಕೂ ಕೋಪ ಇಟ್ಟುಕೊಳ್ಳುವವನಲ್ಲ

1. ಭಜಿಸು ಎನ್ನ ಮನವೇ, ಭಜಿಸು ಪ್ರಭುವನು
ನನ್ನ ಅಂತರಂಗವೇ, ಭಜಿಸು ಆತನನು
ನೆನೆ ಆತನ ಪರಮ ಪಾವನ ನಾಮವನು
ಭಜಿಸು ನನ್ನ ಮನವೇ, ಭಜಿಸು ಪ್ರಭುವನು
ಮರೆಯದಿರು ಆತನ ಉಪಕಾರಗಳೊಂದನು
ಶ್ಲೋಕ

2. ಮನ್ನಿಸುವನಾತ ನನ್ನ ದೋಷಗಳನು
ವಾಸಿಮಾಡುವನು ನನ್ನ ರೋಗಗಳನು
ಉಳಿಸುವನು ಪಾತಾಳದ ಕೂಪದಿಂದ ನನ್ನನು
ಮುಡಿಸುವನೆನಗೆ ದಯಾದಾಕ್ಷಿಣ್ಯದ ಮುಕುಟವನು
ಶ್ಲೋಕ

3. ಆತನು ಸದಾ ತಪ್ಪು ಹುಡುಕುವವನಲ್ಲ
ನಿತ್ಯಕ್ಕೂ ಕೋಪ ಇಟ್ಟುಕೊಳ್ಳುವವನಲ್ಲ
ನಮ್ಮ ಪಾಪಗಳಿಗೆ ತಕ್ಕಂತೆ ಆತ ವರ್ತಿಸಲಿಲ್ಲ
ನಮ್ಮ ಅಪರಾಧಗಳಿಗೆ ತಕ್ಕ ಹಾಗೆ ದಂಡಿಸಲಿಲ್ಲ
ಶ್ಲೋಕ

4. ಆಕಾಶ ಮಂಡಲವು ಭೂಮಿಯಿಂದ ಎಷ್ಟೋ ಉನ್ನತ
ದೈವ ಭಯವುಳ್ಳವರಿಗೆ ಆತನ ಕೃಪೆ ಅಷ್ಟೇ ಸನ್ನುತ
ಪಡುವಣದಿಂದ ಮೂಡಣವೆಷ್ಟೋ ದೂರ
ದೂಡಿದನಾತ ನಮ್ಮ ಪಾಪಗಳನು ಅಷ್ಟು ದೂರ
ಶ್ಲೋಕ

ಎರಡನೆಯ ವಾಚನ
ಪೌಲನು ರೋಮನರಿಗೆ ಬರೆದ ಪತ್ರದಿಂದ ಇಂದಿನ ಎರಡನೆಯ ವಾಚನ 14: 7-9

"ನಾವು ಬದುಕಿದರೂ ಸತ್ತರೂ ಪ್ರಭುವಿಗೆ ಸೇರಿದವರು"

ಸಹೋದರರೇ, ನಮ್ಮಲ್ಲಿ ಯಾರೂ ತನಗಾಗಿಯೇ ಬದುಕುವುದಿಲ್ಲ; ತನಗಾಗಿಯೇ ಸಾಯುವುದಿಲ್ಲ.
ನಾವು ಬದುಕಿದರೂ ಪ್ರಭುವಿಗಾಗಿಯೇ; ಸತ್ತರೂ ಅವರಿಗಾಗಿಯೇ. ನಾವು ಬದುಕಿದರೂ ಸತ್ತರೂ ಪ್ರಭುವಿಗೆ ಸೇರಿದವರು. ಏಕೆಂದರೆ, ಸತ್ತವರಿಗೂ ಬದುಕುವವರಿಗೂ ಪ್ರಭುವಾಗಬೇಕೆಂಬ ಉದ್ದೇಶದಿಂದಲೇ ಕ್ರಿಸ್ತ ಯೇಸು ಸತ್ತು ಜೀವಂತರಾದದ್ದು.

ಪ್ರಭುವಿನ ವಾಕ್ಯ
ದೇವರಿಗೆ ಕೃತಜ್ಞತೆ ಸಲ್ಲಲಿ

ಘೋಷಣೆ (ಯೊವಾನ್ನ 10: 27)
ಅಲ್ಲೆಲೂಯ, ಅಲ್ಲೆಲೂಯ.
ನನ್ನ ಕುರಿಗಳಾದರೋ ನನ್ನ ಸ್ವರವನ್ನು ಗುರುತಿಸುತ್ತವೆ | ನಾನು ಅವನ್ನು ಬಲ್ಲೆನು, ಅವು ನನ್ನನ್ನು ಹಿಂಬಾಲಿಸುತ್ತವೆ
ಅಲ್ಲೆಲೂಯ.

ಶುಭಸಂದೇಶ
ಮತ್ತಾಯನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 18: 21-35
ಪ್ರಭು ನಿಮಗೆ ಮಹಿಮೆ ಸಲ್ಲಲಿ

"ಏಳು ಸಾರಿ ಮಾತ್ರವಲ್ಲ, ಏಳೆಪ್ಪತ್ತು ಸಾರಿ ಕ್ಷಮಿಸಬೇಕು."

ಆ ಕಾಲದಲ್ಲಿ ಪೇತ್ರನು ಯೇಸುವಿನ ಬಳಿಗೆ ಬಂದು, "ಸ್ವಾಮೀ, ನನಗೆ ವಿರುದ್ಧ ದ್ರೋಹ ಮಾಡುತ್ತಾ ಇರುವ ನನ್ನ ಸಹೋದರನನ್ನು ಎಷ್ಟು ಸಲ ಕ್ಷಮಿಸಬೇಕು? ಏಳು ಸಲವೇ?" ಎಂದು ಕೇಳಿದನು. "ಏಳು ಸಲವಲ್ಲ, ಏಳೆಪ್ಪತ್ತು ಸಲ ಕ್ಷಮಿಸಬೇಕು ಎಂದು ನಾನು ನಿನಗೆ ಒತ್ತಿ ಹೇಳುತ್ತೇನೆ" ಎಂದು ಯೇಸು ಉತ್ತರವಿತ್ತರು. ಯೇಸು ತಮ್ಮ ಮಾತನ್ನು ಮುಂದುವರಿಸುತ್ತಾ, "ಸ್ವರ್ಗರಾಜ್ಯಕ್ಕೆ ಈ ಹೋಲಿಕೆ ಅನ್ವಯಿಸುತ್ತದೆ: ಒಬ್ಬ ರಾಜನಿದ್ದ. ಅವನು ತನ್ನ ಸೇವಕರಿಂದ ಲೆಕ್ಕ ಕೇಳಲು ನಿರ್ಧರಿಸಿದ. ಲೆಕ್ಕ ತೆಗೆದುಕೊಳ್ಳಲು ಆರಂಭಿಸಿದಾಗ ಹತ್ತು ಸಾವಿರ 'ಚಿನ್ನದ ನಾಣ್ಯ'ಗಳನ್ನು ಸಾಲವಾಗಿ ತೆರಬೇಕಾಗಿದ್ದ ಒಬ್ಬನನ್ನು ಅವನ ಸಮ್ಮುಖಕ್ಕೆ ಕರೆತರಲಾಯಿತು. ಆದರೆ ಸಾಲ ತೀರಿಸಲು ಅವನ ಕೈಯಲ್ಲಿ ಹಣವಿರಲಿಲ್ಲ. ಆದುದರಿಂದ ಅವನಿಗಿದ್ದುದೆಲ್ಲವನ್ನು ಮಾತ್ರವಲ್ಲ, ಅವನನ್ನೂ ಅವನ ಮಡದಿ ಮಕ್ಕಳನ್ನೂ ಗುಲಾಮಗಿರಿಗೆ ಮಾರಿ, ಸಾಲ ತೀರಿಸುವಂತೆ ರಾಜ ಆಜ್ಞಾಪಿಸಿದ. ಆಗ ಆ ಸೇವಕ ರಾಜನ ಕಾಲಿಗೆ ಬಿದ್ದು ಬೇಡಿಕೊಂಡ: 'ಸ್ವಲ್ಪ ಸೈರಿಸಿಕೊಳ್ಳಿ ಸ್ವಾಮೀ, ನಿಮ್ಮ ಸಾಲವನ್ನೆಲ್ಲಾ ತೀರಿಸಿಬಿಡುತ್ತೇನೆ,' ಎಂದು ಅಂಗಲಾಚಿದ. ರಾಜನಿಗೆ ಕನಿಕರ ಉಂಟಾಯಿತು. ಆ ಸೇವಕನನ್ನು ಬಿಡುಗಡೆಮಾಡಿ ಅವನ ಸಾಲವನ್ನು ಮನ್ನಿಸಿಬಿಟ್ಟ. ಆದರೆ ಅದೇ ಸೇವಕ ಹೊರಗೆ ಬಂದದ್ದೇ ತನಗೆ ಕೇವಲ ನೂರು 'ಬೆಳ್ಳಿ ಕಾಸು' ಸಾಲ ತೆರಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಎದುರುಗೊಂಡ. ಅವನನ್ನು ಹಿಡಿದು, 'ನನಗೆ ಕೊಡಬೇಕಾದ ಸಾಲವನ್ನು ಈಗಲೇ ಕೊಟ್ಟು ತೀರಿಸು,' ಎಂದು ಕುತ್ತಿಗೆ ಹಿಸುಕಿದ. ಆಗ ಆ ಜೊತೆಗಾರ, 'ಸ್ವಲ್ಪ ಸೈರಿಸಿಕೊ, ಕೊಟ್ಟುಬಿಡುತ್ತೇನೆ,' ಎಂದು ಕಾಲಿಗೆ ಬಿದ್ದು ಬೇಡಿಕೊಂಡ. ಆದರೂ ಅವನು ಒಪ್ಪಲಿಲ್ಲ. ಅಷ್ಟು ಮಾತ್ರವಲ್ಲ, ಸಾಲ ತೀರಿಸುವ ತನಕ ಆ ಜೊತೆಗಾರನನ್ನು ಸೆರೆಗೆ ಹಾಕಿಸಿದ. ಇದೆಲ್ಲವನ್ನು ಕಂಡ ಇತರ ಸೇವಕರು ಬಹಳವಾಗಿ ನೊಂದುಕೊಂಡರು. ರಾಜನ ಬಳಿಗೆ ಹೋಗಿ ನಡೆದುದೆಲ್ಲವನ್ನೂ ವರದಿಮಾಡಿದರು. ರಾಜನು ಅವನನ್ನು ಕರೆಯಿಸಿ, 'ಎಲೋ ನೀಚ, ನೀನು ಬೇಡಿಕೊಂಡಿದ್ದರಿಂದ ಪೂರ್ತಿ ಸಾಲವನ್ನು ನಾನು ಮನ್ನಾಮಾಡಿದೆ. ನಾನು ನಿನಗೆ ದಯೆ ತೋರಿಸಿದಂತೆ ನೀನೂ ನಿನ್ನ ಜೊತೆಗಾರನಿಗೆ ದಯೆ ತೋರಿಸಬೇಕಿತ್ತು ಅಲ್ಲವೇ?' ಎಂದು ಸಿಟ್ಟುಗೊಂಡ. ಬಳಿಕ ತನಗೆ ಬರಬೇಕಾಗಿದ್ದ ಸಾಲವನ್ನು ತೀರಿಸುವವರೆಗೂ ಅವನನ್ನು ಕಠಿಣ ಶಿಕ್ಷೆಗೆ ಗುರಿಪಡಿಸಿದ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸೋದರನನ್ನು ಮನಃಪೂರ್ವಕವಾಗಿ ಕ್ಷಮಿಸಬೇಕು. ಇಲ್ಲದಿದ್ದರೆ ಸ್ವರ್ಗದಲ್ಲಿರುವ ನನ್ನ ತಂದೆ ನಿಮಗೆ ಇದರಂತೆಯೇ ಮಾಡುವರು," ಎಂದರು.

