ಕ್ರಿಸ್ತದನಿ
ಇದು ನಮ್ಮ ನಿಮ್ಮೆಲ್ಲರ ದೈನಂದಿನ ಆಧ್ಯಾತ್ಮಕ್ಕೆ ಪೂರಕವಾಗಲೆಂಬ ಆಶಯದೊಂದಿಗೆ ರೂಪುಗೊಂಡಿದೆ. 'ಕ್ರಿಸ್ತದನಿ' ಯೂಟ್ಯೂಬ್ ಚಾನಲ್ನಲ್ಲಿ ಕಥೋಲಿಕ ಕ್ರೈಸ್ತರು ಪ್ರತಿನಿತ್ಯ ಮಾಡುವಂತಹ ಪ್ರಾರ್ಥನೆಗಳು, ಪ್ರತಿದಿನದ ಬಲಿಪೂಜೆಯ ವಾಚನಗಳ ಆಧಾರಿತ ಪ್ರಬುದ್ಧ ಚಿಂತನೆಗಳು, ಜಪಸರ, ಶಿಲುಬೆಹಾದಿ, ಆರಾಧನೆ, ಕ್ರೈಸ್ತ ಧಾರ್ಮಿಕ ಭಕ್ತಿಗೀತೆಗಳು ಮುಂತಾದವು ಇವೆ. ಇವೆಲ್ಲವೂ ನಮ್ಮ ಆಧ್ಯಾತ್ಮಿಕ ಪ್ರಯಾಣದಲ್ಲಿ ನೆರವಾಗಲೆಂಬುದೇ ನಮ್ಮ ಆಶಯ. ಇವನ್ನು ಕ್ರೋಢೀಕರಿಸಿ ಯೂಟ್ಯೂಬ್ ಚಾನಲ್ನಲ್ಲಿ ಪ್ರಸ್ತುತಪಡಿಸುವ ಪ್ರಯತ್ನ ಕನ್ನಡ ಕಥೋಲಿಕ ಧರ್ಮಸಭೆಗೆ ಹೊಸದು. ಕ್ರಿಸ್ತನ ನುಡಿಗೆ ಉತ್ಕೃಷ್ಟ ದನಿಯಾಗುವ ಪ್ರಯತ್ನದ ಫಲವಿದು. ಇದನ್ನು ಬಳಸುತ್ತಾ ಉತ್ತಮವಾಗಿಸುವ ಯತ್ನದಲ್ಲಿ ನಿಮ್ಮ ಅನಿಸಿಕೆಗಳು ನಮಗೆ ಉತ್ತೇಜನಕಾರಿ. ನಿಮ್ಮ ಅಭಿಪ್ರಾಯಗಳನ್ನು ನಮಗೆ ಮುಕ್ತವಾಗಿ ತಿಳಿಸಿ ಕ್ರಿಸ್ತದನಿಯ ಉತ್ತಮಿಕೆಯಲ್ಲಿ ನೆರವಾಗಿರಿ.
Disclaimer: The content mentioned in this You Tube is only for religious purpose and we do not have any trade or business intention. We are not the real owners of all the contents, and it is only compilation of religious contents from different sources for the benefit of people. For any copyright issues, contact - kristadani2311@gmail.com


Krista Dani

28-07-26
ಜುಲೈ 28
ಮಂಗಳವಾರ

*ಪವಿತ್ರ ಬೈಬಲ್ ದಿನಚರಿ*
ಸಾಧಾರಣ ಕಾಲದ ಹದಿನೇಳನೆಯ ವಾರ
ಪೂಜಾವಿಧಿ: ವರ್ಷ-2
ಕೀರ್ತನಾ ಮಂಜರಿ: ವಾರ 1
ಪೂಜಾವಸ್ತ್ರ: ಬಿಳಿ

*ಸ್ಮರಣೆ:*
ಸಂತ ಅಲ್ಫೋನ್ಸಾ ಮುತ್ತಥುಪದಕು
(ಕನ್ಯೆ)
(1910-1946)

---

*ದೈವಾಕ್ಯದ ವಿಧಿ*

*ಮೊದಲನೆಯ ವಾಚನ*
_ಪ್ರವಾದಿ ಯೆರೆಮೀಯನ ಗ್ರಂಥದಿಂದ: 14:17-22_
_"ನಮ್ಮೊಡನೆ ಮಾಡಿದ ಒಡಂಬಡಿಕೆಯನ್ನು ಪ್ರಭೂ ನೆನೆಯಿರಿ; ಅದನ್ನು ಭಂಗಪಡಿಸಬೇಡಿ."_

ಸರ್ವೇಶ್ವರ ಯೆರೆಮೀಯನಿಗೆ ಈ ಮಾತುಗಳನ್ನು ಹೇಳಿದರು:
"ನೀನು ನನ್ನ ದುಃಖವನ್ನು ಅವರಿಗೆ ಹೀಗೆಂದು ವ್ಯಕ್ತಪಡಿಸು:
'ರಾತ್ರಿ ಹಗಲು ನನ್ನ ಕಣ್ಣೀರು ಸುರಿಯಲಿ ನಿರಂತರವಾಗಿ.
ಏಕೆಂದರೆ ನನ್ನ ಜನವೆಂಬ ಯುವತಿ ಗಾಯಗೊಂಡಿದ್ದಾಳೆ ತೀವ್ರವಾಗಿ,
ಹೌದು, ಅವಳಿಗೆ ಪೆಟ್ಟು ಬಿದ್ದಿದೆ ಗಡುಸಾಗಿ.
ಊರು ಬಿಟ್ಟು ಹೊರಗೆ ಹೋದರೆ ಅಲ್ಲಿ ಕಾಣಿಸುತ್ತಾರೆ ಖಡ್ಗದಿಂದ ಸತ್ತವರು.
ಊರ ಒಳಗೆ ಬಂದರೆ ಅಲ್ಲಿ ಕಾಣಿಸುತ್ತಾರೆ ಕ್ಷಾಮದಿಂದ ನರಳುವವರು.
ಅಪರಿಚಿತ ನಾಡಿಗೆ ಗಡೀಪಾರಾಗಿದ್ದಾರೆ ಪ್ರವಾದಿಗಳು ಮತ್ತು ಯಾಜಕರು.'

ಹೇ ಸರ್ವೇಶ್ವರಾ, ನೀವು ಜುದೇಯವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿರೊ?
ಸಿಯೋನಿನ ಬಗ್ಗೆ ನಿಮಗೆ ಮನಃಪೂರ್ವಕವಾದ ಅಸಹ್ಯ ಹುಟ್ಟಿದೆಯೊ?
ಗುಣವಾಗದಂಥ ಪೆಟ್ಟನ್ನು ನಮಗೆ ಕೊಟ್ಟಿರುವಿರಿ ಏಕೆ?
ಸುಖವನ್ನು ನಿರೀಕ್ಷಿಸಿದೆವು, ಸಿಗಲಿಲ್ಲ ನಮಗೆ ಯಾವ ಫಲ.
ಸುಕ್ಷೇಮವನ್ನು ಎದುರುನೋಡಿದೆವು, ಇಗೋ ಬಂದೊದಗಿದೆ ಸಂಕಟ.

ಹೇ ಸರ್ವೇಶ್ವರಾ, ಒಪ್ಪಿಕೊಂಡಿದ್ದೇವೆ ನಮ್ಮ ದುಷ್ಟತನವನ್ನು,
ನಮ್ಮ ಪೂರ್ವಜರು ಎಸಗಿದ ದುರಚಾರವನ್ನು,
ನಾವು ಮಾಡಿದ ಪಾಪ ನಿಮಗೆ ವಿರುದ್ಧವೆಂಬುದನ್ನು.
ನಿಮ್ಮ ನಾಮವನ್ನು ಮುಂದಿಟ್ಟು, ನಮಗೆ ಅವಮಾನ ಮಾಡಬೇಡಿ.
ನಿಮ್ಮ ಮಹಿಮೆಯ ಸಿಂಹಾಸನವನ್ನು ಅಸಡ್ಡೆ ಮಾಡಬೇಡಿ.
ನಮ್ಮೊಡನೆ ಮಾಡಿದ ಒಡಂಬಡಿಕೆಯನ್ನು ನೆನೆಯಿರಿ. ಅದನ್ನು ಭಂಗಪಡಿಸಬೇಡಿ.

ಅನ್ಯಜನಾಂಗಗಳ ಶೂನ್ಯ ದೇವತೆಗಳಲ್ಲಿ ಮಳೆ ಸುರಿಸಬಲ್ಲವರುಂಟೆ?
ಆಕಾಶವು ತಾನಾಗಿ ಹದ ಮಳೆಯನ್ನು ಬರಮಾಡಬಲ್ಲುದೆ?
ನಮ್ಮ ದೇವರಾದ ಸರ್ವೇಶ್ವರಾ, ವೃಷ್ಟಿದಾತರು ನೀವೇ.
ನಾವು ನಿರೀಕ್ಷಿಸುತ್ತಿರುವುದು ನಿಮ್ಮನ್ನೇ,
ಹೌದು, ಇವುಗಳನ್ನೆಲ್ಲ ನಡೆಸುವವರು ನೀವೇ."

_ಪ್ರಭುವಿನ ವಾಕ್ಯ_
_ದೇವರಿಗೆ ಕೃತಜ್ಞತೆ ಸಲ್ಲಲಿ_

*ಕೀರ್ತನೆ*
_79:8-9, 11, 13. v.9_
_ಶ್ಲೋಕ: ದೇವಾ, ನೆರವಾಗು ನಿನ್ನ ನಾಮ ಮಹಿಮೆಯ ನಿಮಿತ್ತ._

1. ಹೊರಿಸಬೇಡ ಪೂರ್ವಿಕರ ತಪ್ಪುಗಳನ್ನು ನಮ್ಮ ಮೇಲೆ
ಉರಿ ಸಂಕಟದಲ್ಲಿರುವೆವು, ತೋರೆಮಗೆ ಕರುಣೆಯನೀಗಲೇ
ದೇವಾ, ಮುಕ್ತಿದಾತಾ, ನೆರವಾಗು ನಿನ್ನ ನಾಮ ಮಹಿಮೆಯ ನಿಮಿತ್ತ
ಪಾಪಗಳನ್ನು ಅಳಿಸಿ ನಮ್ಮನ್ನುದ್ದರಿಸು ನಿನ್ನ ನಾಮದ ಪ್ರಯುಕ್ತ _ಶ್ಲೋಕ_

2. ಸೆರೆಹೋಗಿರುವವರ ನರಳಾಟಕೆ ಕಿವಿಗೊಡು ನೀನು
ನಿನ್ನ ಶಕ್ತಿ ಕಾದಿಡಲಿ ಸಾವಿಗೀಡಾಗಿರುವ ಅವರನು
ಆಗ ಸಲ್ಲಿಸುವೆವು ಸದಾಕಾಲ ಕೃತಜ್ಞತೆಯನು ನಿನಗೆ
ಸ್ಮರಿಸುವೆವು ನಿನ್ನ ಮಹಿಮೆಯನು ತಲತಲಾಂತರದವರೆಗೆ
ಹೇ ದೇವಾ, ನಾವು ನಿನ್ನ ಪ್ರಜೆ, ನೀ ಪಾಲಿಸುವ ಮಂದೆ _ಶ್ಲೋಕ_

*ಘೋಷಣೆ*
_ಕೀರ್ತನೆ 147:13,15_
_ಅಲ್ಲೆಲೂಯ, ಅಲ್ಲೆಲೂಯ._
ಜೆರುಸಲೇಮೇ, ಕೀರ್ತಿಸು ಪ್ರಭುವನು, ಕಳುಹಿಸುವನು ಧರೆಗೆ ತನ್ನ ಆಣತಿ.
_ಅಲ್ಲೆಲೂಯ._

*ಶುಭಸಂದೇಶ*
_ಮತ್ತಾಯನು ಬರೆದ ಪವಿತ್ರ ಶುಭಸಂದೇಶ: 13:36-43_
_"ಕಳೆಗಳನ್ನು ಕಿತ್ತುಕೊಂಡು ಬೆಂಕಿಯಲ್ಲಿ ಸುಟ್ಟು ಹಾಕಿದಂತೆ ಕಾಲಾಂತ್ಯದಲ್ಲೂ ನಡೆಯುವುದು."_

ಆ ಕಾಲದಲ್ಲಿ ಯೇಸು ಜನರನ್ನು ಬೀಳ್ಕೊಟ್ಟು ಮನೆಗೆ ಬಂದರು. ಶಿಷ್ಯರು ಅವರ ಬಳಿಗೆ ಬಂದು, "ಹೊಲದಲ್ಲಿ ಬಿತ್ತಲಾದ ಕಳೆಗಳ ಸಾಮತಿಯನ್ನು ನಮಗೆ ವಿವರಿಸಿರಿ," ಎಂದು ಕೇಳಿಕೊಂಡರು.

ಅದಕ್ಕೆ ಯೇಸು, "ಒಳ್ಳೆಯ ಗೋದಿಯನ್ನು ಬಿತ್ತುವವನು ಎಂದರೆ ನರಪುತ್ರನು; ಹೊಲವೇ ಈ ಲೋಕ; ಒಳ್ಳೆಯ ಕಾಳುಗಳೇ ಶ್ರೀ ಸಾಮ್ರಾಜ್ಯದ ಮಕ್ಕಳು; ಕಳೆಗಳೇ ಕೇಡಿಗನ ಮಕ್ಕಳು. ಆ ಕಳೆಗಳನ್ನು ಬಿತ್ತಿದ ವೈರಿಯೇ ಪಿಶಾಚಿ. ಸುಗ್ಗಿಯೇ ಕಾಲಾಂತ್ಯ, ಕೊಯ್ಲುಗಾರರೇ ದೇವದೂತರು.

ಕಳೆಗಳನ್ನು ಕಿತ್ತು ಬೆಂಕಿಯಲ್ಲಿ ಸುಟ್ಟು ಹಾಕಿದಂತೆ ಕಾಲಾಂತ್ಯದಲ್ಲೂ ನಡೆಯುವುದು. ನರಪುತ್ರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದಿಂದ ಪಾಪಕ್ಕೆ ಕಾರಣವಾದುದೆಲ್ಲವನ್ನೂ ಮತ್ತು ದುಷ್ಕರ್ಮಿಗಳೆಲ್ಲರನ್ನೂ ಒಟ್ಟುಗೂಡಿಸಿ ಅಗ್ನಿ ಕುಂಡದಲ್ಲಿ ಹಾಕುವರು; ಅಲ್ಲಿ ಅವರು ಕಟಕಟನೆ ಹಲ್ಲು ಕಡಿದುಕೊಂಡು ಗೋಳಾಡುವರು.

ಸದ್ಧರ್ಮಿಗಳು ತಮ್ಮ ತಂದೆಯ ಸಾಮ್ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕಿವಿಯುಳ್ಳವನು ಕೇಳಿಸಿಕೊಳ್ಳಲಿ."

_ಪ್ರಭುಕ್ರಿಸ್ತರ ಶುಭಸಂದೇಶ_
_ಕ್ರಿಸ್ತರೇ, ನಿಮಗೆ ಸ್ತುತಿ ಸಲ್ಲಲಿ_

_ಆಮೆನ್

22 hours ago | [YT] | 18

Krista Dani

27-07-26
ಜುಲೈ 27
ಸೋಮವಾರ

*ಪವಿತ್ರ ಬೈಬಲ್ ದಿನಚರಿ*
ಸಾಧಾರಣ ಕಾಲದ ಹದಿನೇಳನೆಯ ವಾರ
ಪೂಜಾವಿಧಿ: ವರ್ಷ-2
ಕೀರ್ತನಾ ಮಂಜರಿ: ವಾರ 1
ಪೂಜಾವಸ್ತ್ರ: ಹಸಿರು

*ಸ್ಮರಣೆ:*
ಸಂತ ಟೈಟಸ್ ಬ್ರಾಂಡ್ಸ್ ಮಾ
ಓ ಕಾರ್ಮ್
(ರಕ್ತಸಾಕ್ಷಿ)
(ವಯಸ್ಸು - 61)
(1881-1942)

---

*ದೈವವಾಕ್ಯದ ವಿಧಿ*

*ಮೊದಲನೆಯ ವಾಚನ*
_ಪ್ರವಾದಿ ಯೆರೆಮೀಯನ ಗ್ರಂಥದಿಂದ: 13:1-11_
_"ಇವರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಾಟಿಯಾಗುವರು"_

ಸರ್ವೇಶ್ವರ ಸ್ವಾಮಿ ನನಗೆ: "ನೀನು ಹೋಗಿ ನಾರಿನ ನಡುಕಟ್ಟೊಂದನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೊ. ಅದನ್ನು ನೀರಿನಲ್ಲಿ ನೆನಸಬೇಡ," ಎಂದು ಅಪ್ಪಣೆ ಕೊಟ್ಟರು. ನಾನು ಅವರ ಮಾತಿನಂತೆ ನಡುಕಟ್ಟನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೊಂಡೆ.