ಪ್ರಭುವಿನ ಶುಭಸಂದೇಶ
ಕ್ರಿಸ್ತರೇ ನಿಮಗೆ ಸ್ತುತಿ ಸಲ್ಲಲಿ

ಆಮೆನ್

4 days ago | [YT] | 21

Krista Dani

12-09-26
ಸೆಪ್ಟೆಂಬರ್ - 12 - ಶನಿವಾರ

ಪವಿತ್ರ ಬೈಬಲ್ ದಿನಚರಿ
ಸಾಧಾರಣ ಕಾಲದ ಇಪ್ಪತ್ತಮೂರನೇ ವಾರ
ಪೂಜಾವಿಧಿ ವರ್ಷ- 2
ಕೀರ್ತನಾ ಮಂಜರಿ: ವಾರ 3
ಪೂಜಾವಸ್ತ್ರ: ಹಸಿರು

ಮರಿಯಮ್ಮನವರ ಅತಿ ಪವಿತ್ರ ನಾಮ (ಸ್ಮರಣೆ)

ದೈವವಾಕ್ಯದ ವಿಧಿ

ಮೊದಲನೆಯ ವಾಚನ
ಪೌಲನು ಕೊರಿಂಥಿಯರಿಗೆ ಬರೆದ ಮೊದಲನೆಯ ಪತ್ರದಿಂದ ಇಂದಿನ ವಾಚನ 10: 14-22

"ಒಂದೇ; ಆದ್ದರಿಂದ ನಾವು ಅನೇಕರಿದ್ದರೂ ಒಂದೇ ಶರೀರವಾಗುತ್ತೇವೆ."

ಪ್ರಿಯರೇ, ವಿಗ್ರಹಾರಾಧನೆಯನ್ನು ತೊರೆದುಬಿಡಿ. ನೀವು ಅರಿತವರೆಂದು ತಿಳಿದೇ ಇದನ್ನು ಹೇಳುತ್ತಿದ್ದೇನೆ. ನನ್ನ ಮಾತುಗಳನ್ನು ನೀವೇ ಪರಿಶೀಲಿಸಿ ನೋಡಿ. ನಾವು ದೇವರಿಗೆ ಕೃತಜ್ಞತಾ ಸ್ತೋತ್ರವನ್ನು ಸಲ್ಲಿಸಿ ಪಾನಪಾತ್ರೆಯಿಂದ ಕುಡಿಯುವಾಗ ಕ್ರಿಸ್ತಯೇಸುವಿನ ರಕ್ತದಲ್ಲಿ ಪಾಲುಗೊಳ್ಳುತ್ತೇವಲ್ಲವೇ? ರೊಟ್ಟಿಯನ್ನು ಮುರಿದು ತಿನ್ನುವಾಗ ಕ್ರಿಸ್ತ ಯೇಸುವಿನ ಶರೀರದಲ್ಲಿ ಪಾಲುಗೊಳ್ಳುತ್ತೇವಲ್ಲವೇ? ರೊಟ್ಟಿ ಒಂದೇ; ಆದುದರಿಂದ ನಾವು ಅನೇಕರಿದ್ದರೂ ಒಂದೇ ಶರೀರವಾಗುತ್ತೇವೆ. ಏಕೆಂದರೆ ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಭಾಗಿಗಳಾಗುತ್ತೇವೆ. ಇಸ್ರಯೇಲರ ಪದ್ಧತಿಯನ್ನು ಗಮನಿಸಿರಿ: ಬಲಿಯಾಗಿ ಅರ್ಪಿತವಾದುದನ್ನು ಭುಜಿಸುವವರು ಬಲಿಪೀಠದ ಸೇವೆಯಲ್ಲಿ ಭಾಗಿಯಾಗಿರುತ್ತಾರಷ್ಟೆ. ಹೀಗೆ ನಾನು ಹೇಳುವಾಗ ವಿಗ್ರಹಕ್ಕೆ ನೈವೇದ್ಯ ಮಾಡಿದ ಪದಾರ್ಥವು ವಾಸ್ತವವಾದುದು ಅಥವಾ ವಿಗ್ರಹವೇ ವಾಸ್ತವವಾದುದು ಎಂದು ಅರ್ಥವೇ? ಯಾವುದೂ ಅಲ್ಲ. ನಾನು ಹೇಳುವುದೇನೆಂದರೆ: ಅನ್ಯ ಜನರು ಬಲಿಯನ್ನು ದೆವ್ವಗಳಿಗೆ ಅರ್ಪಿಸುತ್ತಾರೆ ಹೊರತು ದೇವರಿಗಲ್ಲ. ಹೀಗೆ ನೀವು ದೆವ್ವಗಳೊಂದಿಗೆ ಭಾಗಿಯಾಗುವುದನ್ನು ನಾನೆಂದಿಗೂ ಇಷ್ಟಪಡುವುದಿಲ್ಲ. ನೀವು ಪ್ರಭುವಿನ ಪಾತ್ರೆಯಿಂದ ಹಾಗೂ ದೆವ್ವಗಳ ಪಾತ್ರೆಯಿಂದ ಕುಡಿಯಲಾಗದು. ಪ್ರಭುವಿನ ಪಂಕ್ತಿಯಲ್ಲೂ ಅಂತೆಯೇ ದೆವ್ವಗಳ ಪಂಕ್ತಿಯಲ್ಲೂ ಊಟಮಾಡಲಾಗದು. ನಾವು ಪ್ರಭುವನ್ನು ಅಸೂಯೆಗೆಬ್ಬಿಸಬಹುದೇ? ಅವರಿಗಿಂತ ನಾವು ಬಲಾಢ್ಯರೇ?

ಪ್ರಭುವಿನ ವಾಕ್ಯ
ದೇವರಿಗೆ ಕೃತಜ್ಞತೆ ಸಲ್ಲಲಿ

ಕೀರ್ತನೆ 116: 12-13, 17-19. v.17
ಶ್ಲೋಕ: ಅರ್ಪಿಸುವೆ ಪ್ರಭೂ, ನಾ ನಿನಗೆ ಕೃತಜ್ಞತಾಬಲಿಗಳನು

1. ಪ್ರಭು ನನಗೆ ಮಾಡಿದ ಮಹೋಪಕಾರಗಳಿಗಾಗಿ
ನನ್ನಿಂದೇನು ಮಾಡಲು ಸಾಧ್ಯ ಪ್ರತಿಯಾಗಿ?
ಎತ್ತಿ ಹಿಡಿವೆನು ರಕ್ಷಣೆಯ ಪಾನಪಾತ್ರೆಯನು
ಪ್ರಖ್ಯಾತಪಡಿಸುವೆನು ಪ್ರಭುವಿನ ನಾಮವನು
ಶ್ಲೋಕ

2. ಅರ್ಪಿಸುವೆ ನಾ ನಿನಗೆ ಕೃತಜ್ಞತಾಬಲಿಗಳನು
ಪ್ರಖ್ಯಾತಪಡಿಸುವೆನು ಪ್ರಭುವಿನ ನಾಮವನು
ತೀರಿಸುವೆನು ಆತನ ಸಭೆಯ ಸಮ್ಮುಖದೊಳು
ಅರ್ಪಿಸುವೆನು ನಾ ಹೊತ್ತ ಆ ಹರಕೆಗಳನು
ಶ್ಲೋಕ

ಘೋಷಣೆ (ಕೀರ್ತನೆ 119: 135)
ಅಲ್ಲೆಲೂಯ, ಅಲ್ಲೆಲೂಯ.
ತೋರು ನಿನ್ನ ಮುಖದರ್ಶನ ಈ ದಾಸನಿಗೆ | ನೀ ಕಲಿಸು ನಿನ್ನ ನಿಬಂಧನೆಗಳನು ಎನಗೆ
ಅಲ್ಲೆಲೂಯ.

ಶುಭಸಂದೇಶ
ಲೂಕನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 6: 43-49
ಪ್ರಭೂ ನಿಮಗೆ ಮಹಿಮೆ ಸಲ್ಲಲಿ

"ನೀವು ನನ್ನನ್ನು ಸ್ವಾಮಿ, ಸ್ವಾಮಿ, ಎಂದು ಕರೆಯುತ್ತೀರಿ. ಆದರೆ ನನ್ನ ಮಾತಿನಂತೆ ನಡೆಯುವುದಿಲ್ಲವೇಕೆ?"