ಆಮೇಲೆ, "ನೀನು ಸೊಂಟಕ್ಕೆ ಬಿಗಿದ ಆ ನಡುಕಟ್ಟನ್ನು ತೆಗೆದುಕೊಂಡು ಯೂಫ್ರೆಟಿಸ್ ನದಿಗೆ ಹೋಗು. ಅದನ್ನು ಅಲ್ಲಿಯ ಬಂಡೆಯ ಸಂದಿನೊಳಗೆ ಬಚ್ಚಿಡು," ಎಂಬುದಾಗಿ ಸರ್ವೇಶ್ವರಸ್ವಾಮಿಯ ಎರಡನೆಯ ಆದೇಶ ನನಗೆ ಬಂದಿತು. ಅವರ ಅಪ್ಪಣೆಯ ಮೇರೆಗೆ ನಾನು ಹೋಗಿ ಯೂಫ್ರೆಟಿಸ್ ನದಿಯ ಬಳಿಯಲ್ಲಿ ಅದನ್ನು ಬಚ್ಚಿಟ್ಟೆ.

ಬಹು ದಿನಗಳಾದ ಮೇಲೆ ಸರ್ವೇಶ್ವರ ನನಗೆ, "ಹೊರಡು, ಯುಫ್ರೆಟಿಸ್ ನದಿಗೆ ಹೋಗಿ ಅಲ್ಲಿ ಬಚ್ಚಿಡಬೇಕೆಂದು ನಾನು ಅಪ್ಪಣೆಕೊಟ್ಟ ನಡುಕಟ್ಟನ್ನು ಅಲ್ಲಿಂದ ತೆಗೆ," ಎಂದು ಹೇಳಿದರು. ಆಗ ನಾನು ಯೂಫ್ರೆಟಿಸ್ ನದಿಗೆ ಹೋಗಿ ಹುಡುಕಿ ನಾನು ಬಚ್ಚಿಟ್ಟ ಸ್ಥಳದಿಂದ ಆ ನಡುಕಟ್ಟನ್ನು ತೆಗೆದೆ. ಆದರೆ ಅದು ಕೆಟ್ಟು ಯಾವ ಕೆಲಸಕ್ಕೂ ಬಾರದ್ದಾಗಿತ್ತು.

ಆಗ ಸರ್ವೇಶ್ವರ ನನಗೆ ದಯಪಾಲಿಸಿದ ವಾಕ್ಯವೇನೆಂದರೆ: "ಇದು ಸರ್ವೇಶ್ವರನಾದ ನನ್ನ ನುಡಿ, ಈ ಪ್ರಕಾರವಾಗಿಯೇ ನಾನು ಜುದೇಯದ ದೊಡ್ಡಸ್ತಿಕೆಯನ್ನು ಹಾಗೂ ಜೆರುಸಲೇಮಿನ ಘನವಾದ ದೊಡ್ಡಸ್ತಿಕೆಯನ್ನು ತೆಗೆದುಬಿಡುವೆನು. ಈ ದುಷ್ಟ ಜನರು ನನ್ನ ಮಾತುಗಳನ್ನು ಕೇಳಲೊಲ್ಲರು. ತಮ್ಮ ಹೃದಯದ ಒರಟುತನದಂತೆ ನಡೆದುಬರುತ್ತಿದ್ದಾರೆ. ಅನ್ಯ ದೇವತೆಗಳನ್ನು ಹಿಂಬಾಲಿಸಿ, ಪೂಜಿಸುತ್ತಿದ್ದಾರೆ.

ಇವರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಾಟಿಯಾಗುವರು. ಇಸ್ರಯೇಲ್ ವಂಶವೆಲ್ಲವು ಹಾಗೂ ಜುದೇಯ ವಂಶವೆಲ್ಲವು ನನಗೆ ಪ್ರಜೆಯಾಗಿರಲಿ; ನನಗೆ ಕೀರ್ತಿ, ಗೌರವ ತರಲಿ, ನನಗೆ ಆಭರಣವಾಗಿರಲಿ ಎಂದುಕೊಂಡೆ. ನಡುಕಟ್ಟನ್ನು ಸೊಂಟಕ್ಕೆ ಬಿಗಿದುಕೊಳ್ಳುವಂತೆ ಇವರನ್ನು ಬಿಗಿದುಕೊಂಡಿದ್ದೆ. ಆದರೂ ಇವರು ನನಗೆ ಕಿವಿಗೊಡದೆ ಹೋದರು. ಇದು ಸರ್ವೇಶ್ವರನಾದ ನನ್ನ ನುಡಿ."

_ಪ್ರಭುವಿನ ವಾಕ್ಯ_
_ದೇವರಿಗೆ ಕೃತಜ್ಞತೆ ಸಲ್ಲಲಿ_

*ಕೀರ್ತನೆ*
_ಧರ್ಮೋಪದೇಶ 32:18-21, v.18_
_ಶ್ಲೋಕ: ಜನ್ಮವಿತ್ತ ದೇವರನ್ನು ನೀವು ಸ್ಮರಿಸಲಿಲ್ಲ_

1. ಎಲೈ ಇಸ್ರಯೇಲರೇ, ಮರೆತಿರಾ ಜನ್ಮವಿತ್ತ ಪೊರೆಬಂಡೆಯನು?
ಸ್ಮರಿಸಲಿಲ್ಲ ನೀವು ಹೆತ್ತ ತಾಯಂತಿದ್ದಾ ದೇವರನು
ಇದಕಂಡು ಸರ್ವೇಶ್ವರ ಬೇಸರಗೊಂಡ
ತನ್ನ ಆ ಕುವರ ಕುವರಿಯರ ನಡತೆಯ ನೋಡಿ ನೊಂದುಕೊಂಡ _ಶ್ಲೋಕ_

2. ಎಂದೇ ಇಂತೆಂದುಕೊಂಡನು: ಇವರಿಗೆ ವಿಮುಖನಾಗುವೆನು
ಇವರಿಗೊದಗಲಿರುವ ಗತಿಯನು ನೋಡುವೆನು
ಸತ್ಯವರಿತೂ ಅನುಸರಿಸದೆ ಹೋದರು
ಈ ವಿದ್ರೋಹ ಮಕ್ಕಳಂತವರು _ಶ್ಲೋಕ_

3. ರೇಗಿಸಿದರೆನ್ನನು ದೇವರಲ್ಲದವರ ಮೂಲಕ
ಸಿಟ್ಟೇರಿಸಿದರು ಅಚೇತ ವಿಗ್ರಹಗಳ ಮೂಲಕ
ನಾನವರಲಿ ಅಸೂಯೆ ಹುಟ್ಟಿಸುವೆನು ಜನಾಂಗವಲ್ಲದವರ ಮುಖಾಂತರ
ನಾನವರನು ಸಿಟ್ಟಿಗೆಬ್ಬಿಸುವೆನು ಸಭ್ಯರಲ್ಲದ ಆ ಜನರ ಮುಖಾಂತರ _ಶ್ಲೋಕ_

*ಘೋಷಣೆ*
_ಕೀರ್ತನೆ 145:14_
_ಅಲ್ಲೆಲೂಯ, ಅಲ್ಲೆಲೂಯ._
ನುಡಿಯಲಿ ಪ್ರಭು ಸದಾ ಪ್ರಾಮಾಣಿಕನು | ನಡೆಯಲಿ ಆತನು ಸದಾ ಪ್ರೀತಿಮಯನು |
_ಅಲ್ಲೆಲೂಯ._

*ಶುಭಸಂದೇಶ*
_ಮತ್ತಾಯನು ಬರೆದ ಪವಿತ್ರ ಶುಭಸಂದೇಶ: 13:31-35_
_"ಸಾಸಿವೆಕಾಳು ದೊಡ್ಡದಾಗಿ ಬೆಳೆದು ಮರವಾಗುತ್ತದೆ. ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಬಂದು ಅದರ ರೆಂಬೆಗಳಲ್ಲಿ ಗೂಡುಕಟ್ಟಿ ವಾಸಿಸುತ್ತವೆ."_

ಆ ಕಾಲದಲ್ಲಿ ಯೇಸು ಇನ್ನೊಂದು ಸಾಮತಿಯನ್ನು ಹೇಳಿದರು:
"ಸ್ವರ್ಗಸಾಮ್ರಾಜ್ಯ ಒಂದು ಸಾಸಿವೆ ಕಾಳನ್ನು ಹೋಲುತ್ತದೆ; ಈ ಕಾಳನ್ನು ತೆಗೆದುಕೊಂಡುಹೋಗಿ ರೈತ ತನ್ನ ಹೊಲದಲ್ಲಿ ಬಿತ್ತಿದ. ಕಾಳುಗಳಲ್ಲಿ ಅತಿ ಸಣ್ಣದಾದ ಇದನ್ನು ಬಿತ್ತಿದಾಗ ಎಲ್ಲ ಸಸ್ಯಗಳಿಗಿಂತಲೂ ದೊಡ್ಡದಾಗಿ ಬೆಳೆದು ಮರವಾಗುತ್ತದೆ. ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಬಂದು ಇದರ ರೆಂಬೆಗಳಲ್ಲಿ ಗೂಡುಕಟ್ಟಿ ವಾಸಿಸುತ್ತವೆ."

ಯೇಸು ಮತ್ತೊಂದು ಸಾಮತಿಯನ್ನು ಜನರಿಗೆ ಹೇಳಿದರು:
"ಸ್ವರ್ಗಸಾಮ್ರಾಜ್ಯ ಹುದುಗೆಬ್ಬಿಸುವ ಹುಳಿಯನ್ನು ಹೋಲುತ್ತದೆ. ಅದನ್ನು ಒಬ್ಬಾಕೆ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿದಳು. ಆ ಹಿಟ್ಟೆಲ್ಲಾ ಹುಳಿಯಾಯಿತು."

ಇದೆಲ್ಲವನ್ನೂ ಯೇಸು ಜನರಿಗೆ ಸಾಮತಿಗಳ ರೂಪದಲ್ಲಿ ಹೇಳಿದರು. ಸಾಮತಿಗಳಿಲ್ಲದೆ ಅವರಿಗೆ ಏನನ್ನೂ ಬೋಧಿಸಲಿಲ್ಲ.
"ಸಾಮತಿಗಳಲ್ಲೇ ಬೋಧಿಸುವೆನು; ಲೋಕಾದಿಯಿಂದ ರಹಸ್ಯವಾದವುಗಳನ್ನು ಬಯಲುಗೊಳಿಸುವೆನು,"
ಎಂದು ದೇವರು ಪ್ರವಾದಿಯ ಮುಖಾಂತರ ತಿಳಿಸಿದ್ದ ಪ್ರವಚನವನ್ನು ಯೇಸು ಹೀಗೆ ನೆರವೇರಿಸಿದರು.

_ಪ್ರಭುವಿನ ಶುಭಸಂದೇಶ_
_ಕ್ರಿಸ್ತರೇ ನಿಮಗೆ ಸ್ತುತಿ ಸಲ್ಲಲಿ_

_ಆಮೆನ್

2 days ago | [YT] | 23

Krista Dani

26-07-26
ಜುಲೈ 26
ಭಾನುವಾರ

*ಪವಿತ್ರ ಬೈಬಲ್ ದಿನಚರಿ*
ಸಾಧಾರಣ ಕಾಲದ ಹದಿನೇಳನೇ ಭಾನುವಾರ
ಪೂಜಾವಿಧಿ: ವರ್ಷ-1
ಕೀರ್ತನಾ ಮಂಜರಿ: ವಾರ 4
ಪೂಜಾವಸ್ತ್ರ: ಹಸಿರು

*ಸ್ಮರಣೆ:*
ಸಂತ ಜೊವಾಕಿಂ ಮತ್ತು ಅನ್ನ
ಕನ್ಯ ಮರಿಯಮ್ಮನವರ ತಂದೆತಾಯಿಯರು
(ಸ್ಮರಣೆ)

---

*ದೈವವಾಕ್ಯದ ವಿಧಿ*
_"ದುರ್ಜನರನ್ನು ಸಜ್ಜನರಿಂದ ಬೇರ್ಪಡಿಸುವರು"_

*ಮೊದಲನೆಯ ವಾಚನ*
_ಅರಸರುಗಳ ಮೊದಲನೆಯ ಗ್ರಂಥದಿಂದ: 3:5, 7-12_
_"ನಿಮ್ಮ ಜನಾಂಗವನ್ನು ಆಳುವುದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸಿರಿ."_

ದೇವರಾದ ಸರ್ವೇಶ್ವರ ಆ ರಾತ್ರಿ ಗಿಬ್ಯೋನಿನಲ್ಲಿ ಸೊಲೊಮೋನಿಗೆ ಕನಸಿನಲ್ಲಿ ಕಾಣಿಸಿಕೊಂಡು, "ನಿನಗೆ ಯಾವ ವರಬೇಕು ಕೇಳಿಕೋ," ಎಂದು ಹೇಳಿದರು.

"ನನ್ನ ದೇವರಾದ ಸರ್ವೇಶ್ವರಾ, ನನ್ನ ತಂದೆಗೆ ಬದಲಾಗಿ ನಿಮ್ಮಿಂದ ಅರಸನಾಗಿ ನೇಮಕಗೊಂಡಿರುವ ನಿಮ್ಮ ದಾಸನಾದ ನಾನು ಇನ್ನೂ ಚಿಕ್ಕವನು; ವ್ಯವಹಾರ ಜ್ಞಾನ ಇಲ್ಲದವನು. ನಿಮ್ಮ ದಾಸನಾದ ನಾನು ಅಸಂಖ್ಯಾತ ಮಹಾ ಜನಾಂಗವಾದ ನಿಮ್ಮ ಸ್ವಕೀಯ ಪ್ರಜೆಯ ಮಧ್ಯೆ ಇದ್ದೇನೆ. ಆದುದರಿಂದ ಅದನ್ನು ಆಳುವುದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸಿರಿ. ಈ ಮಹಾ ಜನಾಂಗವನ್ನು ಆಳಲು ಯಾರೂ ಸಮರ್ಥರಲ್ಲ," ಎಂದು ಸೊಲೊಮೋನನು ಬೇಡಿಕೊಂಡನು.

ಸೊಲೊಮೋನನ ಈ ಬಿನ್ನಹವನ್ನು ಸರ್ವೇಶ್ವರನಾದ ದೇವರು ಮೆಚ್ಚಿದರು. ಅವರು ಆತನಿಗೆ, "ನೀನು ದೀರ್ಘಾಯುಷ್ಯವನ್ನಾಗಲಿ, ಸಿರಿಸಂಪತ್ತನ್ನಾಗಲಿ, ಶತ್ರುವಿನಾಶವನ್ನಾಗಲಿ ಕೇಳಿಕೊಳ್ಳಲಿಲ್ಲ. ನ್ಯಾಯನಿರ್ಣಯಿಸುವುದಕ್ಕೆ ಬೇಕಾದ ವಿವೇಕವನ್ನು ಬೇಡಿಕೊಂಡೆ. ಆದ್ದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ. ನೋಡು, ನಿನಗೆ ಜ್ಞಾನವನ್ನೂ ವಿವೇಕವನ್ನೂ ಅನುಗ್ರಹಿಸಿದ್ದೇನೆ; ನಿನ್ನಂತಹ ಜ್ಞಾನಿಯು ಹಿಂದೆ ಇರಲಿಲ್ಲ. ಮುಂದೆಯೂ ಇರುವುದಿಲ್ಲ," ಎಂದರು.

_ಪ್ರಭುವಿನ ವಾಕ್ಯ_
_ದೇವರಿಗೆ ಕೃತಜ್ಞತೆ ಸಲ್ಲಲಿ_

*ಕೀರ್ತನೆ*
_119:57, 72, 76-77, 127-130, v.77_
_ಶ್ಲೋಕ: ನಿನ್ನ ಧರ್ಮಶಾಸ್ತ್ರ ಪ್ರಭೂ, ನನಗೆ ಪರಮ ಪ್ರಿಯ._

1. ಹೇ ಪ್ರಭೂ, ನೀನೇ ನನ್ನ ಪಾಲಿನ ಸ್ವಾಸ್ತ್ಯ
ನಿನ್ನ ವಾಕ್ಯದ ಪಾಲನೆಯೇ ನಾ ಗೈದ ನಿರ್ಣಯ
ಸಾವಿರಾರು ಚಿನ್ನ ಬೆಳ್ಳಿ ನಾಣ್ಯಗಳಿಗಿಂತ
ನಿನ್ನ ಬಾಯಿಂದ ಬಂದ ಧರ್ಮಶಾಸ್ತ್ರ ಉಚಿತ _ಶ್ಲೋಕ_

2. ನಿನ್ನ ದಾಸನಿಗೆ ನೀನು ನುಡಿದ ಪ್ರಕಾರ
ಸಾಂತ್ವನ ನೀಡಲಿ ಎನಗೆ ನಿನ್ನಚಲ ಪ್ರೀತಿ
ನಾ ಬದುಕುವಂತೆ ತೋರೆನಗೆ ನಿನ್ನ ದಯ
ನಿನ್ನ ಧರ್ಮಶಾಸ್ತ್ರ ನನಗೆ ಪರಮ ಪ್ರಿಯ _ಶ್ಲೋಕ_

3. ಚಿನ್ನ ಅಪರಂಜಿಗಿಂತಲೂ ಪ್ರಿಯ
ನಿನ್ನ ಆಜ್ಞೆಗಳು ನನಗೆ ಸುಪ್ರಿಯ
ನ್ಯಾಯವಾಗಿವೆ ನಿನ್ನ ನಿಯಮಗಳೆಲ್ಲ
ನನಗೆ ಹಗೆ ಮಿಥ್ಯ ಮಾರ್ಗಗಳೆಲ್ಲ _ಶ್ಲೋಕ_

4. ಅಪೂರ್ವವಾದ ನಿನ್ನ ಕಟ್ಟಳೆಗಳನು
ಹೃತ್ಪೂರ್ವಕವಾಗಿ ನಾ ಪಾಲಿಪೆನು
ತರುವುದು ನಿನ್ನ ವಾಕ್ಯೋಪದೇಶ
ಸರಳ ಜನರಿಗೆ ಜ್ಞಾನ ಪ್ರಕಾಶ _ಶ್ಲೋಕ_

*ಎರಡನೆಯ ವಾಚನ*
_ಪೌಲನು ರೋಮನರಿಗೆ ಬರೆದ ಪತ್ರದಿಂದ: 8:28-30_
_"ದೇವರು ನಮ್ಮನ್ನು ತಮ್ಮ ಪುತ್ರನ ಅನುರೂಪಿಗಳಾಗುವಂತೆ ನೇಮಿಸಿದರು."_

ಸಹೋದರರೇ, ದೇವರನ್ನು ಪ್ರೀತಿಸುವವರಿಗೂ ದೇವರ ಸಂಕಲ್ಪದ ಮೇರೆಗೆ ಕರೆಹೊಂದಿದವರಿಗೂ ಸಕಲವೂ ಹಿತಕರವಾಗಿ ಪರಿಣಮಿಸುವುದು. ಇದನ್ನು ನಾವು ಚೆನ್ನಾಗಿ ಅರಿತಿದ್ದೇವೆ.

ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡರೋ ಅವರನ್ನು ತಮ್ಮ ಪುತ್ರನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದರು. ಹೀಗೆ ಅನೇಕ ಸಹೋದರಲ್ಲಿ ತಮ್ಮ ಪುತ್ರನೇ ಜೇಷ್ಠನಾಗಿರಬೇಕೆಂಬುದು ದೇವರ ನಿರ್ಧಾರವಾಗಿದೆ.

ಹೀಗೆ ಯಾರನ್ನು ಮೊದಲೇ ನೇಮಿಸಿದ್ದರೋ ಅವರನ್ನು ಕರೆದಿದ್ದಾರೆ. ಯಾರನ್ನು ಕರೆದಿದ್ದಾರೋ ಅವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡಿದ್ದಾರೆ. ಯಾರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡಿದ್ದಾರೋ ಅವರನ್ನು ಮಹಿಮಾಪದವಿಗೆ ಸೇರಿಸಿಕೊಂಡಿದ್ದಾರೆ.

_ಪ್ರಭುವಿನ ವಾಕ್ಯ_
_ದೇವರಿಗೆ ಕೃತಜ್ಞತೆ ಸಲ್ಲಲಿ_

*ಘೋಷಣೆ*
_ಯೊವಾನ್ನ 14:6_
_ಅಲ್ಲೆಲೂಯ, ಅಲ್ಲೆಲೂಯ._
ಮಾರ್ಗವೂ ಸತ್ಯವೂ ನಾನೇ, ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.
_ಅಲ್ಲೆಲೂಯ!_

*ಶುಭಸಂದೇಶ*
_ಮತ್ತಾಯನು ಬರೆದ ಪವಿತ್ರ ಶುಭಸಂದೇಶ: 13:44-52_
_"ಅವನು ಹೋಗಿ, ತನಗೆ ಇದ್ದುದೆಲ್ಲವನ್ನು ಮಾರಿ ಈ ಹೊಲವನ್ನು ಕೊಂಡುಕೊಳ್ಳುತ್ತಾನೆ."_

ಆ ಕಾಲದಲ್ಲಿ ಯೇಸು ಜನಸಮೂಹಕ್ಕೆ ಹೀಗೆಂದರು: "ಸ್ವರ್ಗಸಾಮ್ರಾಜ್ಯವನ್ನು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಸಬಹುದು. ಇದನ್ನು ಒಬ್ಬನು ಪತ್ತೆಹಚ್ಚಿ ಅಲ್ಲಿಯೇ ಮುಚ್ಚಿಡುತ್ತಾನೆ. ತನಗಾದ ಸಂತೋಷದಿಂದ ಹೋಗಿ ತನಗೆ ಇದ್ದುದೆಲ್ಲವನ್ನೂ ಮಾರಿ ಈ ಹೊಲವನ್ನೇ ಕೊಂಡುಬಿಡುತ್ತಾನೆ.

ಸ್ವರ್ಗಸಾಮ್ರಾಜ್ಯವನ್ನು ಉತ್ತಮವಾದ ಮುತ್ತುರತ್ನಗಳನ್ನು ಹುಡುಕಿಕೊಂಡು ಹೋಗುವ ವರ್ತಕನಿಗೂ ಹೋಲಿಸಬಹುದು. ಅನರ್ಘ್ಯವಾದ ಒಂದು ಮುತ್ತನ್ನು ಕಂಡ ಕೂಡಲೆ ವರ್ತಕ ತನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಆ ಮುತ್ತನ್ನು ಕೊಂಡುಕೊಳ್ಳುತ್ತಾನೆ.

ಸ್ವರ್ಗಸಾಮ್ರಾಜ್ಯವನ್ನು ಒಂದು ಮೀನುಬಲೆಗೆ ಹೋಲಿಸಬಹುದು. ಬೆಸ್ತರು ಬಲೆಯನ್ನು ಸಮುದ್ರದಲ್ಲಿ ಬೀಸಿ ಎಲ್ಲಾ ಜಾತಿಯ ಮೀನುಗಳನ್ನು ಹಿಡಿಯುತ್ತಾರೆ. ಬಲೆ ತುಂಬಿದ ಮೇಲೆ ಅದನ್ನು ದಡಕ್ಕೆ ಎಳೆದು ಕಳಿತುಕೊಂಡು, ಒಳ್ಳೆಯ ಮೀನುಗಳನ್ನು ಮಾತ್ರ ಆರಿಸಿಕೊಂಡು ಬುಟ್ಟಿಗೆ ಹಾಕಿಕೊಳ್ಳುತ್ತಾರೆ; ಕೆಟ್ಟವನ್ನು ಎಸೆದುಬಿಡುತ್ತಾರೆ.

ಕಾಲಾಂತ್ಯದಲ್ಲಿ ಇದರಂತೆಯೇ ಆಗುವುದು; ದೇವದೂತರು ಹೊರಟುಬಂದು ದುರ್ಜನರನ್ನು ಸಜ್ಜನರಿಂದ ಬೇರ್ಪಡಿಸುವರು. ದುರ್ಜನರನ್ನು ಅಗ್ನಿಕುಂಡದಲ್ಲಿ ಹಾಕುವರು. ಅಲ್ಲಿ ಅವರು ಕಟಕಟನೆ ಹಲ್ಲು ಕಡಿದುಕೊಂಡು ಗೋಳಾಡುವರು."

"ಇದೆಲ್ಲ ನಿಮಗೆ ಅರ್ಥವಾಯಿತೇ?" ಎಂದು ಯೇಸುಸ್ವಾಮಿ ಕೇಳಿದರು. ಶಿಷ್ಯರು "ಅರ್ಥವಾಯಿತು" ಎಂದರು. ಆಗ ಯೇಸು, "ಇಂತಿರಲು, ಸ್ವರ್ಗಸಾಮ್ರಾಜ್ಯದಲ್ಲಿ ಶಿಷ್ಯನಾಗಿರುವ ಪ್ರತಿಯೊಬ್ಬ ಶಾಸ್ತ್ರಜ್ಞನು ಮನೆಯ ಯಜಮಾನ ಇದ್ದ ಹಾಗೆ. ಅವನು ತನ್ನ ಉಗ್ರಾಣದಿಂದ ಹೊಸ ಹಾಗೂ ಹಳೆಯ ವಸ್ತುಗಳನ್ನು ಹೊರಗೆ ತರುತ್ತಾ ಇರುತ್ತಾನೆ," ಎಂದರು.

_ಪ್ರಭುವಿನ ಶುಭಸಂದೇಶ_
_ಕ್ರಿಸ್ತರೇ, ನಿಮಗೆ ಸ್ತುತಿ ಸಲ್ಲಲಿ_

_ಆಮೆನ್

2 days ago | [YT] | 22

Krista Dani

25-07-26*
ಜುಲೈ 25
ಶನಿವಾರ

*ಪವಿತ್ರ ಬೈಬಲ್ ದಿನಚರಿ*
ಸಾಧಾರಣ ಕಾಲದ ಹದಿನಾರನೆಯ ವಾರ
ಪೂಜಾವಿಧಿ: ಹಬ್ಬ
ಕೀರ್ತನಾ ಮಂಜರಿ: ಹಬ್ಬ
ಪೂಜಾವಸ್ತ್ರ: ಕೆಂಪು

*ಸ್ಮರಣೆ:*
ಸಂತ ಯಕೋಬ
(ಪ್ರೇಷಿತ)
(ಹಬ್ಬ)
(ಮರಣ 44)

---

*ದೈವವಾಕ್ಯದ ವಿಧಿ*

*ಮೊದಲನೆಯ ವಾಚನ*
_ಪೌಲನು ಕೊರಿಂಥಿಯರಿಗೆ ಬರೆದ ಎರಡನೆಯ ಪತ್ರದಿಂದ: 4:7-15_
_"ಯೇಸುವಿನ ದಿವ್ಯ ಜೀವವು ನಮ್ಮ ದೇಹದಲ್ಲಿ ಗೋಚರವಾಗುವಂತೆ ಅವರ ಮರಣ ಯಾತನೆಯನ್ನು ನಿರಂತರವಾಗಿ ಅನುಭವಿಸುತ್ತಾ ಬಾಳುತ್ತಿದ್ದೇವೆ."_

ಸಹೋದರರೇ, ನಾವು ಇಂಥ ಆಧ್ಯಾತ್ಮಿಕ ಮಾಣಿಕ್ಯವನ್ನು ಪಡೆದಿದ್ದರೂ ಮಣ್ಣಿನ ಮಡಕೆಗಳಂತೆ ಇದ್ದೇವೆ. ಹೀಗೆ, ಈ ಪರಮೋನ್ನತ ಶಕ್ತಿ ನಮಗೆ ಸೇರಿದ್ದಲ್ಲ. ದೇವರಿಗೆ ಸೇರಿದ್ದೆಂದು ವ್ಯಕ್ತವಾಗುತ್ತದೆ.

ನಾವು ಇಕ್ಕಟ್ಟು ಬಿಕ್ಕಟ್ಟುಗಳಿಗೆ ಒಳಗಾಗಿದ್ದರೂ ನಜ್ಜುಗುಜ್ಜಾಗಲಿಲ್ಲ; ಸಂಶಯ ಸಂದೇಹಗಳಿಗೊಳಗಾದರೂ ನಿರಾಶೆಗೊಳ್ಳಲಿಲ್ಲ. ಶತ್ರುಗಳು ಆನೇಕರಿದ್ದರೂ ಮಿತ್ರನೊಬ್ಬನು ಇಲ್ಲದಿರಲಿಲ್ಲ. ಪ್ರಾಣ ಹಿಂಸೆಗಳಿಗೀಡಾಗಿದ್ದರೂ ಪ್ರಾಣ ನಷ್ಟವನ್ನು ಅನುಭವಿಸಲಿಲ್ಲ.

ಯೇಸುವಿನ ದಿವ್ಯ ಜೀವವು ನಮ್ಮ ದೇಹದಲ್ಲಿ ಗೋಚರವಾಗುವಂತೆ ಅವರ ಮರಣ ಯಾತನೆಯನ್ನು ನಿರಂತರವಾಗಿ ಅನುಭವಿಸುತ್ತಾ ಬಾಳುತ್ತಿದ್ದೇವೆ. ಯೇಸುವಿನ ಅಮರ ಜೀವವು ನಮ್ಮ ನಶ್ವರ ಶರೀರದಲ್ಲಿ ಗೋಚರವಾಗುವಂತೆ ಬದುಕಿರುವಾಗಲೇ ನಾವು ಯೇಸುವಿಗೋಸ್ಕರ ಸತತ ಸಾವಿಗೆ ಈಡಾಗಿದ್ದೇವೆ.

ಹೀಗೆ ನಮ್ಮಲ್ಲಿ ಸಾವು ಕಾರ್ಯಗತವಾಗುತ್ತಿದ್ದರೆ ನಿಮ್ಮಲ್ಲಿ ಜೀವ ಕಾರ್ಯಗತವಾಗುತ್ತಿದೆ. "ನಾನು ವಿಶ್ವಾಸವಿಟ್ಟೆನು. ಆದುದರಿಂದ ಮಾತನಾಡಿದೆನು," ಎಂದು ಪವಿತ್ರ ಗ್ರಂಥದಲ್ಲಿ ಬರೆಯಲಾಗಿದೆ. ಇದೇ ಮನೋಭಾವನೆಯಿಂದ ಕೂಡಿರುವ ನಾವು ಮಾತನಾಡಲೇಬೇಕು. ಏಕೆಂದರೆ ನಮಗೆ ವಿಶ್ವಾಸವಿದೆ.

ಪ್ರಭು ಯೇಸುವನ್ನು ಪುನರುತ್ಥಾನಗೊಳಿಸಿದ ದೇವರು ನಮ್ಮನ್ನು ಯೇಸು ಕ್ರಿಸ್ತರೊಡನೆ ಪುನರುತ್ಥಾನಗೊಳಿಸಿ ತಮ್ಮ ಸಾನ್ನಿಧ್ಯಕ್ಕೆ ಬರಮಾಡಿಕೊಳ್ಳುವರು ಎಂಬುದನ್ನು ನಾವು ಬಲ್ಲೆವು. ಅಂತೆಯೇ ನಿಮ್ಮನ್ನೂ ಬರಮಾಡಿಕೊಳ್ಳುವರು. ಇದೆಲ್ಲವೂ ನಿಮ್ಮ ಒಳಿತಿಗಾಗಿಯೇ. ಹೀಗೆ ಅನೇಕರಲ್ಲಿ ದೇವರ ಕೃಪಾವರವು ಉಕ್ಕಿ ಹರಿಯುವುದು; ಅವರಲ್ಲಿ ಕೃತಜ್ಞತಾಭಾವನೆಯನ್ನು ಹೆಚ್ಚಿಸುವುದು; ಇದರಿಂದಾಗಿ ದೇವರ ಮಹಿಮೆ ಬೆಳಗುವುದು.

_ಪ್ರಭುವಿನ ವಾಕ್ಯ_
_ದೇವರಿಗೆ ಕೃತಜ್ಞತೆ ಸಲ್ಲಲಿ_

*ಕೀರ್ತನೆ*
_126:1-6, v.5_
_ಶ್ಲೋಕ: ಅಳುತಳುತಾ ಬಿತ್ತುವವರು ನಲಿನಲಿಯುತಾ ಕೊಯ್ಯುವರು._

1. ಸೆರೆಯಿಂದೆಮ್ಮನು ಪ್ರಭು ಸಿಯೋನಿಗೆ ಮರಳಿಸಿದಾಗ
ಅದೊಂದು ಕನಸು ಕಂಡಂತಿತ್ತು ನಮಗೆ ಅವಾಗ
ಉಕ್ಕಿತಾಗ ಮುಖ ತುಂಬ ನಗು, ಬಾಯ್ತುಂಬ ಹರ್ಷಗೀತೆ _ಶ್ಲೋಕ_

2. ಎಂಥ ಮಹತ್ಕಾರ್ಯವೆಸಗಿದನಾ ಪ್ರಭು ಇವರ ಪರತೆ
ಇಂತೆಂದು ಆಡಿಕೊಂಡರು ತಂತಮ್ಮೊಳಗೆ ಅನ್ಯ ಜನತೆ
ಪ್ರಭು ನಮಗೆ ಮಹತ್ಕಾರ್ಯಮಾಡಿದುದು ಖಚಿತ
ಎಂತಲೆ ನಾವಾನಂದಭರಿತರಾಗುವುದು ಉಚಿತ _ಶ್ಲೋಕ_

3. ಬತ್ತಿದ ನದಿಯಲಿ ನೀರು ಮರಳಿ ಉಕ್ಕಿ ಹರಿವಂತೆ
ನೀಡು ಸಿರಿ ಸೌಭಾಗ್ಯ, ಹೇ ಪ್ರಭೂ, ನಮಗೆ ಮತ್ತೆ
ಅಳುತಳುತಾ ಬಿತ್ತುವವರು ನಲಿನಲಿಯುತಾ ಕೊಯ್ಯುವರು
ದುಃಖಿಸುತಾ ಬೀಜ ಬಿತ್ತಲು ಹೋದವನು
ಹರ್ಷಿಸುತಾ ಕೊಯ್ದು ತರುವನು ತೆನೆಗಳನು _ಶ್ಲೋಕ_

*ಘೋಷಣೆ*
_ಯೊವಾನ್ನ 15:16_
_ಅಲ್ಲೆಲೂಯ, ಅಲ್ಲೆಲೂಯ._
ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು;
ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ.
_ಅಲ್ಲೆಲೂಯ._

*ಶುಭಸಂದೇಶ*
_ಮತ್ತಾಯನು ಬರೆದ ಪವಿತ್ರ ಶುಭಸಂದೇಶ: 20:20-28_
_"ನನ್ನ ಪಾತ್ರೆಯಿಂದ ನೀವೇನೋ ಕುಡಿಯುವಿರಿ."_

ಆ ಕಾಲದಲ್ಲಿ ಜೆಬೆದಾಯನ ಮಕ್ಕಳ ತಾಯಿ ತನ್ನ ಪುತ್ರರ ಸಮೇತ ಯೇಸುವಿನ ಬಳಿಗೆ ಬಂದಳು. "ತಮ್ಮಿಂದ ನನಗೊಂದು ಉಪಕಾರ ಆಗಬೇಕು," ಎಂದು ಪ್ರಭುವಿನ ಪಾದಕ್ಕೆರಗಿದಳು.