ಆ ಕಾಲದಲ್ಲಿ ಯೇಸು ತಮ್ಮ ಶಿಷ್ಯರಿಗೆ ಹೀಗೆಂದು ಹೇಳಿದರು: "ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ; ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ. ಪ್ರತಿಯೊಂದು ಮರದ ಗುಣವನ್ನು ಅದರ ಹಣ್ಣಿನಿಂದ ಗುರುತಿಸಬಹುದು. ಮುಳ್ಳುಗಿಡದಲ್ಲಿ ಅಂಜೂರ ಕೀಳುವಂತಿಲ್ಲ. ಮುಳ್ಳುಕಳ್ಳಿಯಲ್ಲಿ ದ್ರಾಕ್ಷಿ ಕೊಯ್ಯುವಂತಿಲ್ಲ. ಒಳ್ಳೆಯವನು ತನ್ನ ಹೃದಯವೆಂಬ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ. ಕೆಟ್ಟವನು ಕೆಟ್ಟ ಬೊಕ್ಕಸದಿಂದ ಕೆಟ್ಟದನ್ನೇ ಹೊರತರುತ್ತಾನೆ. ಹೃದಯದಲ್ಲಿ ತುಂಬಿರುವುದೇ ಬಾಯಿಮಾತಾಗಿ ತುಳುಕುತ್ತದೆ. ನೀವು ನನ್ನನ್ನು 'ಸ್ವಾಮಿ, ಸ್ವಾಮಿ,' ಎಂದು ಕರೆಯುತ್ತೀರಿ; ಆದರೆ ನನ್ನ ಮಾತಿನಂತೆ ನಡೆಯುವುದಿಲ್ಲವೇಕೆ? ನನ್ನ ಬಳಿಗೆ ಬಂದು ನನ್ನ ಮಾತನ್ನು ಕೇಳಿ, ಅದರಂತೆ ನಡೆಯುವ ಪ್ರತಿಯೊಬ್ಬನೂ ಎಂಥವನಿಗೆ ಸಮಾನನೆಂದು ನಿಮಗೆ ಹೇಳುತ್ತೇನೆ ಕೇಳಿ: ಆಳವಾಗಿ ಅಡಿಪಾಯ ತೆಗೆದು, ಬಂಡೆಕಲ್ಲಿನ ಮೇಲೆ ಅಸ್ತಿವಾರ ಹಾಕಿ, ಮನೆಕಟ್ಟಿದವನಿಗೆ ಅವನು ಸಮಾನನು; ಹುಚ್ಚು ಹೊಳೆ ಬಂದು ಪ್ರವಾಹವು ಆ ಮನೆಗೆ ಅಪ್ಪಳಿಸಿದರೂ ಅದು ಕದಲಲಿಲ್ಲ. ಕಾರಣ - ಆ ಮನೆಯನ್ನು ಸುಭದ್ರವಾಗಿ ಕಟ್ಟಲಾಗಿತ್ತು. ನನ್ನ ಮಾತನ್ನು ಕೇಳಿಯೂ ಅದರಂತೆ ನಡೆಯದವನು ಅಸ್ತಿವಾರವೇ ಇಲ್ಲದೆ ಬರಿಯ ಮಣ್ಣಿನ ಮೇಲೆ ಮನೆಕಟ್ಟಿದವನಿಗೆ ಸಮಾನನು. ಆ ಮನೆಗೆ ಪ್ರವಾಹವು ಅಪ್ಪಳಿಸಿದಾಗ ಒಡನೆಯೇ ಅದು ಕುಸಿದುಬಿತ್ತು. ಆ ಮನೆಗೆ ಒದಗಿದ ಪತನವೋ ವಿಪರೀತ!"

ಪ್ರಭುವಿನ ಶುಭಸಂದೇಶ
ಕ್ರಿಸ್ತರೇ ನಿಮಗೆ ಸ್ತುತಿ ಸಲ್ಲಲಿ

ಆಮೆನ್

5 days ago | [YT] | 25

Krista Dani

11-09-26
ಸೆಪ್ಟೆಂಬರ್ - 11 - ಶುಕ್ರವಾರ

ಪವಿತ್ರ ಬೈಬಲ್ ದಿನಚರಿ
ಸಾಧಾರಣ ಕಾಲದ ಇಪ್ಪತ್ತಮೂರನೇ ವಾರ
ಪೂಜಾವಿಧಿ ವರ್ಷ- 2
ಕೀರ್ತನಾ ಮಂಜರಿ: ವಾರ 23
ಪೂಜಾವಸ್ತ್ರ: ಹಸಿರು

ರೇವಾಸ್ ನ ಪುನೀತ ಮರಿಯಾ ಲೋಪೆಜ್
(ಕಾರ್ಮೆಲ್ ಸಭೆಯ ಕನ್ಯೆ) (ವಯಸ್ಸು - 80) (1560-1640)

ದೈವವಾಕ್ಯದ ವಿಧಿ

ಮೊದಲನೆಯ ವಾಚನ
ಪೌಲನು ಕೊರಿಂಥಿಯರಿಗೆ ಬರೆದ ಮೊದಲನೆಯ ಪತ್ರದಿಂದ ಇಂದಿನ ವಾಚನ 9: 16-19, 22-27

"ಕೆಲವರನ್ನಾದರೂ ಉದ್ಧರಿಸಲು ಎಲ್ಲರಿಗೂ ಎಲ್ಲವೂ ಆದೆ."

ಸಹೋದರರೇ, ಶುಭಸಂದೇಶವನ್ನು ನಾನು ಸಾರುತ್ತಿದ್ದೇನೆಂದು ಕೊಚ್ಚಿಕೊಳ್ಳುವುದಕ್ಕೂ ನನಗೆ ಆಸ್ಪದವಿಲ್ಲ. ಏಕೆಂದರೆ, ಸಾರಲೇಬೇಕೆಂಬ ಕರ್ತವ್ಯಕ್ಕೆ ನಾನು ಬದ್ಧನಾಗಿದ್ದೇನೆ. ಸಾರದಿದ್ದರೆ ನನಗೆ ಧಿಕ್ಕಾರವಿರಲಿ! ನಾನು ಸ್ವಂತ ಇಷ್ಟದಿಂದ ಈ ಕಾರ್ಯವನ್ನು ಕೈಗೊಂಡಿದ್ದರೆ ತಕ್ಕ ಸಂಭಾವನೆ ಇರುತ್ತಿತ್ತು. ಆದರೆ ಈ ಕರ್ತವ್ಯವನ್ನು ನನಗೆ ವಹಿಸಲಾಗಿದೆ. ಆದ್ದರಿಂದ ಕರ್ತವ್ಯಬದ್ಧನಾಗಿ ಮಾಡುತ್ತಿದ್ದೇನೆ. ಹಾಗಾದರೆ ನನಗೆ ಸಿಗುವ ಸಂಭಾವನೆಯಾದರೂ ಏನು? ಶುಭಸಂದೇಶವನ್ನು ಸಾರುವಾಗ ಜೀವನೋಪಾಯಕ್ಕಾಗಿ ನನಗಿರುವ ಹಕ್ಕನ್ನು ಬಳಸಿಕೊಳ್ಳದೆ ಉಚಿತವಾಗಿ ಸಾರುವ ಸೌಭಾಗ್ಯವೇ ನನ್ನ ಸಂಭಾವನೆ. ನಾನು ಸ್ವತಂತ್ರನು, ಯಾರಿಗೂ ದಾಸನಲ್ಲ. ಆದರೂ ಆದಷ್ಟು ಜನರನ್ನು ಗಳಿಸಿಕೊಳ್ಳಲೆಂದು ಎಲ್ಲರಿಗೂ ದಾಸನಾದೆ. ವಿಶ್ವಾಸದಲ್ಲಿ ದುರ್ಬಲರನ್ನು ಗಳಿಸಿಕೊಳ್ಳಲು ನಾನೂ ದುರ್ಬಲನಂತಾದೆ. ಹೇಗಾದರೂ ಸರಿ, ಕೆಲವರನ್ನಾದರೂ ಉದ್ಧರಿಸಲು ಎಲ್ಲರಿಗೂ ಎಲ್ಲವೂ ಆದೆ. ಶುಭಸಂದೇಶದ ಸೌಭಾಗ್ಯದಲ್ಲಿ ಪಾಲುಗೊಳ್ಳಲೆಂದು ಇದೆಲ್ಲವನ್ನು ಶುಭಸಂದೇಶಕ್ಕಾಗಿಯೇ ಮಾಡುತ್ತೇನೆ. ನಿಮಗೆ ತಿಳಿದಿರುವಂತೆ ಕ್ರೀಡಾಂಗಣದಲ್ಲಿ ಅನೇಕರು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ; ಆದರೆ ಪ್ರಥಮ ಬಹುಮಾನ ದೊರಕುವುದು ಒಬ್ಬನಿಗೆ ಮಾತ್ರ. ಅಂತೆಯೇ ಬಹುಮಾನವನ್ನು ಪಡೆದುಕೊಳ್ಳಲು ನೀವೂ ಓಡಿ. ಕ್ರೀಡಾಪಟುಗಳೆಲ್ಲರೂ ತಮ್ಮನ್ನು ಹತೋಟಿಯಲ್ಲಿಟ್ಟುಕೊಳ್ಳುತ್ತಾರೆ. ಅಳಿದುಹೋಗುವ ಪದಕದ ಗಳಿಕೆಗಾಗಿ ಪ್ರಯತ್ನ ಮಾಡುತ್ತಾರೆ. ನಾವಾದರೋ ಅಮರ ಪದಕದ ಗಳಿಕೆಗಾಗಿ ಶ್ರಮಿಸುತ್ತೇವೆ. ನಾನಾದರೋ ಗೊತ್ತುಗುರಿಯಲ್ಲದವನಂತೆ ಓಡುವುದಿಲ್ಲ, ಗಾಳಿಯೊಡನೆ ಗುದ್ದಾಡುವವನಂತೆ ಹೋರಾಡುವುದಿಲ್ಲ. ಇತರರಿಗೆ ಕರೆಕೊಟ್ಟ ಮೇಲೆ ನಾನೇ ಅಯೋಗ್ಯನಾಗದಂತೆ, ನನ್ನ ದೇಹವನ್ನು ದಂಡಿಸಿ, ನನ್ನನ್ನೇ ನಾನು ಹತೋಟಿಯಲ್ಲಿಟ್ಟುಕೊಳ್ಳುತ್ತೇನೆ.