"ನಿನ್ನ ಕೋರಿಕೆ ಏನು?" ಎಂದರು ಯೇಸು. ಅದಕ್ಕೆ ಅವಳು, "ತಮ್ಮ ಸಾಮ್ರಾಜ್ಯದಲ್ಲಿ, ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ತಮ್ಮ ಬಲಗಡೆಯಲ್ಲೂ ಇನ್ನೊಬ್ಬನು ತಮ್ಮ ಎಡಗಡೆಯಲ್ಲೂ ಆಸೀನರಾಗುವಂತೆ ಅಪ್ಪಣೆಯಾಗಬೇಕು," ಎಂದು ಕೋರಿದಳು.

ಅದಕ್ಕೆ ಪ್ರತ್ಯುತ್ತರವಾಗಿ ಯೇಸು, "ನೀವು ಕೋರಿಕೊಂಡದ್ದು ಏನೆಂದು ನಿಮಗೇ ತಿಳಿಯದು. ನಾನು ಕುಡಿಯಬೇಕಾದ ಪಾತ್ರೆಯಿಂದ ಕುಡಿಯಲು ನಿಮ್ಮಿಂದ ಆದೀತೆ?" ಎಂದು ಪ್ರಶ್ನಿಸಿದರು. "ಹೌದು, ಆಗುತ್ತದೆ," ಎಂದು ಅವರು ಮರು ನುಡಿದರು.

ಆಗ ಯೇಸು, "ನನ್ನ ಪಾತ್ರೆಯಿಂದ ನೀವೇನೋ ಕುಡಿಯುವಿರಿ. ಆದರೆ ನನ್ನ ಬಲಗಡೆಯಲ್ಲಾಗಲೀ ಎಡಗಡೆಯಲ್ಲಾಗಲೀ ಆಸೀನರಾಗುವಂತೆ ಅನುಗ್ರಹಿಸುವುದು ನನ್ನದಲ್ಲ. ಅದು ಯಾರಿಗಾಗಿ ನನ್ನ ಪಿತನಿಂದ ಸಿದ್ಧಮಾಡಲಾಗಿದೆಯೋ ಅವರಿಗೇ ಸಿಗುವುದು," ಎಂದು ನುಡಿದರು.

ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿದಾಗ ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು. ಯೇಸುವಾದರೋ, ಶಿಷ್ಯರೆಲ್ಲರನ್ನೂ ತಮ್ಮ ಬಳಿಗೆ ಕರೆದು, "ಲೋಕದ ಪ್ರಜಾಧಿಪತಿಗಳು ತಮ್ಮ ಪ್ರಜೆಗಳ ಮೇಲೆ ದರ್ಪದಿಂದ ದೊರೆತನ ಮಾಡುತ್ತಾರೆ; ಜನನಾಯಕರು ಎನಿಸಿಕೊಳ್ಳುವವರು ಜನರ ಮೇಲೆ ಅಧಿಕಾರ ಪ್ರದರ್ಶನ ಮಾಡುತ್ತಾರೆ. ಇದು ನಿಮಗೆ ಗೊತ್ತು. ನೀವು ಹಾಗಿರಬಾರದು.

ನಿಮ್ಮಲ್ಲಿ ಶ್ರೇಷ್ಠನಾಗಿರಲು ಇಚ್ಛಿಸುವವನು ನಿಮಗೆ ಸೇವಕನಾಗಿರಲಿ; ಪ್ರಥಮನಾಗಿರಲು ಆಶಿಸುವವನು ನಿಮ್ಮ ದಾಸನಾಗಿರಲಿ. ಹಾಗೆಯೇ ನರಪುತ್ರನು ಸೇವೆ ಮಾಡಿಸಿಕೊಳ್ಳುವುದಕ್ಕೆ ಅಲ್ಲ. ಇತರರ ಸೇವೆ ಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ," ಎಂದು ಹೇಳಿದರು.

_ಪ್ರಭುಕ್ರಿಸ್ತರ ಶುಭಸಂದೇಶ_
_ಕ್ರಿಸ್ತರೇ, ನಿಮಗೆ ಸ್ತುತಿ ಸಲ್ಲಲಿ_

ಆಮೆನ್

3 days ago | [YT] | 23

Krista Dani

24-07-26
ಜುಲೈ 24
ಶುಕ್ರವಾರ

*ಪವಿತ್ರ ಬೈಬಲ್ ದಿನಚರಿ*
ಸಾಧಾರಣ ಕಾಲದ ಹದಿನಾರನೆಯ ವಾರ
ಪೂಜಾವಿಧಿ ವರ್ಷ: 2
ಕೀರ್ತನಾ ಮಂಜರಿ: ವಾರ 4
ಪೂಜಾವಸ್ತ್ರ: ಹಸಿರು

*ಸ್ಮರಣೆ:*
ಪುನೀತ ಮರಿಯ ಪಿಲಾರ್ ತೆರೇಸಾ
ಮತ್ತು
ಮರಿಯಾ ಏಂಜಲೀಸ್
(ರಕ್ತ ಸಾಕ್ಷಿಗಳು)
(1877-1939)

---

*ದೈವಾಕ್ಯದ ವಿಧಿ*

*ಮೊದಲನೆಯ ವಾಚನ*
_ಪ್ರವಾದಿ ಯೆರೆಮೀಯನ ಗ್ರಂಥದಿಂದ: 3:14-17_
_"ನನ್ನ ಮನಸ್ಸು ಒಪ್ಪುವ ಪಾಲಕರನ್ನು ನಿಮಗೆ ಕೊಡುವೆನು, ಜೆರುಸಲೇಮಿಗೆ ಸಕಲ ರಾಷ್ಟ್ರಗಳವರು ನೆರೆದುಬರುವರು."_

ಸರ್ವೇಶ್ವರ ಇಂತೆನ್ನುತ್ತಾರೆ:
"ಭ್ರಷ್ಟರಾದ ಜನರೇ, ನನಗೆ ಅಭಿಮುಖರಾಗಿರಿ, ನಾನು ನಿಮಗೆ ಅಧಿಪತಿ. ನಿಮ್ಮಲ್ಲಿ ಒಂದು ಪಟ್ಟಣಕ್ಕೆ ಒಬ್ಬನಂತೆ, ಗೋತ್ರಕ್ಕೆ ಇಬ್ಬರಂತೆ ಆರಿಸಿ ಸಿಯೋನಿಗೆ ಕರೆತರುವೆನು. ಇದಲ್ಲದೆ ನನ್ನ ಮನಸ್ಸು ಒಪ್ಪುವ ಪಾಲಕರನ್ನು ನಿಮಗೆ ಕೊಡುವೆನು. ಅವರು ನಿಮ್ಮನ್ನು ಜ್ಞಾನವಿವೇಕಗಳಿಂದ ಪೋಷಿಸುವರು.

ನೀವು ನಾಡಿನಲ್ಲಿ ಹೆಚ್ಚಿ ಅಭಿವೃದ್ಧಿಯಾದಾಗ, 'ಸರ್ವೇಶ್ವರನ ಒಡಂಬಡಿಕೆಯ ಮಂಜೂಷವೆಲ್ಲಿ?' ಎಂದು ಪ್ರಸ್ತಾಪಿಸುವಂತಿಲ್ಲ. ಅದು ಜ್ಞಾಪಕಕ್ಕೆ ಬರುವುದಿಲ್ಲ, ಯಾರೂ ಅದನ್ನು ಸ್ಮರಿಸುವುದಿಲ್ಲ. ಅದು ಇಲ್ಲವಲ್ಲಾ ಎಂದು ದುಃಖಿಸುವುದಿಲ್ಲ. ಹೊಸದೊಂದನ್ನು ಕಲ್ಪಿಸಿಕೊಳ್ಳುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.

ಆ ಕಾಲ ಬಂದಾಗ ಜೆರುಸಲೇಮನ್ನೇ 'ಸರ್ವೇಶ್ವರನ ಸಿಂಹಾಸನ' ಎಂದು ಕರೆಯುವರು. ನನ್ನ ನಾಮಮಹತ್ವದ ಸ್ಥಾನವಾದ ಜೆರುಸಲೇಮಿಗೆ ಸಕಲ ರಾಷ್ಟ್ರಗಳವರು ನೆರೆದುಬರುವರು. ಆಮೇಲೆ ತಮ್ಮ ದುಷ್ಟ ಹೃದಯದ ನಿಮಿತ್ತ ಹಟಮಾರಿಗಳಂತೆ ನಡೆಯಲಾರರು."

_ಪ್ರಭುವಿನ ವಾಕ್ಯ_
_ದೇವರಿಗೆ ಕೃತಜ್ಞತೆ ಸಲ್ಲಲಿ_

*ಕೀರ್ತನೆ*
_ಯೆರೆಮೀಯ 31:10, 11-12, 13, v.10_
_ಶ್ಲೋಕ: ಪ್ರಭು ನಮ್ಮನ್ನು ಕಾಪಾಡುವರು_

1. ರಾಷ್ಟ್ರಗಳೇ, ಸರ್ವೇಶ್ವರನ ವಾಕ್ಯವನ್ನು ಕೇಳಿರಿ. ದೂರದ ದ್ವೀಪಗಳಲ್ಲೂ ಅದನ್ನು ಸಾರಿರಿ.
ಇಸ್ರಾಯೇಲರನ್ನು ಚದುರಿಸಿದಾತ, ಕುರಿಮಂದೆಯನ್ನು ಕಾಯುವ ಕುರುಬನಂತೆ ಅವರನ್ನು ಕೂಡಿಸಿ ಕಾಪಾಡುವನೆಂದು ಪ್ರಕಟಿಸಿರಿ. _ಶ್ಲೋಕ_

2. ಸರ್ವೇಶ್ವರ ಯಕೋಬರ ವಿಮೋಚಕ, ಅವರನ್ನು ಅವರಿಗಿಂತ ಬಲಿಷ್ಠರ ಕೈಯಿಂದ ಬಿಡಿಸಿದಾತ.
ಅವರು ಬಂದು ಹಾಡುವರು ಸಿಯೋನ್ ಶಿಖರದಲ್ಲಿ. ಬರುವರು ಪ್ರವಾಹ ಪ್ರವಾಹವಾಗಿ - ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕುರಿ, ಕುರಿಮರಿ, ಸರ್ವೇಶ್ವರನ ಈ ವರದಾನಗಳನ್ನು ಅನುಭವಿಸಲಿಕ್ಕಾಗಿ. _ಶ್ಲೋಕ_

3. ಆಗ ನಾಟ್ಯವಾಡಿ ನಲಿವಳು ಯುವತಿ. ಹರ್ಷಿಸುವರು ಯುವಕರು ಮುದುಕರು ಜೊತೆಯಾಗಿ.
ಅವರ ದುಃಖವನ್ನು ಸಂತೋಷವಾಗಿಸುವೆನು. ವ್ಯಸನ ತೊರೆದು ಆನಂದಿಸುವಂತೆ ಅವರನ್ನು ಸಂತೈಸುವೆನು. _ಶ್ಲೋಕ_

*ಘೋಷಣೆ*
_ಕೀರ್ತನೆ 130:5_
_ಅಲ್ಲೆಲೂಯ, ಅಲ್ಲೆಲೂಯ._
ಪ್ರಭುವಿಗಾಗಿ ಎನ್ನ ಮನ ಕಾದಿದೆ.
ಆತನ ವಾಕ್ಯದಲಿ ನಂಬಿಕೆ ನನಗಿದೆ.
_ಅಲ್ಲೆಲೂಯ._

*ಶುಭಸಂದೇಶ*
_ಮತ್ತಾಯನು ಬರೆದ ಪವಿತ್ರ ಶುಭಸಂದೇಶ: 13:18-23_
_"ವಾರ್ತೆಯನ್ನು ಕೇಳಿ ಗ್ರಹಿಸಿಕೊಳ್ಳುವವನೇ ಫಲಪ್ರದನಾಗುತ್ತಾನೆ."_

ಆ ಕಾಲದಲ್ಲಿ ಯೇಸು ತಮ್ಮ ಶಿಷ್ಯರನ್ನು ಉದ್ದೇಶಿಸಿ, "ಈಗ ಬಿತ್ತುವವನ ಸಾಮತಿಯ ಅರ್ಥವನ್ನು ಕೇಳಿ:

ಒಬ್ಬನು ಶ್ರೀ ಸಾಮ್ರಾಜ್ಯದ ಸಂದೇಶವನ್ನು ಕೇಳಿ ಅದನ್ನು ಗ್ರಹಿಸದೆ ಹೋದರೆ, ಕೇಡಿಗನು ಬಂದು ಅವನ ಹೃದಯದಲ್ಲಿ ಬಿತ್ತಿದ ಬೀಜವನ್ನು ತೆಗೆದೆಸೆಯುತ್ತಾನೆ. ಇವನು ಕಾಲ್ದಾರಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ.

ಬೆರೊಬ್ಬನು ಈ ಸಂದೇಶವನ್ನು ಕೇಳಿದ ಕೂಡಲೇ ಅದನ್ನು ಸಂತೋಷದಿಂದ ಸ್ವೀಕರಿಸುತ್ತಾನೆ. ಆದರೆ ಅದು ತನ್ನಲ್ಲಿ ಬೇರೂರದ ಕಾರಣ ಸ್ವಲ್ಪ ಕಾಲ ಮಾತ್ರ ಇದ್ದು, ಸಂದೇಶದ ನಿಮಿತ್ತ ಕಷ್ಟ ಕೋಟಲೆಗಳು ಬಂದೊದಗಿದ ಕೂಡಲೇ ಎಡವಿಬೀಳುತ್ತಾನೆ. ಇವನು ಕಲ್ಲು ನೆಲದ ಮೇಲೆ ಬಿದ್ದ ಬೀಜವನ್ನು ಹೋಲುತ್ತಾನೆ.

ಇನ್ನೊಬ್ಬನು ಸಂದೇಶವನ್ನೇನೋ ಕೇಳುತ್ತಾನೆ, ಆದರೆ ಪ್ರಾಪಂಚಿಕ ಚಿಂತನೆಗಳು, ಐಶ್ವರ್ಯದ ವ್ಯಾಮೋಹಗಳು ಆ ಸಂದೇಶವನ್ನು ಫಲಬಿಡದಂತೆ ಅದುಮಿಬಿಡುತ್ತವೆ. ಇವನು ಮುಳ್ಳುಪೊದೆಗಳಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ.

ಇನ್ನೊಬ್ಬನು ವಾಕ್ಯವನ್ನು ಕೇಳುತ್ತಾನೆ, ಗ್ರಹಿಸಿಕೊಳ್ಳುತ್ತಾನೆ; ಫಲಪ್ರದನಾಗಿ ನೂರರಷ್ಟು, ಅರವತ್ತರಷ್ಟು, ಮೂವತ್ತರಷ್ಟು ಫಲ ಕೊಡುತ್ತಾನೆ. ಇವನು ಹದವಾದ ಭೂಮಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ," ಎಂದರು.

_ಪ್ರಭುಕ್ರಿಸ್ತರ ಶುಭಸಂದೇಶ_
_ಕ್ರಿಸ್ತರೇ, ನಿಮಗೆ ಸ್ತುತಿ ಸಲ್ಲಲಿ_

ಆಮೆನ್

4 days ago | [YT] | 24

Krista Dani

23-07-26
ಜುಲೈ 23
ಗುರುವಾರ

*ಪವಿತ್ರ ಬೈಬಲ್ ದಿನಚರಿ*
ಸಾಧಾರಣ ಕಾಲದ ಹದಿನಾರನೆಯ ವಾರ
ಪೂಜಾವಿಧಿ ವರ್ಷ: 2
ಕೀರ್ತನಾ ಮಂಜರಿ: ವಾರ 4
ಪೂಜಾವಸ್ತ್ರ: ಹಸಿರು

*ಸ್ಮರಣೆ:*
ಸ್ವೀಡನ್ ನ ಸಂತ ಬ್ರಿಡ್ಜೆಟ್
(ಸಂಸ್ಥಾಪಕಿ)
(ವಯಸ್ಸು: 69)
(1303-1372)

---

*ದೈವಾಕ್ಯದ ವಿಧಿ*

*ಮೊದಲನೆಯ ವಾಚನ*
_ಪ್ರವಾದಿ ಯೆರೆಮೀಯನ ಗ್ರಂಥದಿಂದ: 2:1-3, 7-8, 12-13_
_"ಜೀವಜಲದ ಬುಗ್ಗೆಯಾದ ನನ್ನೇ ತೊರೆದುಬಿಟ್ಟಿದ್ದಾರೆ! ನೀರು ನಿಲ್ಲದ ಬಿರುಕು ತೊಟ್ಟಿಗಳನ್ನು ತಮಗಾಗಿ ಕೊರೆದುಕೊಂಡಿದ್ದಾರೆ"_

ಸರ್ವೇಶ್ವರಸ್ವಾಮಿ ನನಗೆ ನೀಡಿದ ಆದೇಶ ಇದು: "ನೀನು ಹೋಗಿ ಜೆರುಸಲೇಮ್ ನಗರಕ್ಕೆ ಕೇಳಿಸುವಂತೆ ಈ ಸಂದೇಶವನ್ನು ಸಾರು: ನೀನು ಯೌವ್ವನದಲ್ಲಿ ನನ್ನ ಮೇಲಿಟ್ಟಿದ್ದ ಪ್ರೀತಿಯನ್ನು, ನವ ವಧುವಾಗಿ ನನಗೆ ತೋರಿಸಿದ ಪ್ರೇಮವನ್ನು, ಹಾಗೂ ಬಿತ್ತನೆಯಿಲ್ಲದ ಅರಣ್ಯ ಮಾರ್ಗವಾಗಿ ನನ್ನನ್ನು ಹಿಂಬಾಲಿಸಿದಾಗ ಅನುಸರಿಸುತ್ತಿದ್ದ ನಿನ್ನ ಪಾತಿವ್ರತ್ಯವನ್ನು ನನ್ನ ನೆನಪಿನಲ್ಲಿ ಇಟ್ಟುಕೊಂಡಿದ್ದೇನೆ; ಇದು ನಿನ್ನ ಹಿತಕ್ಕಾಗಿಯೇ.

ಎಲೈ ಇಸ್ರಯೇಲ್, ನೀನು ನನಗೆ ಮೀಸಲಾದವಳು, ನನ್ನ ಬೆಳೆಯ ಪ್ರಥಮ ಫಲ. ಯಾರು ಯಾರು ಅದನ್ನು ತಿಂದರೋ ಅವರು ದ್ರೋಹಿಗಳು, ಕೇಡಿಗೆ ಗುರಿಯಾದವರು, ಎನ್ನುತಾರೆ ಸರ್ವೇಶ್ವರ. ನಾನು ನಿಮ್ಮನ್ನು ಫಲವತ್ತಾದ ನಾಡಿಗೆ ಕರೆತಂದೆ. ಅದರ ಫಲವನ್ನೂ ಸಾರವನ್ನೂ ಅನುಭವಿಸುವ ಹಾಗೆ ಮಾಡಿದೆ. ಆದರೆ ನೀವು ಒಳ ನುಗ್ಗಿ ಬಂದು ಆ ನನ್ನ ನಾಡನ್ನು ಹೊಲೆಮಾಡಿದಿರಿ; ಆ ನನ್ನ ಸೊತ್ತನ್ನು ಅಸಹ್ಯಪಡಿಸಿದಿರಿ.

ಯಾಜಕರು, 'ಸರ್ವೇಶ್ವರಸ್ವಾಮಿ ಎಲ್ಲಿ?' ಎಂದು ವಿಚಾರಿಸಲೇ ಇಲ್ಲ. ಧರ್ಮಶಾಸ್ತ್ರಿಗಳು ನನ್ನನ್ನು ಅರಿತುಕೊಳ್ಳಲಿಲ್ಲ. ಪ್ರಜಾಪಾಲಕರು ನನಗೆ ದ್ರೋಹಮಾಡಿದರು. ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದನೆ ಮಾಡಿದರು. ನಿರರ್ಥಕವಾದವುಗಳನ್ನು ಪೂಜಿಸಿದರು.

ಆಕಾಶಮಂಡಲವೇ, ಇದನ್ನು ಕೇಳಿ ನಿಬ್ಬೆರಗಾಗು; ತತ್ತರಿಸಿ ಹಾಳಾಗು!" ಇದು ಸರ್ವೇಶ್ವರಸ್ವಾಮಿಯ ವಾಣಿ. "ನನ್ನ ಜನರು ಇಬ್ಬಗೆಯ ಅಪರಾಧಗಳನ್ನು ಎಸಗಿದ್ದಾರೆ; ಜೀವ ಜಲದ ಬುಗ್ಗೆಯಾದ ನನ್ನನ್ನೇ ತೊರೆದುಬಿಟ್ಟಿದ್ದಾರೆ. ತೊಟ್ಟಿಗಳನ್ನು, ನೀರು ನಿಲ್ಲದ ಬಿರುಕು ತೊಟ್ಟಿಗಳನ್ನು ತಮಗಾಗಿ ಕೊರೆದುಕೊಂಡಿದ್ದಾರೆ!"

_ಪ್ರಭುವಿನ ವಾಕ್ಯ_
_ದೇವರಿಗೆ ಕೃತಜ್ಞತೆ ಸಲ್ಲಲಿ_

*ಕೀರ್ತನೆ*
_36:5-6, 7-10, v.9_
_ಶ್ಲೋಕ: ಪ್ರಭೂ, ನಿನ್ನಲ್ಲಿದೆ ಜೀವದ ಬುಗ್ಗೆ_

1. ನಿನ್ನ ಪ್ರೀತಿ ಪ್ರಭೂ, ಚುಂಬಿಸುತಿಹುದು ಗಗನವನು
ನಿನ್ನ ಸತ್ಯವು ಮುಟ್ಟಿತಿಹುದು ಮೇಘಮಂಡಲವನು
ನಿನ್ನ ನೀತಿ ಸುರಗಿರಿಯಂತೆ
ನಿನ್ನ ನ್ಯಾಯ ಮಹಾಸಾಗರದಂತೆ _ಶ್ಲೋಕ_

2. ನಿನ್ನಚಲ ಪ್ರೀತಿ, ಹೇ ದೇವಾ, ಎಷ್ಟೋ ಅಮೂಲ್ಯ
ನಿನ್ನಕ್ಕರೆಯ ರೆಕ್ಕೆಗಳಡಿ ನರಮಾನವರಿಗಾಶ್ರಯ
ಅವರ ತೃಪ್ತಿ ನಿನ್ನ ಮಂದಿರದ ಸಮೃದ್ಧಿಯಿಂದ
ಅವರ ಪಾನೀಯ ನಿನ್ನ ಸಂಭ್ರಮ ಪ್ರವಾಹದಿಂದ _ಶ್ಲೋಕ_

3. ನಿನ್ನಲ್ಲಿದೆ ಜೀವದ ಬುಗ್ಗೆ
ನಿನ್ನ ಬೆಳಕಿಂದ ಬೆಳಕೆಮಗೆ
ನಿನ್ನನರಿತವರನು ಪ್ರೀತಿಸು ಮುಂದಕ್ಕೂ
ಒಳಿತನ್ನು ಮಾಡು ನೇರ ಮನಸ್ಕರಿಗೂ _ಶ್ಲೋಕ_

*ಘೋಷಣೆ*
_ಕೀರ್ತನೆ 119:135_
_ಅಲ್ಲೆಲೂಯ, ಅಲ್ಲೆಲೂಯ._
ತೋರು ನಿನ್ನ ಮುಖದರ್ಶನ ಈ ದಾಸನಿಗೆ.
ನೀ ಕಲಿಸು ನಿನ್ನ ನಿಬಂಧನೆಗಳನು ಎನಗೆ.
_ಅಲ್ಲೆಲೂಯ._

*ಶುಭಸಂದೇಶ*
_ಮತ್ತಾಯನು ಬರೆದ ಪವಿತ್ರ ಶುಭಸಂದೇಶ: 13:10-17_
_"ಸ್ವರ್ಗಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶ ಲಭಿಸಿರುವುದು ನಿಮಗೆ, ಅವರಿಗಲ್ಲ."_

ಆ ಕಾಲದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು, "ನೀವು ಜನರೊಡನೆ ಮಾತನಾಡುವಾಗ ಸಾಮತಿಗಳನ್ನು ಉಪಯೋಗಿಸುತ್ತೀರಿ, ಏಕೆ?" ಎಂದು ಕೇಳಿದರು.

ಅದಕ್ಕೆ ಪ್ರತ್ಯುತ್ತರವಾಗಿ ಯೇಸು, "ಸ್ವರ್ಗಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶ ಲಭಿಸಿರುವುದು ನಿಮಗೆ, ಅವರಿಗಲ್ಲ. ಉಳ್ಳವನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ, ಅವನು ಸಮೃದ್ಧನಾಗುತ್ತಾನೆ. ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ.

ಅವರೊಡನೆ ಸಾಮತಿರೂಪದಲ್ಲಿ ಮಾತಾನಾಡುವುದಕ್ಕೆ ಕಾರಣ ಇದು:
ಅವರು ಕಣ್ಣಾರೆ ನೋಡಿದರೂ ಕಾಣುವುದಿಲ್ಲ; ಕಿವಿಯಾರೆ ಕೇಳಿದರೂ ಕಿವಿಗೊಡುವುದಿಲ್ಲ; ಗ್ರಹಿಸುವುದೂ ಇಲ್ಲ.

ಪ್ರವಾದಿ ಯೆಶಾಯನ ಈ ಪ್ರವಚನ ಅವರಲ್ಲಿ ಈಡೇರುತ್ತದೆ:
'ಕೇಳಿ ಕೇಳಿಯೂ ಗ್ರಹಿಸರು; ನೋಡಿ ನೋಡಿಯೂ ಕಾಣರು.
ಈ ಜನರ ಹೃದಯ ಕಲ್ಲಾಗಿದೆ, ಕಿವಿ ಮಂದವಾಗಿದೆ, ಕಣ್ಣು ಮಬ್ಬಾಗಿದೆ.
ಇಲ್ಲದಿದ್ದರೆ ಇವರ ಕಣ್ಣು ಕಾಣುತ್ತಾ, ಕಿವಿ ಕೇಳುತ್ತಾ, ಹೃದಯ ಗ್ರಹಿಸುತ್ತಾ ನನ್ನತ್ತ ತಿರುಗುತ್ತಿದ್ದರು;
ದೇವರಾದ ನಾನಿವರನ್ನು ಸ್ವಸ್ಥಪಡಿಸುತ್ತಿದ್ದೆನು.'

ನಿವಾದರೋ ಭಾಗ್ಯವಂತರು. ನಿಮ್ಮ ಕಣ್ಣುಗಳು ಕಾಣುತ್ತವೆ, ಕಿವಿಗಳು ಕೇಳುತ್ತವೆ. ಎಷ್ಟೋ ಪ್ರವಾದಿಗಳು ಹಾಗೂ ಸತ್ಪುರುಷರು ನೀವು ನೋಡುವುದನ್ನು ನೋಡುವುದಕ್ಕೂ, ಕೇಳುವುದನ್ನು ಕೇಳುವುದಕ್ಕೂ ಅಪೇಕ್ಷಿಸಿದರು. ಆದರೆ ಅವರು ನೋಡಲೂ ಇಲ್ಲ, ಕೇಳಲೂ ಇಲ್ಲ ಎಂಬುದು ನಿಮಗೆ ತಿಳಿದಿರಲಿ.”

_ಪ್ರಭುವಿನ ಶುಭಸಂದೇಶ_
_ಕ್ರಿಸ್ತರೇ, ನಿಮಗೆ ಸ್ತುತಿ ಸಲ್ಲಲಿ_

ಆಮೆನ್

5 days ago | [YT] | 25

Krista Dani

22-07-26
ಜುಲೈ 22
ಬುಧವಾರ

*ಪವಿತ್ರ ಬೈಬಲ್ ದಿನಚರಿ*
ಸಾಧಾರಣ ಕಾಲದ ಹದಿನಾರನೆಯ ವಾರ
(ವಾ.ಗ್ರ. ಭಾಗ-3, ಪುಟ 198)
ಪೂಜಾವಿಧಿ: ಹಬ್ಬ
ಕೀರ್ತನಾ ಮಂಜರಿ: ಹಬ್ಬ
ಪೂಜಾವಸ್ತ್ರ: ಬಿಳಿ

*ಸ್ಮರಣೆ:*
ಮಗ್ದಲದ ಸಂತ ಮರಿಯಾ
(ಪ್ರೇಷಿತರ ಧರ್ಮಪ್ರಚಾರಕಿ)

---

*ದೈವಾಕ್ಯದ ವಿಧಿ*

*ಮೊದಲನೆಯ ವಾಚನ*
_ಪರಮಗೀತೆ: 3:1-4_
_"ನನ್ನ ಪ್ರಾಣಕಾಂತನನ್ನು ಕಂಡುಕೊಂಡೆ"_

ನನ್ನ ನಲ್ಲೆ ಇಂತೆನ್ನುತ್ತಾಳೆ:
ನನ್ನ ಪ್ರಾಣಕಾಂತನನ್ನು ರಾತ್ರಿಯೆಲ್ಲಾ ಹುಡುಕಿದೆ, ಹಾಸಿಗೆಯ ಮೇಲೆ ಹಾತೊರೆದೆ. ಹುಡುಕಿ ಹುಡುಕಿ ಸಿಗಲಾರದೆ ಬೇಸತ್ತೆ. ಎದ್ದು ಊರೆಲ್ಲಾ ಅಲೆದಾಡಿದೆ, ಬೀದಿಗಳಲ್ಲಿ ಚೌಕಗಳಲ್ಲಿ ಹುಡುಕಾಡಿದೆ. ಹುಡುಕಿ ಹುಡುಕಿ ಸಿಗಲಾರದೆ ಬೇಸತ್ತೆ. ಊರಲ್ಲಿ ತಿರುಗುವ ಪಹರೆಯವರ ಕೈಗೆ ಸಿಕ್ಕಿಬಿದ್ದೆ. "ನನ್ನ ಪ್ರಾಣಕಾಂತನನ್ನು ಕಂಡಿರಾ?" ಎಂದು ವಿಚಾರಿದೆ. ಅವರನ್ನು ಬಿಟ್ಟು ತುಸು ಹೊತ್ತಿನಲ್ಲೇ ನನ್ನ ಪ್ರಾಣಕಾಂತನನ್ನು ಕಂಡುಕೊಂಡೆ.

_ಪ್ರಭುವಿನ ವಾಕ್ಯ_
_ದೇವರಿಗೆ ಕೃತಜ್ಞತೆ ಸಲ್ಲಲಿ_

*ಅಥವಾ*

*ಪರ್ಯಾಯ ವಾಚನ:*
_2 ಕೊರಿಂಥಿಯರಿಗೆ: 5:14-17_
_"ಇನ್ನು ಮುಂದೆ ನಾವು ಯಾರನ್ನೂ ಕೇವಲ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ."_

ಸಹೋದರರೇ, ಯೇಸು ಕ್ರಿಸ್ತರ ಪ್ರೀತಿಯ ಪಾಲನೆಗೆ ನಾವು ಒಳಗಾಗಿದ್ದೇವೆ. ಎಲ್ಲಾ ಮಾನವರಿಗೋಸ್ಕರ ಒಬ್ಬನು ಮರಣಹೊಂದಿದನು. ಆದ್ದರಿಂದ ನಾವೆಲ್ಲರೂ ಆ ಮರಣದಲ್ಲಿ ಪಾಲುಗಾರರು. ಸರ್ವರಿಗಾಗಿ ಯೇಸು ಪ್ರಾಣತ್ಯಾಗ ಮಾಡಿದರು. ಪರಿಣಾಮವಾಗಿ, ಇನ್ನು ಮುಂದೆ ಜೀವಿಸುವವರು ತಮಗಾಗಿ ಜೀವಿಸದೆ, ಸತ್ತು ಪುನರುತ್ಥಾನರಾದ ಯೇಸುವಿಗಾಗಿ ಜೀವಿಸಬೇಕು.