ಪ್ರಭುವಿನ ವಾಕ್ಯ
ದೇವರಿಗೆ ಕೃತಜ್ಞತೆ ಸಲ್ಲಲಿ

ಕೀರ್ತನೆ 84: 2-3, 4-5, 11. v. 1
ಶ್ಲೋಕ: ಸ್ವರ್ಗಸೇನಾಧೀಶ್ವರಾ, ನಿನ್ನ ನಿವಾಸಗಳೆನಿತೋ ಸುಂದರ.

1. ಹಂಬಲಿಸಿ ಸೊರಗಿಹೋಗಿದೆ ಎನ್ನ ಮನ
ಕಾಣಬೇಕೆಂದು ಪ್ರಭುವಿನ ಪ್ರಾಂಗಣ
ಸ್ವಾಮಿ ದೇವಾ, ಎನ್ನರಸಾ, ಸ್ವರ್ಗ ಸೇನಾಧೀಶ್ವರಾ
ದೊರಕಿದೆ ಗುಬ್ಬಿಗೆ ಗೂಡು ನಿನ್ನ ವೇದಿಕೆಯ ಹತ್ತಿರ
ಪಾರಿವಾಳಕ್ಕೂ ಅಲ್ಲೇ ಇದೆ ಮರಿಯಿಡಲು ಆಗರ
ಶ್ಲೋಕ

2. ನಿನ್ನ ಮಂದಿರದಲ್ಲಿ ವಾಸಿಸುವವರು ಧನ್ಯರು
ನಿರಂತರವೂ ನಿನ್ನ ಗುಣಗಾನ ಮಾಡುವರವರು
ನಿನ್ನಿಂದ ಶಕ್ತಿ ಪಡೆಯುವವರು ಧನ್ಯರು
ಸಿಯೋನ್ ಶಿಖರಕ್ಕವರು ಪ್ರಿಯ ಯಾತ್ರಿಕರು
ಶ್ಲೋಕ

3. ದೇವನೆಮಗೆ ಬೆಳಕುಕೊಡುವ ಸೂರ್ಯನು
ಕಾದಿಟ್ಟು ರಕ್ಷಿಸುವ ಗುರಾಣಿಯು
ಸನ್ಮಾರ್ಗಿಗೆ ಈವನು ಸಕಲ ವರಗಳನು
ಶ್ಲೋಕ

ಘೋಷಣೆ (ಕೀರ್ತನೆ 119: 105)
ಅಲ್ಲೆಲೂಯ, ಅಲ್ಲೆಲೂಯ.
ನಿನ್ನ ವಾಕ್ಯ ನನಗೆ ದಾರಿದೀಪ | ನನ್ನ ಕಾಲಿನ ನಡೆಗೆ ಕೈದೀಪ
ಅಲ್ಲೆಲೂಯ.

ಶುಭಸಂದೇಶ
ಲೂಕನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 6: 39-42
ಪ್ರಭೂ, ನಿಮಗೆ ಮಹಿಮೆ ಸಲ್ಲಲಿ

"ಕುರುಡನು ಕುರುಡನಿಗೆ ದಾರಿ ತೋರಿಸಲಾದೀತೇ?"

ಆ ಕಾಲದಲ್ಲಿ ಯೇಸು ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು:
"ಕುರುಡನು ಕುರುಡನಿಗೆ ದಾರಿ ತೋರಿಸಲಾದೀತೇ? ಇಬ್ಬರೂ ಹಳ್ಳದಲ್ಲಿ ಬೀಳುವುದಿಲ್ಲವೆ? ಗುರುವಿಗಿಂತ ಶಿಷ್ಯನು ಶ್ರೇಷ್ಠನಲ್ಲ; ಆದರೂ ಪೂರ್ಣ ಶಿಕ್ಷಣ ಪಡೆದ ಪ್ರತಿಯೊಬ್ಬನೂ ಗುರುವಿನಂತೆ ಆಗುವನು. ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ನೋಡದೆ, ಸಹೋದರನ ಕಣ್ಣಿನಲ್ಲಿರುವ ಅಣುವನ್ನು ಗಮನಿಸುವುದೇಕೆ? ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನೇ ಕಾಣಲಾರದ ನೀನು, 'ತಮ್ಮಾ ತಾಳು, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಬಿಡುತ್ತೇನೆ,' ಎಂದು ಸಹೋದರನಿಗೆ ಹೇಗೆ ಹೇಳಬಲ್ಲೆ? ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದುಹಾಕು, ಅನಂತರ ನಿನ್ನ ಸೋದರನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಹಾಕಲು ನಿನಗೆ ಕಣ್ಣು ನಿಚ್ಚಳವಾಗಿ ಕಾಣಿಸುವುದು."

ಪ್ರಭುಕ್ರಿಸ್ತರ ಶುಭಸಂದೇಶ
ಕ್ರಿಸ್ತರೇ, ನಿಮಗೆ ಸ್ತುತಿ ಸಲ್ಲಲಿ

ಆಮೆನ್

6 days ago | [YT] | 25

Krista Dani

10-09-26
ಸೆಪ್ಟೆಂಬರ್ - 10 - ಗುರುವಾರ

ಪವಿತ್ರ ಬೈಬಲ್ ದಿನಚರಿ
ಸಾಧಾರಣ ಕಾಲದ ಇಪ್ಪತ್ತಮೂರನೇ ವಾರ
ಪೂಜಾವಿಧಿ ವರ್ಷ- 2
ಕೀರ್ತನಾ ಮಂಜರಿ: ವಾರ 3
ಪೂಜಾವಸ್ತ್ರ: ಹಸಿರು

ಟೊಲೆಂಟಿನೊದ ಸಂತ ನಿಕೋಲಸ್ (ಪಾಪವಿಖ್ಯಾಪನಾ ಯಾಜಕ)
(ವಯಸ್ಸು - 59) (1248-1305)

ದೈವವಾಕ್ಯದ ವಿಧಿ

ಮೊದಲನೆಯ ವಾಚನ
ಪೌಲನು ಕೊರಿಂಥಿಯರಿಗೆ ಬರೆದ ಮೊದಲನೆಯ ಪತ್ರದಿಂದ ಇಂದಿನ ವಾಚನ 8: 1-7, 11-13

"ನೀವು ನಮ್ಮ ಸೋದರರ ಮನಸ್ಸಾಕ್ಷಿಯನ್ನು ನೋಯಿಸಿ, ಯೇಸುಕ್ರಿಸ್ತರ ವಿರುದ್ಧವೇ ಪಾಪಮಾಡುತ್ತೀರಿ."

ಸಹೋದರರೇ, ವಿಗ್ರಹಗಳಿಗೆ ನೈವೇದ್ಯ ಮಾಡಿದ ಆಹಾರ ಪದಾರ್ಥಗಳ ವಿಷಯವಾಗಿ ನಾನು ಹೇಳುವುದೇನೆಂದರೆ: "ನಮಗೆಲ್ಲರಿಗೂ ಜ್ಞಾನೋದಯವಾಗಿದೆ" ಎಂದು ಹೇಳಿಕೊಳ್ಳುತ್ತೀರಿ. ಜ್ಞಾನವು ನಮ್ಮನ್ನು ಆಹಂಕಾರಿಗಳನ್ನಾಗಿ ಮಾಡುತ್ತದೆ. ಪ್ರೀತಿಯಾದರೋ ಭಕ್ತಿಯನ್ನು ವೃದ್ಧಿಗೊಳಿಸುತ್ತದೆ. ಯಾರಾದರೂ ತಾನು ಬಲ್ಲವನೆಂದು ಕೊಚ್ಚಿಕೊಳ್ಳುವುದಾದರೆ ತಾನು ತಿಳಿಸಬೇಕಾದುದನ್ನು ಅವನು ಸರಿಯಾಗಿ ತಿಳಿದಿರುವುದಿಲ್ಲ. ಆದರೆ ದೇವರನ್ನು ಪ್ರೀತಿಸುವವನನ್ನು ದೇವರು ಗುರುತಿಸುತ್ತಾರೆ. ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನುವ ಬಗ್ಗೆ ನನ್ನ ಅಭಿಪ್ರಾಯ ಹೀಗಿದೆ: ವಿಗ್ರಹಗಳಿಗೆ ನಿಜವಾದ ಅಸ್ತಿತ್ವವಿಲ್ಲ. ದೇವರು ಒಬ್ಬರೇ ಹೊರತು ಬೇರೆ ದೇವರಿಲ್ಲ. ಇದು ನಿಮಗೆ ತಿಳಿದ ವಿಷಯ. "ದೇವರುಗಳು" ಎನಿಸಿಕೊಳ್ಳುವವರು ಇಹಪರಗಳಲ್ಲಿ ಇರಬಹುದು; ಅಂಥ ಹಲವಾರು "ದೇವರು"ಗಳನ್ನೂ "ಪ್ರಭು"ಗಳನ್ನೂ ಪೂಜಿಸುವುದುಂಟು. ಆದರೆ ನಮಗೆ ಒಬ್ಬರೇ ದೇವರು. ಅವರು ನಮ್ಮ ಪರಮ ಪಿತ; ಎಲ್ಲಾ ಸೃಷ್ಟಿಗೂ ಮೂಲಕರ್ತ, ನಾವಿರುವುದು ಅವರಿಗಾಗಿಯೇ. ನಮಗೆ ಒಬ್ಬರೇ ಪ್ರಭು; ಅವರೇ ಯೇಸುಕ್ರಿಸ್ತ. ಅವರ ಮುಖಾಂತರವೇ ಸಮಸ್ತವೂ ಉಂಟಾಯಿತು. ಅವರ ಮುಖಾಂತರವೇ ನಾವು ಜೀವಿಸುತ್ತೇವೆ. ಆದರೆ ಎಲ್ಲರಿಗೂ ಇದರ ಅರಿವಿಲ್ಲ. ಕೆಲವರು ಸಾಂಪ್ರದಾಯಕವಾಗಿ ಬಂದ ವಿಗ್ರಹಾರಧನೆಯಲ್ಲಿ ಭಾಗವಹಿಸಿ, ವಿಗ್ರಹಕ್ಕೆ ಅರ್ಪಿತವಾದ ನೈವೇದ್ಯ ಪದಾರ್ಥವನ್ನು ತಿನ್ನುತ್ತಾರೆ. ಆದರೆ ಅವರ ಮನಸ್ಸಾಕ್ಷಿ ದುರ್ಬಲ. ಈ ನಿನ್ನ ಅರಿವಿನಿಂದ ದುರ್ಬಲ ಸಹೋದರನು ನಾಶಕ್ಕೆ ಗುರಿಯಾಗುತ್ತಾನೆ. ಯೇಸು ಕ್ರಿಸ್ತರು ಅವನಿಗಾಗಿಯೂ ಪ್ರಾಣತ್ಯಾಗ ಮಾಡಲಿಲ್ಲವೇ? ಹೀಗೆ ನೀವು ನಿಮ್ಮ ಸಹೋದರರ ದುರ್ಬಲ ಮನಸ್ಸಾಕ್ಷಿಯನ್ನು ನೋಯಿಸಿ, ಅವರ ವಿರುದ್ಧ ಪಾಪ ಕಟ್ಟಿಕೊಳ್ಳುವುದರಿಂದ ಯೇಸುಕ್ರಿಸ್ತರ ವಿರುದ್ಧವೇ ಪಾಪಮಾಡುತ್ತೀರಿ. ನಾನು ತಿನ್ನುವ ಆಹಾರ ನನ್ನ ಸೋದರನ ವಿಶ್ವಾಸಕ್ಕೆ ಅಡ್ಡಿಯಾಗುವುದಾದರೆ ಎಂದಿಗೂ ನಾನದನ್ನು ತಿನ್ನಲಾರೆ. ಅವನ ವಿಶ್ವಾಸಕ್ಕೆ ಅಡ್ಡಿಯನ್ನು ತರಲಾರೆ.