ಇನ್ನು ಮುಂದೆ ನಾವು ಯಾರನ್ನೂ ಕೇವಲ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಂದು ಕಾಲದಲ್ಲಿ, ಕ್ರಿಸ್ತ ಯೇಸುವನ್ನು ನಾವು ಹಾಗೆ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಹಾಗೆ ಮಾಡುವುದಿಲ್ಲ. ಯಾರಾದರೂ ಯೇಸು ಕ್ರಿಸ್ತರೊಡನೆ ಒಂದಾದರೆ ಅವನು ನೂತನ ಸೃಷ್ಟಿಯಾಗುತ್ತಾನೆ. ಹಳೆಯದೆಲ್ಲಾ ಅಳಿದುಹೋಗುತ್ತದೆ. ಹೊಸದಿದೋ, ಜನ್ಮ ತಳೆದಿದೆ.

_ಪ್ರಭುವಿನ ವಾಕ್ಯ_
_ದೇವರಿಗೆ ಕೃತಜ್ಞತೆ ಸಲ್ಲಲಿ_

*ಕೀರ್ತನೆ*
_63:1-5, 7-8, v.1_
_ಶ್ಲೋಕ: ನಿನಗೋಸ್ಕರ ಎನ್ನ ತನು ಸೊರಗಿದೆ, ಮನ ಬಾಯಾರಿದೆ_

1. ದೇವಾ, ನೀ ಎನ್ನ ದೇವಾ, ನಿನಗಾಗಿ ನಾ ಕಾದಿರುವೆ
ನಿರ್ಜಲ ಮರುಭೂಮಿಯಲ್ಲಿ ನೀರಿಗಾಗಿ ಹಾತೊರೆವಂತೆ
ನಿನಗೋಸ್ಕರ ಎನ್ನ ತನು ಸೊರಗಿದೆ, ಮನ ಬಾಯಾರಿದೆ _ಶ್ಲೋಕ_

2. ನಿನ್ನ ಮಂದಿರದಲ್ಲಿ ನನಗಾದ ದರ್ಶನದಲಿ
ನಿನ್ನ ಶಕ್ತಿ ಪ್ರತಿಭೆಯನ್ನು ಕಂಡಿರುವೆನಲ್ಲಿ
ಪ್ರಾಣಕ್ಕಿಂತ ಮಿಗಿಲಾದುದು ನಿನ್ನಚಲ ಪ್ರೀತಿ
ಎಡೆಬಿಡದೆ ಮಾಳ್ವುದು ನನ್ನೀ ತುಟಿ ನಿನ್ನ ಸ್ತುತಿ _ಶ್ಲೋಕ_

3. ನಿನ್ನ ಸ್ತುತಿಸುವೆ ಜೀವಮಾನ ಪರಿಯಂತ
ಕೈ ಮುಗಿವೆ ನಿನ್ನ ನಾಮದ ಸ್ಮರಣಾರ್ಥ
ಮೃಷ್ಟಾನ್ನ ತಿಂದಂತೆ ಎನ್ನ ಮನ ಸಂತೃಪ್ತ
ಸಂಭ್ರಮದಿಂದ ನಿನ್ನ ಹೊಗಳುವುದು ಬಾಯ್ತುಂಬ _ಶ್ಲೋಕ_

4. ನನಗೆ ನೀನು ನಿರಂತರದ ಸಹಾಯಕ
ನಿನ್ನ ರೆಕ್ಕೆಗಳಡಿ ನಾ ಸುಖಿ ಗಾಯಕ
ನನ್ಮಾತ್ಮ ನಿನಗಾತುಕೊಂಡಿದೆ
ನಿನ್ನ ಬಲಗೈ ನನಗಿಂಬಾಗಿದೆ _ಶ್ಲೋಕ_

*ಘೋಷಣೆ*
_ಅಲ್ಲೆಲೂಯ, ಅಲ್ಲೆಲೂಯ._
ಹೇಳು ನಮಗೆ ಮರಿಯಳೇ, ಕೇಳು; ದಾರಿಯಲ್ಲಿ ನೀನೇನು ನೋಡಿದೆ?
'ಸಮಾಧಿಯು ಜೀವಂತರನ್ನಿಟ್ಟುಕೊಂಡಿತ್ತು. ಕ್ರಿಸ್ತರು ಪುನರುತ್ಥಾನರಾಗುವಾಗ ಅವರ ಮಹಿಮೆಯನ್ನು ನೋಡಿದೆನು.'
_ಅಲ್ಲೆಲೂಯ._

*ಶುಭಸಂದೇಶ*
_ಯೊವಾನ್ನನು ಬರೆದ ಪವಿತ್ರ ಶುಭಸಂದೇಶ: 20:1-2, 11-18_
_"ಏಕಮ್ಮಾ ಅಳುತ್ತಿರುವೆ? ಏನನ್ನು ಹುಡುಕುತ್ತಿರುವೆ?"_

ಅಂದು ಭಾನುವಾರ, ಮುಂಜಾನೆ. ಇನ್ನೂ ಕತ್ತಲಾಗಿತ್ತು. ಮಗ್ದಲದ ಮರಿಯಳು ಸಮಾಧಿಯ ಬಳಿಗೆ ಬಂದಳು. ಸಮಾಧಿಯ ಬಾಗಿಲಿಗೆ ಮುಚ್ಚಲಾಗಿದ್ದ ಕಲ್ಲು ಅಲ್ಲಿಂದ ತೆಗೆದುಹಾಕಿರುವುದನ್ನು ಕಂಡಳು. ಆಗ ಆಕೆ ಸಿಮೋನ ಪೇತ್ರನ ಮತ್ತು ಯೇಸುವಿಗೆ ಆಪ್ತನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೆ ಓಡಿ ಬಂದು, "ಪ್ರಭುವನ್ನು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿಬಿಟ್ಟಿದ್ದಾರೆ; ಅವರನ್ನು ಎಲ್ಲಿ ಇಟ್ಟಿದಾರೋ ಗೊತ್ತಿಲ್ಲ," ಎಂದು ಹೇಳಿದಳು.

ಮರಿಯಳು ಅಳುತ್ತಾ ಸಮಾಧಿಯ ಹೊರಗೆ ನಿಂತುಕೊಂಡಿದ್ದಳು. ಆಕೆ ಅಳುತ್ತಾ ಸಮಾಧಿಯೊಳಗೆ ಬಗ್ಗಿನೋಡಿದಾಗ ಶ್ವೇತವಸ್ತ್ರಧಾರಿಗಳಾದ ಇಬ್ಬರು ದೇವದೂತರನ್ನು ಅಲ್ಲಿ ಕಂಡಳು. ಯೇಸುವಿನ ಪಾರ್ಥಿವ ಶರೀರವನ್ನು ಇಟ್ಟಿದ್ದ ಸ್ಥಳದಲ್ಲಿ, ಒಬ್ಬನು ಅವರ ತಲೆಯಿದ್ದ ಕಡೆಯಲ್ಲೂ ಮತ್ತೊಬ್ಬನು ಕಾಲಿದ್ದ ಕಡೆಯಲ್ಲೂ ಕುಳಿತಿದ್ದರು.

ಅವರು ಆಕೆಯನ್ನು, "ಏಕಮ್ಮಾ ಅಳುತ್ತಿರುವೆ?" ಎಂದು ಕೇಳಿದರು. "ನನ್ನ ಪ್ರಭುವನ್ನು ತೆಗೆದುಕೊಂಡು ಹೋಗಿಬಿಟ್ಟಿದ್ದಾರೆ. ಎಲ್ಲಿ ಇಟ್ಟಿದ್ದಾರೋ ತಿಳಿಯದು," ಎಂದಳು.

ಹಾಗೆ ಹೇಳಿ ಹಿಂದಕ್ಕೆ ತಿರುಗಿದಾಗ ಅಲ್ಲೇ ಯೇಸು ನಿಂತಿರುವುದು ಆಕೆಗೆ ಕಾಣಿಸಿತು. ಆದರೆ ಯೇಸುವೇ ಅವರೆಂದು ಆಕೆಗೆ ತಿಳಿಯಲಿಲ್ಲ. ಯೇಸು, "ಏಕಮ್ಮಾ ಅಳುತ್ತಿರುವೆ? ಏನನ್ನು ಹುಡುಕುತ್ತಿರುವೆ?" ಎಂದು ಕೇಳಿದಾಗಲೂ ಮರಿಯಳು ಅವರು ತೋಟಗಾರನೆಂದು ಭಾವಿಸಿ, "ಅಯ್ಯಾ, ನೀವೇನಾದರೂ ಅವರನ್ನು ಕೊಂಡೊಯ್ದಿದ್ದರೆ ಎಲ್ಲಿಟ್ಟಿರುವಿರಿ, ಹೇಳಿ; ನಾನು ತೆಗೆದುಕೊಂಡು ಹೋಗುತ್ತೇನೆ," ಎಂದು ಹೇಳಿದಳು.

ಆಗ ಯೇಸು, "ಮರಿಯಾ" ಎಂದು ಹೆಸರಿಡಿದು ಕರೆದರು. ಆಕೆ ಹಿಂದಿರುಗಿ ನೋಡಿ, "ರಬ್ಬೂನಿ" ಎಂದಳು. (ಯೆಹೂದ್ಯರ ಭಾಷೆಯಲ್ಲಿ ಹಾಗೆಂದರೆ "ಗುರುದೇವಾ" ಎಂದರ್ಥ)

ಯೇಸು ಆಕೆಗೆ, "ನನ್ನನ್ನು ಹಿಡಿದುಕೊಂಡಿರಬೇಡ, ನಾನು ಇನ್ನೂ ಪಿತನ ಬಳಿಗೆ ಏರಿಹೋಗಿಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ ನನ್ನ ಪಿತನೂ ನಿಮ್ಮ ಪಿತನೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನಲ್ಲಿಗೆ ನಾನು ಏರಿ ಹೋಗುತ್ತೇನೆಂದು ತಿಳಿಸು," ಎಂದು ಹೇಳಿದರು.

ಮಗ್ಧಳದ ಮರಿಯಳು ಶಿಷ್ಯರ ಬಳಿಗೆ ಬಂದು, "ನಾನು ಪ್ರಭುವನ್ನು ಕಂಡೆ; ಅವರು ಹೀಗೆಲ್ಲಾ ಹೇಳಿದರು," ಎಂದು ತಿಳಿಸಿದಳು.

ಪ್ರಭುಕ್ರಿಸ್ತರ ಶುಭಸಂದೇಶ_
ಕ್ರಿಸ್ತರೇ, ನಿಮಗೆ ಸ್ತುತಿ ಸಲ್ಲಲಿ_

ಆಮೆನ್

6 days ago | [YT] | 23

Krista Dani

21-07-26
ಜುಲೈ 21
ಮಂಗಳವಾರ

*ಪವಿತ್ರ ಬೈಬಲ್ ದಿನಚರಿ*
ಸಾಧಾರಣ ಕಾಲದ ಹದಿನಾರನೆಯ ವಾರ
(ವಾ.ಗ್ರ. ಭಾಗ-2, ಪುಟ 464)
ಪೂಜಾವಿಧಿ ವರ್ಷ: 2
ಕೀರ್ತನಾ ಮಂಜರಿ: ವಾರ 4
ಪೂಜಾವಸ್ತ್ರ: ಹಸಿರು

*ಸ್ಮರಣೆ:*
ಬ್ರಿಂಡಿಸಿಯ ಸಂತ ಲಾರೆನ್ಸ್
(ಯಾಜಕ / ಧರ್ಮಸಭೆ ಪಂಡಿತ)

---

*ದೈವಾಕ್ಯದ ವಿಧಿ*

*ಮೊದಲನೆಯ ವಾಚನ*
_ಪ್ರವಾದಿ ಮೀಕನ ಗ್ರಂಥದಿಂದ: 7:14-15, 18-20_
_"ನಮ್ಮ ಅಪರಾಧಗಳನ್ನು ಅಳಿಸಿ ಸಮುದ್ರದ ತಳಕ್ಕೆ ತಳ್ಳಿಬಿಡಿ."_

ಸರ್ವೇಶ್ವರಾ, ನಿಮ್ಮ ಮಂದೆಗೆ ಸೇರಿದ ಜನರನ್ನು ಕುರಿಗಾಹಿಯಂತೆ ಪರಿಪಾಲಿಸಿರಿ. ನಿಮ್ಮ ಸ್ವಾಸ್ಥ್ಯವಾಗಿ, ಮಂದೆಯಾಗಿ ಇರುವಂಥ ಜನರು, ಸುತ್ತಮುತ್ತಲು ಫಲವತ್ತಾದ ಹಸಿರು ಭೂಮಿಯಿದ್ದರೂ ಮರಳುಗಾಡಿನಲ್ಲಿ ಪ್ರತ್ಯೇಕವಾಗಿ ಜೀವಿಸುತ್ತಿರುವರು. ಪೂರ್ವಕಾಲದಲ್ಲಿದ್ದಂತೆ, ಈಗ ಅವರು ಬಾಷಾನ್ ಮತ್ತು ಗಿಲ್ಯಾದ್ ನಾಡುಗಳಿಗೆ ತೆರಳಿ ಪೋಷಣೆ ಪಡೆಯಲಿ. ಈಜಿಪ್ಟ್ ದೇಶದಿಂದ ನಮ್ಮನ್ನು ಹೊರತಂದ ದಿನಗಳಲ್ಲಿ ನೀವು ಮಾಡಿದ ಮಹತ್ಕಾರ್ಯಗಳನ್ನು ಮರಳಿ ಮಾಡಿ ತೋರಿಸಿರಿ.

ನಿಮ್ಮಂಥ ದೇವರು ಯಾರಿದ್ದಾರೆ? ತಮ್ಮ ಸ್ವಂತ ಜನರಲ್ಲಿ ಅಳಿದುಳಿದವರ ಅಪರಾಧಗಳನ್ನು ಲೆಕ್ಕಿಸದೆ, ಅವರ ದ್ರೋಹಗಳನ್ನು ಕ್ಷಮಿಸುವಂಥ ದೇವರು ಯಾರಿದ್ದಾರೆ? ನೀವು ನಿತ್ಯಕ್ಕೂ ಕೋಪಿಷ್ಠರಾಗಿರದೆ ಸಂತುಷ್ಟರಾಗುವಿರಿ. ಮತ್ತೊಮ್ಮೆ ನಮಗೆ ದಯೆತೋರಿ. ನಮ್ಮ ಅಪರಾಧಗಳನ್ನು ಅಳಿಸಿಬಿಡಿ; ಅವನ್ನು ತುಳಿದು ಸಮುದ್ರದ ತಳಕ್ಕೆ ತಳ್ಳಿಬಿಡಿ. ಪುರಾತನ ಕಾಲದಲ್ಲಿ ನಮ್ಮ ಪಿತೃಗಳಿಗೆ ಪ್ರಮಾಣಮಾಡಿದಂತೆ ಯಕೋಬ ವಂಶದವರಿಗೆ ನಂಬಿಗಸ್ಥರಾಗಿರಿ. ಅಬ್ರಹಾಮನ ವಂಶದವರಿಗೆ ಪ್ರೀತಿಪರರಾಗಿರಿ.