ಪ್ರಭುವಿನ ವಾಕ್ಯ
ದೇವರಿಗೆ ಕೃತಜ್ಞತೆ ಸಲ್ಲಲಿ

ಕೀರ್ತನೆ 139: 1-3, 13-14, 23-24. v.24
ಶ್ಲೋಕ: ನಡೆಸೆನ್ನನು ಪ್ರಭೂ, ಆ ಸನಾತನ ಪಥದಲಿ.

1. ಪ್ರಭೂ, ನೀ ಅರಿತುಕೊಂಡಿರುವೆ ಅಂತರಂಗವನು
ನಾ ಕೂರುವುದು ಏಳುವುದೂ ನಿನಗೆ ಗೊತ್ತಿದೆ
ನನ್ನ ಆಲೋಚನೆ ದೂರದಿಂದಲೇ ನಿನಗೆ ತಿಳಿದಿದೆ
ನನ್ನ ನಡೆಯನು, ನಿದ್ರೆಯನು ನೀ ಬಲ್ಲಾತ
ನನ್ನ ನಡತೆಯೆಲ್ಲವು ನಿನಗೆ ಸುಪರಿಚಿತ
ಶ್ಲೋಕ

2. ನನ್ನ ಅಂತರಂಗವನು ಉಂಟುಮಾಡಿದಾತ ನೀನು
ತಾಯ ಗರ್ಭದಲೇ ನನ್ನ ರೂಪಿಸಿದಾತ ನೀನು
ನಿನ್ನ ಕೃತ್ಯಗಳು ಅದ್ಭುತಕರ ಹಾಗೂ ವಿಚಿತ್ರ
ನನ್ನ ಬಗ್ಗೆ ನಿನಗಿರುವ ಪೂರ್ಣ ಅರಿವು ಸಮರ್ಥ
ನಿನಗೆ ವಂದನೆ, ನೀ ನನ್ನ ಭಯಭಕ್ತಿಗೆ ಪಾತ್ರ
ಶ್ಲೋಕ

3. ತಿಳಿದುಕೋ ದೇವಾ, ನನ್ನ ಹೃದಯವನು
ಪರೀಕ್ಷಿಸಿ ಅರಿತುಕೋ ನನ್ನ ಆಲೋಚನೆಗಳನು ಪರಿಶೋಧಿಸಿ
ಕೇಡಿದೆಯೇ ನೋಡು ನನ್ನ ಮಾರ್ಗದಲಿ
ನಡೆಸೆನ್ನನು ಆ ಸನಾತನ ಪಥದಲಿ
ಶ್ಲೋಕ

ಘೋಷಣೆ (ಕೀರ್ತನೆ 119: 88)
ಅಲ್ಲೆಲೂಯ, ಅಲ್ಲೆಲೂಯ.
ನಿನ್ನಚಲ ಪ್ರೀತಿಗನುಸಾರ ಚೈತನ್ಯಗೊಳಿಸೆನ್ನನು | ಕೈಗೊಳ್ಳುವೆನಾಗ ನಿನ್ನ ಬಾಯುಸುರಿದ ಕಟ್ಟಳೆಗಳನು
ಅಲ್ಲೆಲೂಯ.

ಶುಭಸಂದೇಶ
ಲೂಕನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 6: 27-38
ಪ್ರಭೂ, ನಿಮಗೆ ಮಹಿಮೆ ಸಲ್ಲಲಿ

"ನಿಮ್ಮ ತಂದೆಯಾದ ದೇವರಂತೆ ನೀವೂ ದಯಾವಂತರಾಗಿರಿ."

ಆ ಕಾಲದಲ್ಲಿ ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು:
"ನನ್ನನ್ನು ಆಲಿಸುತ್ತಿರುವವರೇ, ನನ್ನ ಮಾತನ್ನು ಕೇಳಿರಿ: 'ನಿಮ್ಮ ಶತ್ರುಗಳನ್ನು ಪ್ರೀತಿಸಿರಿ, ನಿಮ್ಮನ್ನು ದ್ವೇಷಿಸುವವರನ್ನು ಸತ್ಕರಿಸಿರಿ. ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ, ನಿಮ್ಮನ್ನು ನಿಂದಿಸುವವರಿಗಾಗಿ ಪ್ರಾರ್ಥಿಸಿರಿ. ನಿನ್ನ ಒಂದು ಕೆನ್ನೆಗೆ ಹೊಡೆಯುವವನಿಗೆ ಇನ್ನೊಂದು ಕೆನ್ನೆಯನ್ನು ಒಡ್ಡು, ನಿನ್ನ ಮೇಲಂಗಿಯನ್ನು ಕಿತ್ತುಕೊಳ್ಳುವವನಿಗೆ ಒಳ ಅಂಗಿಯನ್ನು ತೆಗೆದುಕೊಳ್ಳಲು ಬಿಡು. ಕೇಳಿಕೊಳ್ಳುವ ಪ್ರತಿಯೊಬ್ಬನಿಗೂ ಕೊಡು, ನಿನ್ನ ಸೊತ್ತನ್ನು ಕಸಿದುಕೊಳ್ಳುವವನಿಂದ ತಿರುಗಿ ಕೇಳದಿರು. ಅಲ್ಲದೆ, ಇತರರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ಅದೇನು ಪುಣ್ಯ? ಪಾಪಿಷ್ಠರು ಸಹ ತಮ್ಮನ್ನು ಪ್ರೀತಿಸುವವರನ್ನು ಪ್ರೀತಿಸುತ್ತಾರಲ್ಲವೇ? ಉಪಕಾರ ಮಾಡಿದವರಿಗೇ ಉಪಕಾರ ಮಾಡಿದರೆ ಅದೇನು ಪುಣ್ಯ? ಪಾಪಿಷ್ಟರು ಸಹ ಹಾಗೆಯೇ ಮಾಡುತ್ತಾರಲ್ಲವೇ? ಸಾಲತೀರಿಸುವಂಥ ನಂಬಿಗಸ್ಥರಿಗೇ ಸಾಲಕೊಟ್ಟರೆ ಅದೇನು ಪುಣ್ಯ? ಕೊಟ್ಟಷ್ಟು ಬರುತ್ತದೆಂದು ಪಾಪಿಷ್ಟರು ಸಹ ಸಾಲ ಕೊಡುತ್ತಾರಲ್ಲವೇ? ಆದುದರಿಂದ ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ಅವರಿಗೆ ಒಳಿತನ್ನೇ ಮಾಡಿರಿ. ಪ್ರತಿಯಾಗಿ ಪಡೆಯುವ ಆಶೆಯಿಡದೆ ಸಾಲ ಕೊಡಿ. ಆಗ ನಿಮಗೆ ಮಹತ್ತಾದ ಸಂಭಾವನೆ ದೊರಕುವುದು. ನೀವು ಮಹೋನ್ನತ ದೇವರ ಮಕ್ಕಳಾಗುವಿರಿ. ದೇವರು ದುರ್ಜನರಿಗೂ ಒಳ್ಳೆಯವರು, ಕೃತಘ್ನರಿಗೂ ಒಳ್ಳೆಯವರು. ನಿಮ್ಮ ತಂದೆಯಾದ ದೇವರಂತೆ ನೀವು ದಯಾವಂತರಾಗಿರಿ. ನೀವು ಇತರರ ಬಗ್ಗೆ ತೀರ್ಪು ಕೊಡಬೇಡಿ, ಆಗ ದೇವರು ನಿಮ್ಮ ಬಗ್ಗೆ ತೀರ್ಪು ಕೊಡುವುದಿಲ್ಲ; ಪರರನ್ನು ದಂಡನೆಗೆ ಗುರಿಮಾಡಬೇಡಿ, ದೇವರು ನಿಮ್ಮನ್ನು ದಂಡನೆಗೆ ಗುರಿಮಾಡುವುದಿಲ್ಲ. ಪರರನ್ನು ಕ್ಷಮಿಸಿರಿ, ದೇವರು ನಿಮ್ಮನ್ನೂ ಕ್ಷಮಿಸುವರು; ಪರರಿಗೆ ಕೊಡಿ, ದೇವರು ನಿಮಗೂ ಕೊಡುವರು; ಅಳತೆಯಲ್ಲಿ ತುಂಬಿ, ಕುಲಕಿ, ಅದುಮಿ ತುಳುಕುವಂತೆ ಅಳೆದು ನಿಮ್ಮ ಮಡಲಿಗೆ ಹಾಕುವರು. ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದು ಕೊಡುವರು," ಎಂದರು.

ಪ್ರಭುಕ್ರಿಸ್ತರ ಶುಭಸಂದೇಶ
ಕ್ರಿಸ್ತರೇ, ನಿಮಗೆ ಸ್ತುತಿ ಸಲ್ಲಲಿ

ಆಮೆನ್

1 week ago | [YT] | 24

Krista Dani

09-09-26
ಸೆಪ್ಟೆಂಬರ್ - 09 - ಬುಧವಾರ

ಪವಿತ್ರ ಬೈಬಲ್ ದಿನಚರಿ
ಸಾಧಾರಣ ಕಾಲದ ಇಪ್ಪತ್ತಮೂರನೇ ವಾ
ಪೂಜಾವಿಧಿ ವರ್ಷ- 2
ಕೀರ್ತನಾ ಮಂಜರಿ: ವಾರ 3
ಪೂಜಾವಸ್ತ್ರ: ಹಸಿರು

ಸಂತ ಪೀಟರ್ ಕ್ಲಾವರ್ (ಯಾಜಕ)
(ವಯಸ್ಸು - 73) (1581-1654)

ದೈವವಾಕ್ಯದ ವಿಧಿ

ಮೊದಲನೆಯ ವಾಚನ
ಪೌಲನು ಕೊರಿಂಥಿಯರಿಗೆ ಬರೆದ ಮೊದಲನೆಯ ಪತ್ರದಿಂದ ಇಂದಿನ ವಾಚನ 7:25-31

"ನಿನಗೆ ವಿವಾಹವಾಗಿದೆಯೇ, ವಿವಾಹ ವಿಚ್ಛೇದನಕ್ಕೆ ಯತ್ನಿಸಬೇಡ."

ಸಹೋದರರೇ, ಅವಿವಾಹಿತರ ಬಗ್ಗೆ ಪ್ರಭುವಿನಿಂದ ಬಂದ ಕಟ್ಟಳೆ ಯಾವುದೂ ನನ್ನಲ್ಲಿಲ್ಲ. ಪ್ರಭುವಿನ ಕೃಪೆಯಿಂದ ನಂಬಿಕೆಗೆ ಅರ್ಹನಾದ ವ್ಯಕ್ತಿಯಂತೆ ನನ್ನ ಅಭಿಪ್ರಾಯಗಳನ್ನು ನಿಮ್ಮ ಮುಂದೆ ಇಡುತ್ತೇನೆ. ಇಂದಿನ ಸಂದಿಗ್ಧ ಪರಿಸ್ಥಿತಿಯಲ್ಲಿ ಒಬ್ಬನು ತಾನು ಇದ್ದ ಸ್ಥಿತಿಯಲ್ಲೇ ಇರುವುದು ಉತ್ತಮವೆಂದು ಭಾವಿಸುತ್ತೇನೆ. ನಿನಗೆ ವಿವಾಹವಾಗಿದೆಯೋ ವಿವಾಹ ವಿಚ್ಛೇದನಕ್ಕೆ ಯತ್ನಿಸಬೇಡ. ನೀನು ಅವಿವಾಹಿತನೋ? ವಿವಾಹವಾಗಲು ಅವಸರಪಡಬೇಡ. ಹಾಗೇನಾದರೂ ನೀನು ವಿವಾಹ ಮಾಡಿಕೊಂಡರೆ ಅದು ಪಾಪವಲ್ಲ. ಅಂತೆಯೇ, ಅವಿವಾಹಿತ ಸ್ತ್ರೀಯೊಬ್ಬಳು ವಿವಾಹ ಮಾಡಿಕೊಂಡರೆ ಅದು ಪಾಪವಲ್ಲ. ಆದರೆ ದಂಪತಿಗಳಿಗೆ ತಾಪತ್ರಯಗಳು ಅನೇಕ. ಇವುಗಳು ನಿಮ್ಮನ್ನು ಬಾಧಿಸದಿರಲೆಂಬುದೇ ನನ್ನ ಹಾರೈಕೆ. ಪ್ರಿಯ ಸಹೋದರರೇ, ನನ್ನ ಅಭಿಪ್ರಾಯ ಇದು: ಉಳಿದಿರುವ ಕಾಲವು ಕೊಂಚಮಾತ್ರ. ಆದ್ದರಿಂದ ಮದುವೆಯಾದವರು ಮದುವೆಯಾಗದವರೋ ಎಂಬಂತೆ ನಡೆದುಕೊಳ್ಳಲಿ. ದುಃಖಿತರು ದುಃಖವಿಲ್ಲದವರಂತೆ, ಸಂತೋಷಭರಿತರು ಸಂತೋಷರಹಿತರಂತೆ ಹಾಗು ಕೊಂಡುಕೊಳ್ಳುವವರು ಕೊಂಡದ್ದು ತಮ್ಮದಲ್ಲವೋ ಎಂಬಂತೆ ನಡೆದುಕೊಳ್ಳಲಿ. ಲೋಕದ ವ್ಯವಹಾರದಲ್ಲಿ ಇರುವವರು ಅದರಲ್ಲಿಯೇ ತಲ್ಲೀನರಾಗದಿರಲಿ. ಏಕೆಂದರೆ, ಲೋಕದ ರೂಪರೇಷೆಗಳು ಗತಿಸಿಹೋಗುತ್ತವೆ.

ಪ್ರಭುವಿನ ವಾಕ್ಯ
ದೇವರಿಗೆ ಕೃತಜ್ಞತೆ ಸಲ್ಲಲಿ

ಕೀರ್ತನೆ 45:11-12,14-17, V.10
ಶ್ಲೋಕ: ಎಲೇ ಕುವರಿಯೇ ಕೇಳು, ಎನ್ನ ಮೊರೆಗೆ ಕಿವಿಗೊಡು.

1. ಎಲೇ ಕುವರಿಯೇ ಕೇಳು, ಎನ್ನ ಮೊರೆಗೆ ಕಿವಿಗೊಡು
ನಿನ್ನ ಜನರನು ತೌರುಮನೆಯನು ಮರೆತುಬಿಡು
ಆಗ ಬಯಸುವನು ರಾಜ ನಿನ್ನ ಲಾವಣ್ಯವನು
ಆತನ ಪಾದಕ್ಕೆರಗು, ಆತನೇ ನಿನಗೊಡೆಯನು
ಶ್ಲೋಕ

2. ಭೂಷಿತಳಾಗಿಹಳಾಕೆ ಕಸೂತಿ ಕೆಲಸದ ವಸ್ತ್ರಗಳಿಂದ
ಬರುತಿಹಳು ರಾಜನ ಬಳಿಗೆ ಸಖಿಯರ ಪರಿವಾರ ಸಮೇತ
ಆಗಮಿಸುತಿಹರಿದೋ ಸಂಭ್ರಮ ಸಡಗರದಿಂದ
ಪ್ರವೇಶಿಸುತಿಹರು ಅರಮನೆಯನು ಉತ್ಸಾಹದಿಂದ
ಶ್ಲೋಕ

3. ನಿನ್ನ ಪುತ್ರರು ಅಲಂಕರಿಸುವರು ಪೂರ್ವಜರ ಸ್ಥಾನವನು
ನೇಮಕಗೊಳ್ಳುವರು ಉತ್ತರಾಧಿಕಾರಿಗಳಾಗಿ ಜಗದೊಳು
ಶ್ಲೋಕ

ಘೋಷಣೆ (ಕೀರ್ತನೆ 119:36,29)
ಅಲ್ಲೆಲೂಯ, ಅಲ್ಲೆಲೂಯ!
ನಿನ್ನ ಕಟ್ಟಳೆಯ ಕಡೆ ಎನ್ನ ಮನವ ತಿರುಗಿಸಯ್ಯಾ | ಧರ್ಮಶಾಸ್ತ್ರವನು ಎನಗೆ ಅನುಗ್ರಹಿಸಯ್ಯಾ
ಅಲ್ಲೆಲೂಯ!

ಶುಭಸಂದೇಶ
ಲೂಕನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 6:20-26
ಪ್ರಭೂ, ನಿಮಗೆ ಮಹಿಮೆ ಸಲ್ಲಲಿ

"ದೀನದಲಿತರೇ, ನೀವು ಭಾಗ್ಯವಂತರು! ಆದರೆ ಧನಿಕರೇ, ನಿಮಗೆ ಧಿಕ್ಕಾರ."