_ಪ್ರಭುವಿನ ವಾಕ್ಯ_
_ದೇವರಿಗೆ ಕೃತಜ್ಞತೆ ಸಲ್ಲಲಿ_

*ಕೀರ್ತನೆ*
_85:1-7, v.7_
_ಶ್ಲೋಕ: ತೋರಿಸೆಮಗೆ ಪ್ರಭೂ, ಕರುಣೆಯನು_

1. ಪ್ರಭೂ, ತೋರಿಸಿದೆ ಕರುಣೆ ನಿನ್ನ ನಾಡಿಗೆ
ಮರಳಿಸಿದೆ ಸುಕ್ಷೇಮವನು ಯಕೋಬ್ಯರಿಗೆ
ಮನ್ನಿಸಿದೆ ನಿನ್ನ ಪ್ರಜೆಯ ದ್ರೋಹವನು
ಕ್ಷಮಿಸಿದೆ ನೀ ಅವರ ಪಾಪಗಳೆಲ್ಲವನು
ತೊರೆದುಬಿಟ್ಟೆ ಸ್ವಾಮೀ, ನಿನ್ನ ರೋಷವನು
ಆರಿಸಿಬಿಟ್ಟೆ ನಿನ್ನ ಕೋಪಾಗ್ನಿಯನು _ಶ್ಲೋಕ_

2. ಪುನಶ್ಚೇತಗೊಳಿಸೆಮ್ಮನು ದೇವಾ, ಉದ್ಧಾರಕಾ
ತೊರೆದುಬಿಡು ನಮ್ಮ ಬಗ್ಗೆ ನಿನಗಿರುವ ಸಿಟ್ಟು ಸಿಡುಕ
ಸದಾಕಾಲಕೂ ನಮ್ಮ ಮೇಲೆ ಸಿಟ್ಟಾಗಿರುವೆಯಾ?
ತಲಾತಲಾಂತರಗಳಿಗೂ ಕೋಪವನು ಬೆಳೆಸುವೆಯಾ? _ಶ್ಲೋಕ_

3. ನವ ಜೀವವನು ತುಂಬಿಸಲಾರೆಯಾ ನಮ್ಮಲ್ಲಿ?
ಆಗ ನಿನ್ನ ಜನರು ಆನಂದಿಸುವರು ನಿನ್ನಲಿ
ತೋರಿಸೆಮಗೆ ಪ್ರಭೂ, ಕರುಣೆಯನು
ಅನುಗ್ರಹಿಸೆಮಗೆ ರಕ್ಷಣೆಯನು _ಶ್ಲೋಕ_

*ಘೋಷಣೆ*
_ಕೀರ್ತನೆ 119:88_
_ಅಲ್ಲೆಲೂಯ, ಅಲ್ಲೆಲೂಯ._
ನಿನ್ನಚಲ ಪ್ರೀತಿಗನುಸಾರ ಚೈತನ್ಯಗೊಳಿಸೆನ್ನನು.
ಕೈಗೊಳ್ಳುವೆನಾಗ ನಿನ್ನ ಬಾಯುಸುರಿದ ಕಟ್ಟಳೆಗಳನು.
_ಅಲ್ಲೆಲೂಯ._

*ಶುಭಸಂದೇಶ*
_ಮತ್ತಾಯನು ಬರೆದ ಪವಿತ್ರ ಶುಭಸಂದೇಶ: 12:46-50_
_"ಯೇಸು ತಮ್ಮ ಶಿಷ್ಯರ ಕಡೆಗೆ ಕೈತೋರಿಸಿ 'ಇಗೋ ನೋಡು, ನನ್ನ ತಾಯಿ, ನನ್ನ ಸಹೋದರರು' ಎಂದರು."_

ಆ ಕಾಲದಲ್ಲಿ ಯೇಸು ತಮ್ಮನ್ನು ಸುತ್ತುವರಿದಿದ್ದ ಜನರಿಗೆ ಇನ್ನೂ ಬೋಧನೆ ಮಾಡುತ್ತಿದ್ದರು. ಆಗ ಅವರ ತಾಯಿ ಮತ್ತು ಸಹೋದರರು ಬಂದು ಅವರೊಡನೆ ಮಾತನಾಡ ಬಯಸಿ ಹೊರಗೆ ನಿಂತಿದ್ದರು.

"ನಿಮ್ಮ ತಾಯಿ ಮತ್ತು ಸಹೋದರರು ಹೊರಗೆ ನಿಂತಿದ್ದಾರೆ; ನಿಮ್ಮೊಡನೆ ಮಾತನಾಡಬೇಕೆಂದಿದ್ದಾರೆ," ಎಂದು ಒಬ್ಬನು ತಿಳಿಸಿದನು.

ಅದಕ್ಕೆ ಯೇಸು, "ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?" ಎನ್ನುತ್ತಾ, ತಮ್ಮ ಶಿಷ್ಯರ ಕಡೆಗೆ ಕೈ ತೋರಿಸಿ, "ಇಗೋ ನೋಡು, ನನ್ನ ತಾಯಿ; ನನ್ನ ಸಹೋದರರು; ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತವನ್ನು ಯಾರು ನೆರವೇರಿಸುತ್ತಾರೋ ಅವರೇ ನನಗೆ ಸಹೋದರ, ಸಹೋದರಿ ಮತ್ತು ತಾಯಿ," ಎಂದರು.

_ಪ್ರಭುವಿನ ಶುಭಸಂದೇಶ_
_ಕ್ರಿಸ್ತರೇ, ನಿಮಗೆ ಸ್ತುತಿ ಸಲ್ಲಲಿ_

_ಆಮೆನ್

1 week ago | [YT] | 24

Krista Dani

20-07-26*
ಜುಲೈ 20
ಸೋಮವಾರ

*ಪವಿತ್ರ ಬೈಬಲ್ ದಿನಚರಿ*
ಸಾಧಾರಣ ಕಾಲದ ಹದಿನಾರನೆಯ ವಾರ
ಪೂಜಾವಿಧಿ ವರ್ಷ: 2
ಕೀರ್ತನಾ ಮಂಜರಿ: ವಾರ 4
ಪೂಜಾವಸ್ತ್ರ: ಹಸಿರು

*ಸ್ಮರಣೆ:*
ಸಂತ ಅಪೋಲಿನಾರಿಸ್
(ಧರ್ಮಾಧ್ಯಕ್ಷ / ರಕ್ತಸಾಕ್ಷಿ)

---

*ದೈವಾಕ್ಯದ ವಿಧಿ*

*ಮೊದಲನೆಯ ವಾಚನ*
ಪ್ರವಾದಿ ಮೀಕನ ಗ್ರಂಥದಿಂದ: 6:1-4, 6-8_
"ನಿನಗೆ ಯಾವುದು ಒಳಿತೆಂದು ಸರ್ವೇಶ್ವರ ಈಗಾಗಲೇ ಸ್ಪಷ್ಟಪಡಿಸಿದ್ದಾರೆ."

ಸರ್ವೇಶ್ವರ ಹೇಳುವುದನ್ನು ಕೇಳಿರಿ: "ಎದ್ದೇಳು; ಬೆಟ್ಟಗಳ ಸಮ್ಮುಖದಲ್ಲಿ ನಿನ್ನ ವ್ಯಾಜ್ಯ ನಡೆಯಲಿ; ನಿನ್ನ ಧ್ವನಿ ಗುಡ್ಡಗಳಿಗೆ ಕೇಳಿಸಲಿ. ಬೆಟ್ಟಗಳೇ, ಸರ್ವೇಶ್ವರಸ್ವಾಮಿಯ ಆಪಾದನೆಯನ್ನು ಕೇಳಿರಿ. ಭೂಮಿಯ ಸ್ಥಿರವಾದ ಅಸ್ತಿಭಾರಗಳೇ, ಕಿವಿಗೊಡಿ. ಆ ಸ್ವಾಮಿಗೆ ತನ್ನ ಪ್ರಜೆಯ ಮೇಲೆ ವ್ಯಾಜ್ಯವಿದೆ; ಅವರು ಇಸ್ರಯೇಲಿನ ವಿರುದ್ಧ ವಾದಿಸುವುದನ್ನು ಗಮನಿಸಿರಿ."

ಸರ್ವೇಶ್ವರ ಇಂತೆನ್ನುತ್ತಾರೆ: "ನನ್ನ ಪ್ರಜೆಯೇ, ನಾನು ನಿನಗೇನು ಮಾಡಿದೆ? ಯಾವ ವಿಷಯದಲ್ಲಿ ನಿನಗೆ ಬೇಸರವನ್ನುಂಟುಮಾಡಿದೆ? ಪ್ರಮಾಣವಾಗಿ ಹೇಳು. ಈಜಿಪ್ಟ್ ದೇಶದಿಂದ ನಾನು ನಿನ್ನನ್ನು ಕರೆತಂದೆ; ದಾಸತ್ವದ ಬಂಧನದಿಂದ ನಿನ್ನನ್ನು ಬಿಡುಗಡೆ ಮಾಡಿದೆ. ನಿನಗೆ ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ನಾಯಕರನ್ನಾಗಿ ಕಳುಹಿಸಿದೆ."

"ನಾನು ಸರ್ವೇಶ್ವರಸ್ವಾಮಿಯ ಸನ್ನಿಧಿಗೆ ಯಾವ ಕಾಣಿಕೆಯೊಂದಿಗೆ ಹೋಗಲಿ? ಮಹೋನ್ನತ ದೇವರಿಗೆ ಹೇಗೆ ಅಡ್ಡಬೀಳಲಿ? ಹೋಮಕ್ಕಾಗಿ ಒಂದು ವರ್ಷದ ಎಳೆಕರುಗಳನ್ನು ತೆಗೆದುಕೊಂಡು ಹೋಗಲೇ? ಸಾವಿರಾರು ಟಗರುಗಳನ್ನೂ ಧಾರಾಕಾರವಾಗಿ ಹರಿಯುವ ತೈಲ ಪ್ರವಾಹಗಳನ್ನೂ ನೋಡಿ ಸರ್ವೇಶ್ವರ ಮೆಚ್ಚುವುದುಂಟೇ? ನಾನು ಮಾಡಿದ ದ್ರೋಹಕ್ಕಾಗಿ ನನ್ನ ಚೊಚ್ಚಲು ಮಗನನ್ನೇ ಅರ್ಪಿಸಲೇ? ನನ್ನ ಪಾಪಕ್ಕಾಗಿ ನನ್ನ ಕರುಳ ಕುಡಿಯನ್ನೇ ಬಲಿಕೊಡಲೇ?"

ಇಲ್ಲ ಮನುಜಾ, ನಿನಗೆ ಯಾವುದು ಒಳಿತೆಂದು ಸರ್ವೇಶ್ವರ ಈಗಾಗಲೇ ಸ್ಪಷ್ಟಪಡಿಸಿದ್ದಾರೆ: ನ್ಯಾಯನೀತಿಯ ನಡವಳಿಕೆ, ಕರುಣೆಯಲ್ಲಿ ಅಚಲ ಆಸಕ್ತಿ, ದೇವರ ಮುಂದೆ ನಮ್ರತೆ, ಇಷ್ಟನ್ನೇ ಆ ಸ್ವಾಮಿ ನಿನ್ನಿಂದ ಅಪೇಕ್ಷಿಸುವುದು.

_ಪ್ರಭುವಿನ ವಾಕ್ಯ_
_ದೇವರಿಗೆ ಕೃತಜ್ಞತೆ ಸಲ್ಲಲಿ_

*ಕೀರ್ತನೆ*
50:5-6, 8-9, 16-17, 21-23, v.23

ಶ್ಲೋಕ: ಸನ್ಮಾರ್ಗಿಗೆ ತೋರುವೆ ಪರಮ ಜೀವೋದ್ಧಾರವನು_

1. ಬಲಿ ಮೂಲಕ ಒಡಂಬಡಿಕೆಗೈದ ಭಕ್ತರನು
ಸಭೆ ಸೇರಿಸಿ ಇಲ್ಲೆನ್ನ ಮುಂದೆ ಎನ್ನುತಿಹನು
ದೇವನೇ ಸತ್ಯಸ್ವರೂಪಿ, ನ್ಯಾಯಾಧಿಪತಿ
ಇದನು ಸಾರಿ ಹೇಳಲಿ ಆಕಾಶ ಪ್ರಕೃತಿ _ಶ್ಲೋಕ_

2. ನಿನ್ನ ಬಲಿಯರ್ಪಣೆಯನು ನಾ ತಪ್ಪಣಿಸುತ್ತಿಲ್ಲ
ನನ್ನ ಮುಂದಿದೆ ಸತ ದಹನಬಲಿಗಳೆಲ್ಲ
ನಾ ಕೋರುವುದು ನಿನ್ನ ಮನೆಯ ಹೋರಿಗಳನಲ್ಲ
ನಾ ಬಯಸುವುದು ನಿನ್ನ ಮಂದೆಯ ಹೋತಗಳನಲ್ಲ _ಶ್ಲೋಕ_

3. ದುರ್ಜನರಿಗೆ ದೇವ ಹೇಳುವನು ಇಂತೆಂದು
ನನ್ನ ವಿಧಿಗಳ ಪಠಿಸುವ ಹಕ್ಕು ನಿಮಗೆಂತು?
ನನ್ನ ನಿಬಂಧನೆಗಳ ನೀವು ಜಪಿಸುವುದೆಂತು?
ನನ್ನ ಮಾತುಗಳನು ನೀವು ತಾತ್ಸಾರ ಮಾಡುತ್ತೀರಿ
ನನ್ನ ತಿದ್ದುಪಾಟುಗಳನು ನೀವು ಧಿಕ್ಕರಿಸುತ್ತೀರಿ _ಶ್ಲೋಕ_

4. ನೀವಿದನ್ನೆಲ್ಲ ಮಾಡಿದರೂ ನಾ ಮೌನಿಯೆನ್ನುವಿರಾ?
ನಾ ಕೂಡ ನಿಮ್ಮಂಥವನು ಎಂದುಕೊಂಡಿರಾ?
ಧನ್ಯವಾದದ ಬಲಿಯನರ್ಪಿಸುವವನೇ ನನಗೆ ಸನ್ಮಾನಿತನು
ಸನ್ಮಾರ್ಗ ಹಿಡಿದವನಿಗೆ ತೋರುವೆ ಪರಮ ಜೀವೋದ್ಧಾರವನು _ಶ್ಲೋಕ_

*ಘೋಷಣೆ*
_ಕೀರ್ತನೆ 119:36, 29_
_ಅಲ್ಲೆಲೂಯ, ಅಲ್ಲೆಲೂಯ._
ನಿನ್ನ ಕಟ್ಟಳೆಯ ಕಡೆ ಎನ್ನ ಮನ ತಿರುಗಿಸಯ್ಯಾ.
ಧರ್ಮಶಾಸ್ತ್ರವನ್ನು ಎನಗೆ ಅನುಗ್ರಹಿಸಯ್ಯಾ.
_ಅಲ್ಲೆಲೂಯ._

*ಶುಭಸಂದೇಶ*
_ಮತ್ತಾಯನು ಬರೆದ ಪವಿತ್ರ ಶುಭಸಂದೇಶ: 12:38-42_
_"ತೀರ್ಪಿನ ದಿನ ದಕ್ಷಿಣದೇಶದ ರಾಣಿ ಈ ಪೀಳಿಗೆಗೆ ಎದುರಾಗಿ ನಿಂತು ಇವರನ್ನು ಅಪರಾಧಿಗಳೆಂದು ಖಂಡಿಸುವಳು."_

ಆ ಕಾಲದಲ್ಲಿ ಕೆಲವು ಮಂದಿ ಧರ್ಮಶಾಸ್ತ್ರಿಗಳೂ ಫರಿಸಾಯರೂ ಯೇಸುವನ್ನು ಉದ್ದೇಶಿಸಿ, "ಬೋಧಕರೇ, ನೀವು ಒಂದು ಸೂಚಕಕಾರ್ಯ ಮಾಡುವುದನ್ನು ನೋಡಬೇಕೆಂದಿದ್ದೇವೆ," ಎಂದರು.

ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಇಂತೆಂದರು: "ಈ ಕೆಟ್ಟ ಹಾಗೂ ದೈವಭ್ರಷ್ಟ ಪೀಳಿಗೆ ಸೂಚಕಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು. ಯೋನನು ಮೂರು ದಿನ ಹಗಲು ರಾತ್ರಿ ದೊಡ್ಡ ಮೀನಿನ ಉದರದಲ್ಲಿದ್ದನು. ಅದರಂತೆಯೇ ನರಪುತ್ರನು ಮೂರು ದಿನ ಹಗಲು ರಾತ್ರಿ ಭೂಗರ್ಭದಲ್ಲಿರುವನು.

ತೀರ್ಪಿನ ದಿನ ನಿನಿವೆ ನಗರದವರು ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿಯೆಂದು ಖಂಡಿಸುವರು. ಏಕೆಂದರೆ ಪ್ರವಾದಿ ಯೋನನ ಬೋಧನೆಯನ್ನು ಕೇಳಿ ಅವರು ಪಾಪಕ್ಕೆ ವಿಮುಖರಾದರು. ಆದರೆ ಪ್ರವಾದಿ ಯೋನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.

ಅದೇ ತೀರ್ಪಿನ ದಿನ ದಕ್ಷಿಣ ದೇಶದ ರಾಣಿ ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿಯೆಂದು ಖಂಡಿಸುವಳು. ಆಕೆ ಸೊಲೊಮೋನ ಜ್ಞಾನೋಕ್ತಿಗಳನ್ನು ಕೇಳುವುದಕ್ಕೂ ದೂರ ದೇಶದಿಂದ ಬಂದಳು. ಆದರೆ ಸೊಲೊಮೋನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ."