ಆ ಕಾಲದಲ್ಲಿ ಯೇಸು ತಮ್ಮ ಶಿಷ್ಯರ ಕಡೆಗೆ ದೃಷ್ಟಿಸಿ ನೋಡಿ ಹೀಗೆಂದು ಬೋಧಿಸಿದರು:
"ದೀನದಲಿತರೇ, ನೀವು ಭಾಗ್ಯವಂತರು! ದೇವರ ಸಾಮ್ರಾಜ್ಯ ನಿಮ್ಮದು.
ಈಗ ಹಸಿದಿರುವವರೇ, ನೀವು ಭಾಗ್ಯವಂತರು! ನಿಮಗೆ ಸಂತೃಪ್ತಿಯಾಗುವುದು.
ಈಗ ಅತ್ತು ಗೋಳಾಡುವವರೇ, ನೀವು ಭಾಗ್ಯವಂತರು! ನೀವು ನಕ್ಕುನಲಿದಾಡುವಿರಿ!
ನರಪುತ್ರನ ಶಿಷ್ಯರು ನೀವಾದುದರಿಂದ ನಿಮ್ಮನ್ನು ದ್ವೇಷಿಸಿ, ಬಹಿಷ್ಕರಿಸಿ, ಧಿಕ್ಕರಿಸಿ, ನಿಮ್ಮ ಹೆಸರೆತ್ತುವುದು ಕೂಡ ಕೇಡೆಂದು ತಿರಸ್ಕರಿಸುವಾಗ ನೀವು ಭಾಗ್ಯವಂತರು! ಈ ಜನರ ಪೂರ್ವಜರು ಪ್ರವಾದಿಗಳನ್ನು ಹೀಗೆಯೇ ತೆಗಳಿದ್ದರು.
ಇದೆಲ್ಲಾ ಸಂಭವಿಸುವಾಗ ಹಿಗ್ಗಿ ನಲಿದಾಡಿರಿ. ಏಕೆಂದರೆ, ಸ್ವರ್ಗದಲ್ಲಿ ನಿಮಗೆ ಲಭಿಸುವ ಪ್ರತಿಫಲವು ಮಹತ್ತರವಾದುದು. ಆದರೆ ಧನಿಕರೇ, ನಿಮಗೆ ಧಿಕ್ಕಾರ! ನೀವು ಸುಖಜೀವನವನ್ನು ಅನುಭವಿಸಿ ಆಗಿದೆ.
ಈಗ ತಿಂದು ತೃಪ್ತಿಯಾಗಿರುವವರೇ, ನಿಮಗೆ ಧಿಕ್ಕಾರ! ನೀವು ಹಸಿದು ಬಳಲುವಿರಿ.
ಈಗ ನಕ್ಕುನಲಿದಾಡುವವರೇ, ನಿಮಗೆ ಧಿಕ್ಕಾರ! ನೀವು ದುಃಖಿಸಿ ಗೋಳಾಡುವಿರಿ.
ಜನರೆಲ್ಲರಿಂದ ಹೊಗಳಿಸಿಕೊಳ್ಳುವಾಗ ನಿಮಗೆ ಧಿಕ್ಕಾರ!
ಕಪಟ ಪ್ರವಾದಿಗಳೂ ಈ ಜನರ ಪೂರ್ವಜರಿಂದ ಹೀಗೆಯೇ ಹೊಗಳಿಸಿಕೊಂಡಿದ್ದರು."

ಪ್ರಭುಕ್ರಿಸ್ತರ ಶುಭಸಂದೇಶ
ಕ್ರಿಸ್ತರೇ, ನಿಮಗೆ ಸ್ತುತಿ ಸಲ್ಲಲಿ

ಆಮೆನ್

1 week ago | [YT] | 21

Krista Dani

08-09-26
ಸೆಪ್ಟೆಂಬರ್ - 08 - ಮಂಗಳವಾರ

ಪವಿತ್ರ ಬೈಬಲ್ ದಿನಚರಿ
ಸಾಧಾರಣ ಕಾಲದ ಇಪ್ಪತ್ತಮೂರನೇ ವಾರ
ಪೂಜಾವಿಧಿ - ಹಬ್ಬ
ಕೀರ್ತನಾ ಮಂಜರಿ: ಹಬ್ಬದ್ದು
ಪೂಜಾವಸ್ತ್ರ: ಬಿಳಿ

ಪೂಜ್ಯ ಕನ್ಯಾಮರಿಯಮ್ಮನವರ ಜಯಂತಿಯ ಹಬ್ಬ (ಜನ್ಮೋತ್ಸವ)

ದೈವವಾಕ್ಯದ ವಿಧಿ

ಮೊದಲನೆಯ ವಾಚನ
ಪ್ರವಾದಿ ಮೀಕನ ಗ್ರಂಥದಿಂದ ಇಂದಿನ ವಾಚನ 5:1-4

"ದಿನ ತುಂಬಿದವಳು ಮಗನನ್ನು ಹೆರುವಳು"

ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ, ಮೂಲ, ಪುರಾತನವಾದುದು. ಅನಾದಿ ಕಾಲದಿಂದ ಬಂದುದು. ಇಂತಿರಲು ದಿನ ತುಂಬಿದವಳು ಹೆರುವವರೆಗೂ ಸರ್ವೇಶ್ವರ ತನ್ನ ಜನರನ್ನು ಶತ್ರುಗಳ ವಶಕ್ಕೆ ಬಿಟ್ಟುಬಿಡುವರು. ಅನಂತರ ಅಳಿದುಳಿದ ಸಹೋದರರು ಬಂದು ಇಸ್ರಯೇಲ್ ಜನರೊಂದಿಗೆ ಸೇರಿಕೊಳ್ಳುವರು. ಆತನು ಸರ್ವೇಶ್ವರನಿಂದ ಬರುವ ಶಕ್ತಿಯಿಂದಲೂ ಆ ಸ್ವಾಮಿದೇವರ ನಾಮದ ಪ್ರಭಾವದಿಂದಲೂ ತನ್ನ ಜನರನ್ನು ಪರಿಪಾಲಿಸುವನು. ಆ ಜನರು ಸುರಕ್ಷಿತವಾಗಿ ಬಾಳುವರು. ಆತನು ಜಗದ ಕಟ್ಟಕಡೆಯವರೆಗೂ ಪ್ರಬಲನಾಗಿರುವನು. ಆತನೇ ನಮಗೆ ಶಾಂತಿದಾತನು.

ಪ್ರಭುವಿನ ವಾಕ್ಯ
ದೇವರಿಗೆ ಕೃತಜ್ಞತೆ ಸಲ್ಲಲಿ

ಪರ್ಯಾಯ ವಾಚನ:
ಪೌಲನು ರೋಮನ್ನರಿಗೆ ಬರೆದ ಪತ್ರದಿಂದ ವಾಚನ 8:28-30

"ಯಾರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡಿದ್ದಾರೋ ಅವರನ್ನು ಮಹಿಮಾಪದವಿಗೆ ಸೇರಿಸಿಕೊಂಡಿದ್ದಾರೆ."

ಸಹೋದರರೇ, ದೇವರನ್ನು ಪ್ರೀತಿಸುವವರಿಗೂ ದೇವರ ಸಂಕಲ್ಪದ ಮೇರೆಗೆ ಕರೆಹೊಂದಿದವರಿಗೂ ಸಕಲವೂ ಹಿತಕರವಾಗಿ ಪರಿಣಮಿಸುವುದು. ಇದನ್ನು ನಾವು ಚೆನ್ನಾಗಿ ಅರಿತಿದ್ದೇವೆ. ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡರೋ ಅವರನ್ನು ತಮ್ಮ ಪುತ್ರನೇ ಜೇಷ್ಠನಾಗಿರಬೇಕೆಂಬುದು ದೇವರ ನಿರ್ಧಾರವಾಗಿದೆ. ಹೀಗೆ ಯಾರನ್ನು ಮೊದಲೇ ನೇಮಿಸಿದ್ದಾರೋ ಅವರನ್ನು ಕರೆದಿದ್ದಾರೆ. ಯಾರನ್ನು ಕರೆದಿದ್ದಾರೋ ಅವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡಿದ್ದಾರೋ ಅವರನ್ನು ಮಹಿಮಾಪದವಿಗೆ ಸೇರಿಸಿಕೊಂಡಿದ್ದಾರೆ.

ಪ್ರಭುವಿನ ವಾಕ್ಯ
ದೇವರಿಗೆ ಕೃತಜ್ಞತೆ ಸಲ್ಲಲಿ

ಕೀರ್ತನೆ 13:5-6, V. ಯೆಶಾಯ 61:10
ಶ್ಲೋಕ: ಹಿರಿಹಿಗ್ಗುವುದು ನನ್ನ ದೇವರಲ್ಲಿ ನನ್ನಾತ್ಮ

1. ನಿನ್ನಚಲ ಪ್ರೀತಿಯಲ್ಲಿದೆ ನನಗೆ ವಿಶ್ವಾಸ
ನಿನ್ನ ರಕ್ಷಣೆ ತಂದಿದೆ ನನ್ನ ಮನಕೆ ಹರುಷ
ಶ್ಲೋಕ

2. ಪ್ರಭು ಮಾಡಿದ ಮಹೋಪಕಾರಗಳಿಗಾಗಿ
ಹಾಡುವೆ ಗೀತೆಯನು ಮನಃಪೂರ್ವಕವಾಗಿ
ಶ್ಲೋಕ

ಘೋಷಣೆ
ಅಲ್ಲೆಲೂಯ, ಅಲ್ಲೆಲೂಯ!
ಪರಿಶುದ್ಧ ಮರಿಯೇ, ಸ್ತ್ರೀಯರಲ್ಲಿ ನೀವು ಧನ್ಯರು ಸ್ತುತಿಗೆ ನೀವು ಯೋಗ್ಯರು | ಏಕೆಂದರೆ ನ್ಯಾಯ ಕುಮಾರದಾದ ಯೇಸು ನಿಮ್ಮ ಉದರದಲ್ಲಿ ಜನಿಸಿರುವರು
ಅಲ್ಲೆಲೂಯ!

ಶುಭಸಂದೇಶ
ಮತ್ತಾಯನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 1:1-16, 18-23

"ಆಕೆ ಗರ್ಭಧರಿಸಿದ್ದು ಪವಿತ್ರಾತ್ಮ ಪ್ರಭಾವದಿಂದ"

ಅಬ್ರಹಾಮನ ಮನೆತನಕ್ಕೆ ಸೇರಿದ ದಾವೀದ ಕುಲದ ಯೇಸುಕ್ರಿಸ್ತರ ವಂಶಾವಳಿ: ಅಬ್ರಹಾಮನಿಗೆ ಇಸಾಕನು, ಇಸಾಕನಿಗೆ ಯಕೋಬನು, ಯಕೋಬನಿಗೆ ಯೂದ ಹಾಗೂ ಆತನ ಸಹೋದರರು ಹುಟ್ಟಿದರು. ಯೂದನಿಗೆ ತಾಮರ ಎಂಬವಳಿಂದ ಪೆರಸ್ ಹಾಗೂ ಜೆರಹನ್ ಹುಟ್ಟಿದರು. ಪೆರಸನಿಗೆ ಹೆಸ್ರೋನ್, ಹೆಸ್ರೋನನಿಗೆ ರಾಮ್, ರಾಮನಿಗೆ ಅಮ್ಮಿನದಾಬ್, ಅಮ್ಮಿನದಾಬನಿಗೆ ನಹಸ್ಸೋನ್, ನಹಸ್ಸೋನನಿಗೆ ಸಲ್ಮೋನ್, ಸಲ್ಮೋನನಿಗೆ ರಹಾಬ್ ಎಂಬವಳಿಂದ ಬೋವಜ್, ಬೋವಜನಿಗೆ ರೂತ್ ಎಂಬವಳಿಂದ ಓಬೇದ್, ಓಬೇದನಿಗೆ ಜೆಸ್ಸೆಯ, ಜೆಸ್ಸೆಯನಿಗೆ ದಾವೀದರಸನು ಹುಟ್ಟಿದರು. ದಾವೀದನಿಗೆ ಊರಿಯನ ಹೆಂಡತಿಯಿಂದ ಸೊಲೊಮೋನ್, ಸೊಲೊಮೋನನಿಗೆ ರೆಹಬ್ಬಾಮ, ರೆಹಬ್ಬಾಮನಿಗೆ ಅಬೀಯ, ಅಬೀಯನಿಗೆ ಆಸನ್ ಹುಟ್ಟಿದರು. ಆಸನನಿಗೆ ಯೋಸೆಫಾತ್, ಯೋಸೆಫಾತನಿಗೆ ಯೆಹೋರಾಮ್, ಯೆಹೋರಾಮನಿಗೆ ಉಜ್ಜೀಯ ಹುಟ್ಟಿದರು. ಉಜ್ಜೀಯನಿಗೆ ಯೋತಾಮ್, ಯೋತಾಮನಿಗೆ ಅಹಾಜ್, ಅಹಾಜನಿಗೆ ಹಿಜ್ಕೀಯನು ಹುಟ್ಟಿದರು. ಹಿಜ್ಕೀಯನಿಗೆ ಮನಸ್ಸೆ, ಮನಸ್ಸೆಗೆ ಆಮೋನ್, ಆಮೋನನಿಗೆ ಯೋಷೀಯ ಹುಟ್ಟಿದರು. ಯೋಷೀಯನಿಗೆ ಯೆಕೊನ್ಯ ಮತ್ತು ಅವನ ಸಹೋದರರು ಹುಟ್ಟಿದರು. ಈ ಸಮಯದಲ್ಲೇ ಇಸ್ರಯೇಲರನ್ನು ಬಾಬಿಲೋನಿಗೆ ಸೆರೆ ಒಯ್ದದ್ದು. ಬಾಬಿಲೋನಿಗೆ ಸೆರೆಹೋದ ದಾಸ್ಯದಿನಗಳು ಮುಗಿದ ಮೇಲೆ ಯೆಕೊನ್ಯನಿಗೆ ಸಲಥಿಯೇಲ್, ಸಲಥಿಯೇಲನಿಗೆ ಜೆರುಬಾಬೆಲ್, ಜೆರುಬಾಬೆಲನಿಗೆ ಅಬೀಹೂದ್, ಅಬಿಹೂದನಿಗೆ ಎಲ್ಯಕೀಮ್, ಎಲ್ಯಕೀಮನಿಗೆ ಅಜೋರ್ ಹುಟ್ಟಿದರು. ಅಜೋರನಿಗೆ ಸದೋಕ್, ಸದೋಕನಿಗೆ ಅಖೀಮ್, ಅಖೀಮನಿಗೆ ಎಲಿಹೂದ್, ಎಲಿಹೂದನಿಗೆ ಎಲಿಯಾಜರ್, ಎಲಿಯಾಜರನಿಗೆ ಮತ್ತಾನ್, ಮತ್ತಾನನಿಗೆ ಯಕೋಬ್ ಹುಟ್ಟಿದರು. ಯಕೋಬನಿಗೆ ಮರಿಯಳ ಪತಿಯಾದ ಜೋಸೆಫನು ಹುಟ್ಟಿದನು. ಈ ಮರಿಯಳಿಂದಲೇ "ಕ್ರಿಸ್ತ" ಎಂದು ಕರೆಯಲಾಗುವ ಯೇಸುಸ್ವಾಮಿ ಹುಟ್ಟಿದ್ದು; ಕ್ರಿಸ್ತಯೇಸುವಿನ ಜನನದ ಪ್ರಕರಣ: ಯೇಸುವಿನ ತಾಯಿ ಮರಿಯಳಿಗೂ ಜೋಸೆಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಕೂಡಿ ಬಾಳುವುದಕ್ಕೆ ಮುಂಚೆಯೇ ಮರಿಯಳು ಗರ್ಭವತಿಯಾಗಿರುವುದು ತಿಳಿದುಬಂತು. ಆಕೆ ಗರ್ಭಧರಿಸಿದ್ದು ಪವಿತ್ರಾತ್ಮ ಪ್ರಭಾವದಿಂದ. ಆಕೆಯ ಪತಿ ಜೋಸೆಫನು ನೀತಿವಂತನು. ಮರಿಯಳನ್ನು ಅವಮಾನಕ್ಕೆ ಗುರಿಮಾಡುವ ಉದ್ದೇಶ ಅವನದಲ್ಲವಾದ್ದರಿಂದ ಯಾರಿಗೂ ತಿಳಿಯದ ಹಾಗೆ ನಿಶ್ಚಿತಾರ್ಥವನ್ನು ಮುರಿದುಬಿಡಬೇಕೆಂದಿದ್ದನು. ಆತನು ಈ ಕುರಿತು ಆಲೋಚಿಸುತ್ತಿದ್ದಂತೆ, ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು, "ದಾವೀದ ವಂಶದ ಜೋಸೆಫನೇ, ಮರಿಯಳನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭಧರಿಸಿರುವುದು ಪವಿತ್ರಾತ್ಮ ಪ್ರಭಾವದಿಂದಲೇ. ಆಕೆ ಒಬ್ಬ ಮಗನನ್ನು ಹೆರುವಳು. ಆತನಿಗೆ ನೀನು ‘ಯೇಸು’ ಎಂಬ ಹೆಸರಿಡಬೇಕು. ಏಕೆಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧಾರಮಾಡುವವನು ಆತನೇ," ಎಂದನು. "ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು "ಇಮ್ಮಾನುವೇಲ್" ಎಂದು ಆತನಿಗೆ ಹೆಸರಿಡುವರು" ಎಂಬುದಾಗಿ ಪ್ರವಾದಿಯ ಮುಖಾಂತರ ಸರ್ವೇಶ್ವರ ಹೇಳಿದ ಪ್ರವಚನ ನೆರವೇರುವಂತೆ ಇದೆಲ್ಲಾ ಸಂಭವಿಸಿತು. “ಇಮ್ಮಾನುವೇಲ್" ಎಂದರೆ "ದೇವರು ನಮ್ಮೊಡನೆ ಇದ್ದಾರೆ" ಎಂದು ಅರ್ಥ.

ಪ್ರಭುವಿನ ಶುಭಸಂದೇಶ
ಕ್ರಿಸ್ತರೇ ನಿಮಗೆ ಸ್ತುತಿ ಸಲ್ಲಲಿ

ಸಂಕ್ಷಿಪ್ತ ಶುಭಸಂದೇಶ ವಾಚನ
ಮತ್ತಾಯನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 1:18-23

"ಆಕೆ ಗರ್ಭಧರಿಸಿದ್ದು ಪವಿತ್ರಾತ್ಮ ಪ್ರಭಾವದಿಂದ."

ಕ್ರಿಸ್ತ ಯೇಸುವಿನ ಜನನದ ಪ್ರಕರಣ: ಯೇಸುವಿನ ತಾಯಿ ಮರಿಯಳಿಗೂ ಜೋಸೆಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಕೂಡಿ ಬಾಳುವುದಕ್ಕೆ ಮುಂಚೆಯೇ ಮರಿಯಳು ಗರ್ಭವತಿಯಾಗಿರುವುದು ತಿಳಿದುಬಂತು. ಆಕೆ ಗರ್ಭಧರಿಸಿದ್ದು ಪವಿತ್ರಾತ್ಮ ಪ್ರಭಾವದಿಂದ. ಆಕೆಯ ಪತಿ ಜೋಸೆಫನು ನೀತಿವಂತನು. ಮರಿಯಳನ್ನು ಅವಮಾನಕ್ಕೆ ಗುರಿಮಾಡುವ ಉದ್ದೇಶ ಅವನದಲ್ಲವಾದ್ದರಿಂದ ಯಾರಿಗೂ ತಿಳಿಯದ ಹಾಗೆ ನಿಶ್ಚಿತಾರ್ಥವನ್ನು ಮುರಿದುಬಿಡಬೇಕೆಂದಿದ್ದನು. ಆತನು ಈ ಕುರಿತು ಆಲೋಚಿಸುತ್ತಿದ್ದಂತೆ, ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು, "ದಾವೀದ ವಂಶದ ಜೋಸೆಫನೇ, ಮರಿಯಳನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭಧರಿಸಿರುವುದು ಪವಿತ್ರಾತ್ಮ ಪ್ರಭಾವದಿಂದಲೇ. ಆಕೆ ಒಬ್ಬ ಮಗನನ್ನು ಹೆರುವಳು. ಆತನಿಗೆ ನೀನು 'ಯೇಸು' ಎಂಬ ಹೆಸರಿಡಬೇಕು. ಏಕೆಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧಾರಮಾಡುವವನು ಆತನೇ," ಎಂದನು. "ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು; "ಇಮ್ಮಾನುವೇಲ್" ಎಂದು ಆತನಿಗೆ ಹೆಸರಿಡುವರು" ಎಂಬುದಾಗಿ ಪ್ರವಾದಿಯ ಮುಖಾಂತರ ಸರ್ವೇಶ್ವರ ಹೇಳಿದ ಪ್ರವಚನ ನೆರವೇರುವಂತೆ ಇದೆಲ್ಲಾ ಸಂಭವಿಸಿತು. "ಇಮ್ಮಾನುವೇಲ್" ಎಂದರೆ "ದೇವರು ನಮ್ಮೊಡನೆ ಇದ್ದಾರೆ" ಎಂದು ಅರ್ಥ.

ಆಮೆನ್

1 week ago | [YT] | 20