ಪ್ರಭುವಿನ ಶುಭಸಂದೇಶ
ಕ್ರಿಸ್ತರೇ ನಿಮಗೆ ಸ್ತುತಿ ಸಲ್ಲಲಿ

ಆಮೆನ್

1 week ago | [YT] | 16

Krista Dani

19-07-26
ಜುಲೈ 19
ಭಾನುವಾರ

*ಪವಿತ್ರ ಬೈಬಲ್ ದಿನಚರಿ*
ಸಾಧಾರಣ ಕಾಲದ ಹದಿನಾರನೆಯ ವಾರ
ಪೂಜಾವಿಧಿ ವರ್ಷ: 2
ಕೀರ್ತನಾ ಮಂಜರಿ: ವಾರ 4
ಪೂಜಾವಸ್ತ್ರ: ಹಸಿರು

*ಸ್ಮರಣೆ:*
ಸಂತರುಗಳಾದ ಜಸ್ಟ ಮತ್ತು ರುಫೀನಾ
ಮಹಾ ಸಂತ ಅರ್ಸೆನಿಯುಸ್

---

*ದೈವಾಕ್ಯದ ವಿಧಿ*
_"ಶಕ್ತಿಶಾಲಿ ಪ್ರಬುದ್ಧ ವ್ಯಕ್ತಿಯ ಗುಣ ಸಹಣೆ"_

*ಮೊದಲನೆಯ ವಾಚನ*
_ಸುಜ್ಞಾನ ಗ್ರಂಥದಿಂದ: 12:13, 16-19_
_"ಪಾಪಗಳಿಗೆ ಪಶ್ಚಾತ್ತಾಪದ ಅವಕಾಶವಿತ್ತು ನಿಮ್ಮ ಮಕ್ಕಳನ್ನು ಭರವಸೆಯುಳ್ಳವರಾಗಿಸಿದಿರಿ"_

ಸರ್ವಜನರ ಸುಖ ಕೋರುವ ದೇವರು ನೀವಲ್ಲದೆ ಇನ್ನಾರೂ ಇಲ್ಲ.
ನೀವು ವಿಧಿಸಿದ ದಂಡನೆ ಅನ್ಯಾಯವಲ್ಲ ಎಂದು ನೀವು ತೋರಿಸಬೇಕಾಗಿಲ್ಲ. ನಿಮ್ಮ ಶಕ್ತಿಯೇ ನ್ಯಾಯನೀತಿಗೆ ಆಧಾರ, ನಿಮ್ಮ ಸಾರ್ವಭೌಮತ್ವವೇ ಎಲ್ಲ ಸಹನೆಗೆ ಮೂಲ ಕಾರಣ.
ನೀವು ಸರ್ವಶಕ್ತರೆಂದು ಜನರು ನಂಬದಿರುವಾಗ ನೀವು ಶಕ್ತಿಯನ್ನು ತೋರಿಸುತ್ತೀರಿ;
ಅದನ್ನು ಬಲ್ಲವರೊಂದಿಗೆ ವರ್ತಿಸುವಾಗ ಅವರ ಉದ್ಧಟತನವನ್ನು ಖಂಡಿಸುತ್ತೀರಿ.
ಶಕ್ತಿಯಲ್ಲಿ ನೀವೇ ಸಾರ್ವಭೌಮರು. ಎಂದೇ, ತೀರ್ಪಿಡುತ್ತೀರಿ ಸೌಮ್ಯತೆಯಿಂದ
ನಮ್ಮನ್ನಾಳುತ್ತೀರಿ ಬಹು ತಾಳ್ಮೆಯಿಂದ; ನಿಮ್ಮ ಶಕ್ತಿ ನಿಮ್ಮಲ್ಲಿದೆ ಇಚ್ಛಿಸಿದಾಗಲೆಲ್ಲ.
ಇಂಥ ಕಾರ್ಯಗಳಿಂದ ಸಜ್ಜನನು ಜನಪ್ರಿಯನಾಗಿರಲು ಕಲಿಸಿಕೊಟ್ಟಿರುವಿರಿ.
ಪಾಪಗಳಿಗೆ ಪಶ್ಚಾತ್ತಾಪದ ಅವಕಾಶವಿತ್ತು ನಿಮ್ಮ ಮಕ್ಕಳನ್ನು ಭರವಸೆಯುಳ್ಳವರಾಗಿಸಿದಿರಿ.

_ಪ್ರಭುವಿನ ವಾಕ್ಯ_
_ದೇವರಿಗೆ ಕೃತಜ್ಞತೆ ಸಲ್ಲಲಿ_

*ಕೀರ್ತನೆ*
_86:5-6, 9-10, 15-16. v.5_
_ಶ್ಲೋಕ: ಪ್ರಭೂ, ನೀನು ದಯಾವಂತನು, ಕ್ಷಮಿಸುವವನು_

1. ಪ್ರಭೂ, ನೀನು ದಯಾವಂತನು, ಕ್ಷಮಿಸುವವನು
ಮೊರೆಯಿಡುವವರಿಗೆ ನೀನು ಕೃಪಾಪೂರ್ಣನು
ಕಿವಿಗೊಡು ಪ್ರಭೂ, ನನ್ನ ಪ್ರಾರ್ಥನೆಗೆ
ನನ್ನ ವಿಜ್ಞಾಪನೆಗಳ ಕೋರಿಕೆಗೆ _ಶ್ಲೋಕ_

2. ಬರುವುವು ನೀನು ಉಂಟುಮಾಡಿದ ಸಕಲ ಜನಾಂಗಗಳು
ನಿನ್ನ ನಾಮವನ್ನು ಘನಪಡಿಸಲು, ನಿನಗೆ ಅಡ್ಡಬೀಳಲು
ಪ್ರಭೂ, ನೀನೊಬ್ಬನೇ ದೇವನು
ಅದ್ಬುತಶಾಲಿ, ಮಹೋನ್ನತನು _ಶ್ಲೋಕ_

3. ಪ್ರಭೂ, ನೀ ದಯಾಳು; ದೇವಾ, ನೀ ಕರುಣಾಮೂರ್ತಿ
ಸಹನಶೀಲನು, ಸತ್ಯಸ್ವರೂಪಿ, ಪ್ರೇಮಮೂರ್ತಿ
ಕಟಾಕ್ಷವಿಟ್ಟು ಕರುಣಿಸೆನ್ನನು _ಶ್ಲೋಕ_

*ಎರಡನೆಯ ವಾಚನ*
_ಪೌಲನು ರೋಮನರಿಗೆ ಬರೆದ ಪತ್ರದಿಂದ: 8:26-27_
_"ಪವಿತ್ರಾತ್ಮರೇ ನಮ್ಮ ಪರವಾಗಿ ದೇವರಲ್ಲಿ ವಿಜ್ಞಾಪಿಸುತ್ತಾರೆ"_

ಸಹೋದರರೇ, ಪವಿತ್ರಾತ್ಮರು ಸಹ ನಮ್ಮ ದೌರ್ಬಲ್ಯದಲ್ಲಿ ನೆರವು ನೀಡುತ್ತಾರೆ. ಹೇಗೆ ಪ್ರಾರ್ಥಿಸಬೇಕು, ಯಾವುದಕ್ಕಾಗಿ ಪ್ರಾರ್ಥಿಸಬೇಕು ಎಂಬುದನ್ನು ನಾವು ತಿಳಿಯದವರು. ಪವಿತ್ರಾತ್ಮರೇ ಮಾತಿಗೆಟುಕದ ರೀತಿಯಲ್ಲಿ ಆತ್ಮಧ್ವನಿಯಿಂದ ನಮ್ಮ ಪರವಾಗಿ ದೇವರಲ್ಲಿ ವಿಜ್ಞಾಪಿಸುತ್ತಾರೆ. ಅಂತರಂಗಗಳನ್ನು ಈಕ್ಷಿಸುವ ದೇವರು ಪವಿತ್ರಾತ್ಮರ ಇಂಗೀತವೇನೆಂದು ಬಲ್ಲರು. ಏಕೆಂದರೆ, ದೇವರ ಚಿತ್ತದ ಪ್ರಕಾರವೇ ಪವಿತ್ರಾತ್ಮರು ದೇವಜನರಿಗಾಗಿ ಭಿನ್ನವಿಸುತ್ತಾರೆ.

_ಪ್ರಭುವಿನ ವಾಕ್ಯ_
_ದೇವರಿಗೆ ಕೃತಜ್ಞತೆ ಸಲ್ಲಲಿ_

*ಘೋಷಣೆ*
_1ಸಮು. 3:9, ಯೊಹಾ.6:68_
_ಅಲ್ಲೆಲೂಯ, ಅಲ್ಲೆಲೂಯ._
ಸರ್ವೇಶ್ವರಾ, ಅಪ್ಪಣೆಯಾಗಲಿ; ತಮ್ಮ ದಾಸ ಕಾದಿದ್ದಾನೆ.
ನಿತ್ಯ ಜೀವವನ್ನೀಯುವ ನುಡಿ ಇರುವುದು ತಮ್ಮಲ್ಲೇ.
_ಅಲ್ಲೆಲೂಯ._

*ಶುಭಸಂದೇಶ*
_ಮತ್ತಾಯನು ಬರೆದ ಪವಿತ್ರ ಶುಭಸಂದೇಶ: 13:24-43_
_"ಸುಗ್ಗಿಯವರೆಗೆ ಎರಡೂ ಒಟ್ಟಿಗೆ ಬೆಳೆಯಲಿ"_

ಆ ಕಾಲದಲ್ಲಿ ಯೇಸು ಜನರಿಗೆ ಈ ಸಾಮತಿಯನ್ನು ಹೇಳಿದರು: "ಸ್ವರ್ಗಸಾಮ್ರಾಜ್ಯವು ತನ್ನ ಹೊಲದಲ್ಲಿ ಒಳ್ಳೆಯ ಗೋದಿಯನ್ನು ಬಿತ್ತಿದ ರೈತನನ್ನು ಹೋಲುತ್ತದೆ. ಒಂದು ರಾತ್ರಿ ಎಲ್ಲರೂ ನಿದ್ರಿಸುತ್ತಿರುವಾಗ, ಅವನ ವೈರಿ ಬಂದು ಗೋದಿಯ ನಡುವೆ ಕಳೆಗಳನ್ನು ಬಿತ್ತಿ ಹೋದ. ಗೋದಿ ಬೆಳೆದು ತೆನೆಬಿಟ್ಟಾಗ ಕಳೆ ಬೆಳೆದಿರುವುದೂ ಗೋಚರವಾಯಿತು.

ಆಗ ಆಳುಗಳು ತಮ್ಮ ಯಜಮಾನನ ಬಳಿಗೆ ಬಂದು, 'ಸ್ವಾಮಿ, ನಿಮ್ಮ ಹೊಲದಲ್ಲಿ ಬಿತ್ತಿದ್ದು ಉತ್ತಮವಾದ ಗೋದಿ ಅಲ್ಲವೆ? ಜೊತೆಗೆ ಕಳೆಯೂ ಕಾಣಿಸಿಕೊಂಡಿದೆಯಲ್ಲಾ, ಅದೆಲ್ಲಿಂದ ಬಂತು?' ಎಂದರು.
ಯಜಮಾನ, ‘ಇದು ನನ್ನ ವೈರಿ ಮಾಡಿರುವ ಕೆಲಸ,’ ಎಂದ.
‘ಹಾಗಾದರೆ, ಕಳೆಯನ್ನು ಕಿತ್ತು ಹಾಕೋಣವೇ?’ ಎಂದರು ಆಳುಗಳು.
ಅದಕ್ಕೆ ಯಜಮಾನ ‘ಬೇಡ, ಬೇಡ; ಕಳೆಯನ್ನು ಕೀಳುವಾಗ, ಗೋದಿಯನ್ನೂ ಕಿತ್ತು ಬಿಟ್ಟೀರಿ. ಸುಗ್ಗಿಯವರೆಗೆ ಎರಡೂ ಒಟ್ಟಿಗೆ ಬೆಳೆಯಲಿ; ಸುಗ್ಗಿಯ ಕಾಲದಲ್ಲಿ ಮೊದಲು ಕಳೆ ಕಿತ್ತು, ಸುಟ್ಟು ಹಾಕಲು ಕಟ್ಟಿಡಿ; ಬಳಿಕ ಗೋದಿಯನ್ನು ಒಕ್ಕಣೆಮಾಡಿ ನನ್ನ ಕಣಜಕ್ಕೆ ತುಂಬಿರಿ, ಎಂದು ಕೊಯ್ಲುಗಾರರಿಗೆ ಹೇಳುತ್ತೇನೆ,’ ಎಂದ."

ಯೇಸುಸ್ವಾಮಿ ಇನ್ನೊಂದು ಸಾಮತಿಯನ್ನು ಹೇಳಿದರು: "ಸ್ವರ್ಗಸಾಮ್ರಾಜ್ಯ ಒಂದು ಸಾಸಿವೆ ಕಾಳನ್ನು ಹೋಲುತ್ತದೆ. ಈ ಕಾಳನ್ನು ತೆಗೆದುಕೊಂಡುಹೋಗಿ ರೈತ ತನ್ನ ಹೊಲದಲ್ಲಿ ಬಿತ್ತಿದ. ಕಾಳುಗಳಲ್ಲಿ ಅತಿ ಸಣ್ಣದಾದ ಇದನ್ನು ಬಿತ್ತಿದಾಗ ಎಲ್ಲ ಸಸ್ಯಗಳಿಗಿಂತಲೂ ದೊಡ್ಡದಾಗಿ ಬೆಳೆದು ಮರವಾಗುತ್ತದೆ. ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಬಂದು ಇದರ ರೆಂಬೆಗಳಲ್ಲಿ ಗೂಡುಕಟ್ಟಿ ವಾಸಿಸುತ್ತವೆ."

ಯೇಸು ಮತ್ತೊಂದು ಸಾಮತಿಯನ್ನು ಜನರಿಗೆ ಹೇಳಿದರು: "ಸ್ವರ್ಗಸಾಮ್ರಾಜ್ಯ ಹುದುಗೆಬ್ಬಿಸುವ ಹುಳಿಯನ್ನು ಹೋಲುತ್ತದೆ. ಅದನ್ನು ಒಬ್ಬಾಕೆ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿದಳು. ಆ ಹಿಟ್ಟೆಲ್ಲಾ ಹುಳಿಯಾಯಿತು."

ಇದೆಲ್ಲವನ್ನೂ ಯೇಸುಸ್ವಾಮಿ ಜನರಿಗೆ ಸಾಮತಿಗಳ ರೂಪದಲ್ಲಿ ಹೇಳಿದರು. ಸಾಮತಿಗಳಿಲ್ಲದೆ ಅವರಿಗೆ ಏನನ್ನೂ ಬೋಧಿಸಲಿಲ್ಲ. “ಸಾಮತಿಗಳಲ್ಲೇ ಬೋಧಿಸುವೆನು; ಲೋಕಾದಿಯಿಂದ ರಹಸ್ಯವಾದವುಗಳನ್ನು ಬಯಲುಗೊಳಿಸುವೆನು" ಎಂದು ದೇವರು ಪ್ರವಾದಿಯ ಮುಖಾಂತರ ತಿಳಿಸಿದ್ದ ಪ್ರವಚನವನ್ನು ಯೇಸು ಹೀಗೆ ನೆರವೇರಿಸಿದರು.

ಯೇಸು ಜನರನ್ನು ಬೀಳ್ಕೊಟ್ಟು ಮನೆಗೆ ಬಂದರು. ಶಿಷ್ಯರು ಅವರ ಬಳಿಗೆ ಬಂದು, "ಹೊಲದಲ್ಲಿ ಬಿತ್ತಲಾದ ಕಳೆಗಳ ಸಾಮತಿಯನ್ನು ನಮಗೆ ವಿವರಿಸಿರಿ," ಎಂದು ಕೇಳಿಕೊಂಡರು.
ಅದಕ್ಕೆ ಯೇಸು, "ಒಳ್ಳೆಯ ಗೋದಿಯನ್ನು ಬಿತ್ತುವವನು ಎಂದರೆ ನರಪುತ್ರನು; ಹೊಲವೇ ಈ ಲೋಕ; ಒಳ್ಳೆಯ ಕಾಳುಗಳೇ ಶ್ರೀಸಾಮ್ರಾಜ್ಯದ ಮಕ್ಕಳು; ಕಳೆಗಳೇ ಕೇಡಿಗನ ಮಕ್ಕಳು. ಆ ಕಳೆಗಳನ್ನು ಬಿತ್ತಿದ ವೈರಿಯೇ ಪಿಶಾಚಿ. ಸುಗ್ಗಿಯೇ ಕಾಲಾಂತ್ಯ, ಕೊಯ್ಲುಗಾರರೇ ದೇವದೂತರು. ಕಳೆಗಳನ್ನು ಕಿತ್ತು ಬೆಂಕಿಯಲ್ಲಿ ಸುಟ್ಟು ಹಾಕಿದಂತೆ ಕಾಲಾಂತ್ಯದಲ್ಲೂ ನಡೆಯುವುದು. ನರಪುತ್ರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದಿಂದ ಪಾಪಕ್ಕೆ ಕಾರಣವಾದುದೆಲ್ಲವನ್ನೂ ಮತ್ತು ದುಷ್ಕರ್ಮಿಗಳೆಲ್ಲರನ್ನೂ ಒಟ್ಟುಗೂಡಿಸಿ ಅಗ್ನಿಕುಂಡದಲ್ಲಿ ಹಾಕುವರು; ಅಲ್ಲಿ ಅವರು ಕಟಕಟನೆ ಹಲ್ಲು ಕಡಿದುಕೊಂಡು ಗೋಳಾಡುವರು. ಸದ್ದರ್ಮಿಗಳು ತಮ್ಮ ತಂದೆಯ ಸಾಮ್ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕಿವಿಯುಳ್ಳವನು ಕೇಳಿಸಿಕೊಳ್ಳಲಿ!" ಎಂದರು.

_ಪ್ರಭುವಿನ ಶುಭಸಂದೇಶ_
_ಕ್ರಿಸ್ತರೇ ನಿಮಗೆ ಸ್ತುತಿ ಸಲ್ಲಲಿ_

ಆಮೆನ್

1 week ago | [YT] | 24